ನವದೆಹಲಿ:
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 25-26 ರ ಬಜೆಟ್ ಮಂಡಿಸಿದ್ದಾರೆ. ಬಜೆಟ್ನಲ್ಲಿ ಅಭಿವೃದ್ದಿಗೆ ಒತ್ತು ನೀಡಲಾಗಿದ್ದು, ಕೇಂದ್ರ ಸರ್ಕಾರವು ರಾಜ್ಯಗಳ ಸಹಭಾಗಿತ್ವದಲ್ಲಿ ಟಾಪ್ 50 ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ದೇಶದ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸಲು ವಿಷೇಶ ಅನುದಾನ ನೀಡಲಾಗುವುದು. ಭಗವಾನ್ ಬುದ್ಧನ ಜೀವನ ಮತ್ತು ಅವರಿಗೆ ಸಂಬಂಧಪಟ್ಟ ವಿಷಯಕ್ಕೆ ಸಂಬಂಧಿಸಿದ ಸ್ಥಳಗಳಿಗೆ ಸರ್ಕಾರವು ವಿಶೇಷ ಗಮನ ನೀಡುತ್ತದೆ ಎಂದು ಅವರು ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ಹೋಂಸ್ಟೇಗಳಿಗೆ ಮುದ್ರಾ ಯೋಜನೆಯ ಅಡಿಯಲ್ಲಿ ಸಾಲ ನೀಡಲಾಗುವುದು ಎಂದು ವಿತ್ತ ಸಚಿವೆ ತಿಳಿಸಿದ್ದಾರೆ.
ಈ ಹೆಜ್ಜೆಯು ಪ್ರವಾಸೋದ್ಯಮ ಮತ್ತು ಆತಿಥ್ಯ ವಲಯದಲ್ಲಿ ವಿಶೇಷವಾಗಿ ಸಣ್ಣ ಪಟ್ಟಣಗಳು ಮತ್ತು ಹಳ್ಳಿಗಳಲ್ಲಿ ಉದ್ಯೋಗವನ್ನು ಹೆಚ್ಚಿಸುವ ಸಾಧ್ಯತೆಯಿದೆ.ದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಪ್ರಯತ್ನಗಳ ಭಾಗವಾಗಿ ಖಾಸಗಿ ವಲಯದ ಸಹಭಾಗಿತ್ವದಲ್ಲಿ ವೈದ್ಯಕೀಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು ಎಂದು ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ.
ಪಶ್ಚಿಮ ಕೋಸಿ ಕಾಲುವೆಗೆ ಆರ್ಥಿಕ ನೆರವು ನೀಡಲಾಗುವುದು. ಇದರಿಂದ ಬಿಹಾರದ ಮಿಥಿಲಾಂಚಲ್ ಪ್ರದೇಶದಲ್ಲಿ 50,000 ಹೆಕ್ಟೇರ್ಗೆ ಲಾಭವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
