ಕೋಲ್ಕತ್ತಾ:
ಮುಂದಿನ ಏಳು ದಿನಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬರಲಿದೆ ಎಂದು ಕೇಂದ್ರ ಸಚಿವ ಶಾಂತನು ಠಾಕೂರ್ ತಿಳಿಸಿದ್ದಾರೆ
ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯ ಕಾಕ್ದ್ವಿಪ್ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಮುಂದಿನ ಏಳು ದಿನಗಳಲ್ಲಿ ಸಿಎಎ ಕಾಯ್ದೆ ದೇಶಾದ್ಯಂತ ಅನುಷ್ಠಾನಕ್ಕೆ ಬರಲಿದೆ ಎಂದು ಹೇಳುವ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನ ಪುನರುಚ್ಚರಿಸಿದ್ದಾರೆ.
ಕಳೆದ ವರ್ಷ ಡಿಸೆಂಬರ್ನಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಿಎಎ ಕಾಯ್ದೆಯನ್ನು ಅನುಷ್ಟಾನಕ್ಕೆ ತರಲಿದೆ. ಅದನ್ನ ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಅಮಿತ್ ಶಾ ಹೇಳಿದ್ದರು. ಇದಕ್ಕೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆಕ್ಷೇಪ ವ್ಯಕ್ತಪಡಿಸಿದ್ದರು.
2019ರಲ್ಲಿ ‘ಸಿಎಎ’ ವಿಧೇಯಕವನ್ನು ಸಂಸತ್ತು ಅನುಮೋದಿಸಿತ್ತು. ರಾಷ್ಟ್ರಪತಿಗಳ ಅಂಕಿತ ಬಿದ್ದ ನಂತರ ಪ್ರತಿಪಕ್ಷಗಳ ನೇತೃತ್ವದಲ್ಲಿ ದೇಶಾದ್ಯಂತ ಭಾರಿ ಪ್ರತಿಭಟನೆಗಳು ನಡೆದಿದ್ದವು. ಈ ಕಾಯಿದೆಯು ತಾರತಮ್ಯ ನೀತಿಯಿಂದ ಕೂಡಿದ್ದು, ಇದನ್ನು ವಾಪಾಸ್ ಪಡೆಯಬೇಕು ಮುಸ್ಲಿಂ ಸಮುದಾಯ ಹಾಗೂ ಪ್ರತಿಪಕ್ಷಗಳಿಂದ ದೊಡ್ಡ ಪ್ರಮಾಣದ ಪ್ರತಿಭಟನೆಗಳು ವ್ಯಕ್ತವಾಗಿದ್ದವು. ಗಲಭೆಗಳಲ್ಲಿ ದೇಶದ ವಿವಿಧೆಡೆ 100ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ
