ನಂದಿ ಬೆಟ್ಟದಲ್ಲಿ ನಿಗದಿಯಾಗಿದ್ದ ಸಚಿವ ಸಂಪುಟ ಸಭೆ ದಿಢೀರ್‌ ರದ್ದು

ಬೆಂಗಳೂರು: 

   ನಂದಿ ಬೆಟ್ಟದಲ್ಲಿ ಜೂನ್‌ 19ರಂದು ನಿಗದಿಯಾಗಿದ್ದ ಸಚಿವ ಸಂಪುಟ ಸಭೆ ದಿಢೀರ್ ರದ್ದಾಗಿದೆ. ನಂದಿ‌ ಬೆಟ್ಟದ ಬದಲು ಬೆಂಗಳೂರಿನ ವಿಧಾನಸೌಧದಲ್ಲೇ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿದೆ. ಈ ಸಂಬಂಧ ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿ ಆರ್‌.ಚಂದ್ರಶೇಖರ್‌ ಸೂಚನಾ ಪತ್ರ ಹೊರಡಿಸಿದ್ದಾರೆ.

   ಸಚಿವ ಸಂಪುಟದ 2025ನೇ ಸಾಲಿನ 13ನೇ ಸಭೆಯ ಸ್ಥಳ ಬದಲಾವಣೆ ಬಗ್ಗೆ ಸೂಚನಾ ಪತ್ರ ಹೊರಡಿಸಲಾಗಿದೆ. ಜೂನ್ 19ರಂದು ಗುರುವಾರ ಮಧ್ಯಾಹ್ನ 12 ಗಂಟೆಗೆ ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ, ಸಚಿವ ಸಂಪುಟ ಸಭೆಯನ್ನು ಬೆಂಗಳೂರಿನ ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರಕ್ಕೆ ಸ್ಥಳಾಂತರಿಸಲಾಗಿದೆ. ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದು ಸಚಿವರು ಹಾಗೂ ಅಧಿಕಾರಿಗಳಿಗೆ ತಿಳಿಸಲಾಗಿದೆ. 

   ರೈತರ ಪ್ರತಿಭಟನೆ ಹಾಗೂ ಶಾಸಕರ ಅನುದಾನದ ಬೇಡಿಕೆ ಮುಂದಿಟ್ಟ ಹಿನ್ನೆಲೆಯಲ್ಲಿ ನಂದಿ ಬೆಟ್ಟದ ಮೇಲೆ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ರದ್ದು ಮಾಡಲಾಗಿದೆ. ಕೋಲಾರ ಜಿಲ್ಲೆಯಲ್ಲಿ ಮಾವಿಗೆ ಬೆಂಬಲ ಬೆಲೆ ಘೋಷಣೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಭೂಸ್ವಾಧೀನ ಕೈಬಿಡುವಂತೆ ರೈತರು ಪ್ರತಿಭಟನೆ ನಡೆಸುತ್ತಿದ್ದು, ಸಂಪುಟ ಸಭೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಕಾರಣ ಕೊನೆ ಕ್ಷಣದಲ್ಲಿ ಸ್ಥಳ ಬದಲಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

   ಬಯಲು ಸೀಮೆ ಜಿಲ್ಲೆ ಚಿಕ್ಕಬಳ್ಳಾಪುರದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ಸಂಪುಟ ಸಭೆಯಲ್ಲಿ ಸ್ಥಳೀಯ ಸಮಸ್ಯೆಗಳ ಬಗ್ಗೆ ಮಾತ್ರ ಚರ್ಚೆ ನಡೆಸಬೇಕು. ಇಲ್ಲದಿದ್ದರೆ ಸಂಪುಟ ಸಭೆ ನಡೆಸುವುದೇ ಬೇಡ ಎಂದು ರೈತ ಮುಖಂಡರು ಆಕ್ರೋಶ ಹೊರಹಾಕಿದ್ದರು. ಹೀಗಾಗಿ ಕೊನೆಯ ಕ್ಷಣದಲ್ಲಿ ಸಚಿವ ಸಂಪುಟ ಸಭೆ ಸ್ಥಳ ಬದಲಾವಣೆ ಆಗಿದೆ.

Recent Articles

spot_img

Related Stories

Share via
Copy link