ಚಳಿಗಾಲ ಅಧಿವೇಶನ: ಯಾವುದೇ ಅನಾನುಕೂಲವಾಗದಂತೆ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಸತೀಶ್ ಜಾರಕಿಹೊಳಿ ಸೂಚನೆ

ಬೆಳಗಾವಿ:

    ಡಿಸೆಂಬರ್ 9 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಅಧಿವೇಶದಲ್ಲಿ ಯಾವುದೇ ಅನಾನುಕೂಲಗಳಾಗಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಲೋಕೋಪಯೋಗಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಸೂಚನೆ ನೀಡಿದರು.

   ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ, ವಸತಿ, ಸಾರಿಗೆ, ಆಹಾರ ಮತ್ತು ಇತರ ಸೌಲಭ್ಯಗಳಲ್ಲಿ ಯಾವುದೇ ಅನಾನುಕೂಲಗಳಾದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

   ಊಟೋಪಹಾರ ಕಲ್ಪಿಸುವವರಿಗೆ ಮುಂಚಿತವಾಗಿಯೇ ಆದೇಶ ನೀಡುವ ಮೂಲಕ ಉತ್ತಮ ವ್ಯವಸ್ಥೆಯನ್ನು ಖಚಿತಪಡಿಸಬೇಕು. ಇದರೊಂದಿಗೆ ತುರ್ತು ಚಿಕಿತ್ಸೆಗೆ‌ ಅನುಕೂಲವಾಗುವಂತೆ ವೈದ್ಯಕೀಯ ತಂಡಗಳು ಮತ್ತು ಅಂಬುಲೆನ್ಸ್‌ಗಳನ್ನು ನಿಯೋಜಿಸಬೇಕು. ಸುವರ್ಣ ವಿಧಾನಸೌಧದ ಒಳಗಡೆಯ ಕಾರಿಡಾರ್‌ಗಳಲ್ಲಿ ಹಾಗೂ ಮೊಗಸಾಲೆಯಲ್ಲಿ ಪಾವತಿ ಆಧಾರದ ಮೇಲೆ ವಿವಿಧ ಬಗೆಯ ಚಹಾ ಹಾಗೂ ಉಪಹಾರ ವ್ಯವಸ್ಥೆ ಕಲ್ಪಿಸಬೇಕು. ನಗರದ ರಸ್ತೆಗಳು ಸೇರಿದಂತೆ ನಗರ ಪ್ರವೇಶಿಸುವ ರಸ್ತೆಗಳ ದುರಸ್ತಿ ಕಾರ್ಯವನ್ನು ಕೂಡಲೇ ಕೈಗೆತ್ತಿಕೊಂಡು, ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.

   ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ವಸತಿ, ಸಾರಿಗೆ ಹಾಗೂ ಊಟೋಪಹಾರ ವ್ಯವಸ್ಥೆ ಸೇರಿದಂತೆ ಸುಗಮ ಅಧಿವೇಶನಕ್ಕಾಗಿ 10 ಸಮಿತಿಗಳನ್ನು ರಚಿಸಲಾಗಿದೆ. ಕಳೆದ ಬಾರಿಯಂತೆ ವಿವಿಧ ಸ್ಥಳಗಳಲ್ಲಿ ಊಟದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

   ಹೈಸ್ಪೀಡ್ ಸಾಮರ್ಥ್ಯದ ಅಂತರ್ಜಾಲ ಸಂಪರ್ಕ, ಕಂಪ್ಯೂಟರ್, ಲೇಖನ ಸಾಮಗ್ರಿಗಳು ಸೇರಿದಂತೆ ಎಲ್ಲಾ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ. ಪ್ರತಿ ವರ್ಷದಂತೆ ಅಧಿವೇಶನದಲ್ಲಿ ಭಾಗವಹಿಸುವ ಅಧಿಕಾರಿಗಳು, ಸಿಬ್ಬಂದಿ‌ ಮತ್ತು ಕಲಾಪ ವೀಕ್ಷಣೆಗೆ ಆಗಮಿಸುವ ಸಾರ್ವಜನಿಕರಿಗೆ ಪಾಸ್ ವ್ಯವಸ್ಥೆ ಮಾಡಲಾಗುತ್ತಿದೆ. ಸುವರ್ಣ ಸೌಧದ ಮುಖ್ಯ ಪ್ರವೇಶ ದ್ವಾರದಿಂದ ಒಳಗಡೆ ಆವರಣದವರೆಗೆ ಸಾರ್ವಜನಿಕರಿಗೆ ಕರೆದೊಯ್ಯಲು ಉಚಿತ ಬಸ್ ವ್ಯವಸ್ಥೆ ಕೂಡ ಈ ಬಾರಿ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

   ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಮಾತನಾಡಿ, ಅಂದಾಜು 6 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಪ್ರತಿವರ್ಷದಂತೆ ಬಿಗಿ ಭದ್ರತೆ ಕಲ್ಪಿಸಲಾಗುವುದು. ಸುವರ್ಣಸೌಧದ ಸುತ್ತಮುತ್ತಲಿನ ಪ್ರತಿಭಟನಾ ಸ್ಥಳಗಳಲ್ಲೂ ಅಗತ್ಯ ಬಂದೋಬಸ್ತ್ ಮಾಡಲಾಗುವುದು. ಇದಲ್ಲದೇ ಸಾರಿಗೆ ನಿರ್ವಹಣೆಗೂ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.

Recent Articles

spot_img

Related Stories

Share via
Copy link