ಬೆಂಗಳೂರು:
ಬಜೆಟ್ ಎಂಬುದು ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ ಏಳುಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎನ್ನುವುದು ನನ್ನ ನಂಬಿಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 2025-26ರ ಸಾಲಿನ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭ ಆಗುತ್ತಿರುವಂತೆಯೇ, ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು ಹೀಗೆ ಹೇಳಿದ್ದಾರೆ.
ಕಳೆದ ಕೆಲವು ದಿನಗಳಿಂದ ನಮ್ಮ ಸಂಪುಟದ ಸಚಿವರು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು, ರೈತ, ಶೋಷಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಧರ್ಮಗಳ ಗುರುಗಳೊಂದಿಗೆ ಸಭೆ ನಡೆಸಿ, ಪಕ್ಷಾತೀತವಾಗಿ ಸಮಾಜದ ಎಲ್ಲಾ ಜಾತಿ, ಜನಾಂಗ, ವರ್ಗದ ಜನರ ಆಶೋತ್ತರಗಳನ್ನು ಆಲಿಸಿ, ಅವುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಪ್ರಯತ್ನವನ್ನು ಈ ಬಜೆಟ್ ಮೂಲಕ ಮಾಡಿದ್ದೇನೆ.
ಬಜೆಟ್ ಎಂಬುದು ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ ಏಳುಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎನ್ನುವುದು ನನ್ನ ನಂಬಿಕೆ. ನಾಡಿನ ಪ್ರತಿಯೊಬ್ಬ ಪ್ರಜೆಯನ್ನು ಸರ್ಕಾರದ ಯಾವುದಾದರೊಂದು ಯೋಜನೆಯ ಫಲಾನುಭವಿಯನ್ನಾಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಬಜೆಟ್ ಮೂಲಕ ಮಾಡಿದ್ದೇನೆ ಎನ್ನುವ ಭರವಸೆ ನನಗಿದೆ ಎಂದು ತಿಳಿಸಿದ್ದಾರೆ,
ಈ ಬಾರಿ ಸಿದ್ದರಾಮಯ್ಯ ಅವರು 16ನೇ ಬಾರಿಗೆ ರಾಜ್ಯದ ಬಜೆಟ್ ಮಂಡನೆ ಮಾಡುತ್ತಿದ್ದು, ಈ ಬಾರಿಯ ಬಜೆಟ್ ಹಂಚಿಕೆ 4 ಲಕ್ಷ ಕೋಟಿ ತಲುಪುವ ನಿರೀಕ್ಷೆಯಿದೆ. ಕಳೆದ ಬಾರಿ (2024-25) 3.71 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದ್ದರು. ಇದರಲ್ಲಿ ಶೇಕಡಾ 62 ಮಾತ್ರ ಬಳಸಲಾಗಿದೆ ಎಂದು ಹೇಳಲಾಗುತ್ತಿದೆ. ಸಿದ್ದರಾಮಯ್ಯ ಅವರು ಬಳಿಗ್ಗೆ 10.15ರ ಸುಮಾರಿಗೆ ಬಜೆಟ್ ಮಂಡನೆ ಮಾಡಲಿದ್ದು, ಸಿಎಂ ಅವರ ಕಾರ್ಯಕಲಾಪಗಳ ಪಟ್ಟಿಯಲ್ಲಿ ಬೆಳಗ್ಗೆ 10:15ಕ್ಕೆ ಬಜೆಟ್ ಮಂಡನೆ ಉಲ್ಲೇಖವಾಗಿದೆ.
ರಾಜ್ಯ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದು, ಯೋಜನೆಗಳನ್ನು ಮುಂದುವರೆಸಬೇಕಾದ ಒತ್ತಡ ಸರ್ಕಾರದ ಮೇಲಿದೆ. ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳಿಗು ಸರ್ಕಾರ ಹಣ ನೀಡಬೇಕಿದೆ. ಗ್ಯಾರಂಟಿ ಜೊತೆಗೆ ರಾಜ್ಯದ ಆರ್ಥಿಕತೆ, ಅಭಿವೃದ್ಧಿ, ಸಾಮಾಜಿಕ ಏಳಿಗೆಗೆ ಕೊಡುಗೆ ನೀಡುವಂತಹ ಯೋಜನೆಗಳನ್ನು ಬಜೆಟ್ನಲ್ಲಿ ಮಂಡಿಸಬೇಕಿದೆ. ರಾಜ್ಯದ ಆರ್ಥಿಕ ಸ್ಥಿತಿ ಗತಿ ಸರಿಯಿಲ್ಲದ ಹೊತ್ತಲ್ಲಿ ಸರ್ಕಾರ ಎಷ್ಟು ಹೊಸ ಸಾಲವನ್ನು ಮಾಡುಲಿದೆ ಎಂಬ ಆತಂಕವೂ ಇದೆ. ಹೊಸ ಜಿಲ್ಲೆ, ಹೊಸ ತಾಲೂಕುಗಳ ಘೋಷಣೆಯಾದರೆ ಅವುಗಳ ಅಭಿವೃದ್ಧಿಗೂ ಹಣ ನೀಡಬೇಕಿದೆ.
