ಬೆಂಗಳೂರು
ಮುಡಾ ಹಗರಣ ಸಂಬಂಧ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಎತ್ತಿಹಿಡಿದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ರದ್ದುಪಡಿಸುವಂತೆ ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಸಲ್ಲಿಸಿದ್ದಾರೆ. ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ. ಇದೀಗ ಆ ಮೇಲ್ಮನವಿಯಲ್ಲಿ ಸಿದ್ದರಾಮಯ್ಯ ಪರ ವಕೀಲರು ಏನೇನು ಉಲ್ಲೇಖಿಸಿದ್ದಾರೆ ಎಂಬ ಅಂಶ ತಿಳಿದುಬಂದಿದೆ.
ಜುಲೈ 26 ರಂದು ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ದೂರು ನೀಡಿದ್ದರು. ದೂರು ನೀಡಿದ ದಿನವೇ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿದ್ದಾರೆ. ರಾಜ್ಯಪಾಲರ ಶೋಕಾಸ್ ನೋಟಿಸ್ ಹಿಂಪಡೆಯುವಂತೆ ಸಿಎಂ ರಹಿತವಾದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯವಾಗಿತ್ತು. ಆದರೂ ರಾಜ್ಯಪಾಲರು ಕ್ಯಾಬಿನೆಟ್ ಸಲಹೆ ಪಾಲಿಸದೇ ಲೋಪವೆಸಗಿದ್ದಾರೆ. 17 ಎ ಅಡಿಯಲ್ಲಿ ಪೊಲೀಸ್ ಅಧಿಕಾರಿ ರಾಜ್ಯಪಾಲರ ಅನುಮತಿ ಕೇಳಬೇಕು.
ಆದರೆ ಖಾಸಗಿ ವ್ಯಕ್ತಿಯ ದೂರು ಪರಿಗಣಿಸಿ ಅನುಮತಿ ನೀಡಲಾಗಿದೆ. ರಾಜ್ಯಪಾಲರು ಅನುಮತಿ ನೀಡುವಾಗ ವಿವೇಚನೆ ಬಳಸಿಲ್ಲ. ಈ ಅಂಶಗಳನ್ನು ಹೈಕೋರ್ಟ್ ಏಕಸದಸ್ಯ ಪೀಠ ಪರಿಗಣಿಸಿಲ್ಲ. ಏಕಸದಸ್ಯ ಪೀಠ ನ್ಯಾಯಾಂಗದ ಪರಿಶೀಲನಾ ಅಧಿಕಾರವನ್ನು ಸೂಕ್ತವಾಗಿ ಬಳಸಿಲ್ಲ. ಹೀಗಾಗಿ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ರದ್ದುಪಡಿಸಬೇಕು ಎಂದು ಸಿದ್ದರಾಮಯ್ಯ ಪರ ವಕೀಲರು ಸಲ್ಲಿಸಿರುವ ಮೇಲ್ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರಣೆ ಬಗ್ಗೆ ಕುತೂಹಲ ಹೆಚ್ಚಾಗಿದೆ. ಶುಕ್ರವಾರ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿಚಾರಣೆಗೆ ಹಾಜರಾಗಿದ್ದರು. ಮುಡಾ ಪ್ರಕರಣದ ಎಫ್ಐಆರ್ನಲ್ಲಿ ಪಾರ್ವತಿ 2ನೇ ಆರೋಪಿಯಾಗಿದ್ದಾರೆ.