ನವದೆಹಲಿ:
ವೈದ್ಯಕೀಯ ಪ್ರವೇಶ ಪರೀಕ್ಷೆ NEET-UG ಅನ್ನು ಮತ್ತೊಮ್ಮೆ ನಡೆಸಬೇಕು ಮತ್ತು ಎಲ್ಲಾ “ಪೇಪರ್ ಸೋರಿಕೆ ಹಗರಣಗಳನ್ನು” ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಕೂಲಂಕುಷವಾಗಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಒತ್ತಾಯಿಸಿದ್ದಾರೆ.
ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಕೇಳಿ ಬಂದ ಹಿನ್ನೆಲೆಯಲ್ಲಿ 2024 ರ NEET-UG ಪರೀಕ್ಷೆ ರದ್ದುಗೊಳಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಆದರೆ ಕೇಂದ್ರ ಮತ್ತು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ, ಪರೀಕ್ಷೆ ರದ್ದುಗೊಳಿಸುವುದರಿಂದ ಲಕ್ಷಾಂತರ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗಲಿದೆ ಎಂದು ಶುಕ್ರವಾರ ಸುಪ್ರೀಂ ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದೆ.
ಈ ಕುರಿತು ‘X’ನಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, NEET-UG ನಲ್ಲಿ ಯಾವುದೇ ಪೇಪರ್ ಸೋರಿಕೆಯಾಗಿಲ್ಲ ಎಂದು ಮೋದಿ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಆದರೆ ಇದು ಹಸಿ ಸುಳ್ಳು. ಸುಳ್ಳು ಹೇಳುವ ಮೂಲಕ ಲಕ್ಷಗಟ್ಟಲೆ ಯುವಕರ ಭವಿಷ್ಯವನ್ನು ಹಾಳು ಮಾಡಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. “ಕೆಲವು ಸ್ಥಳಗಳಲ್ಲಿ ಮಾತ್ರ ಅಕ್ರಮಗಳು ಅಥವಾ ವಂಚನೆಗಳು ನಡೆದಿವೆ” ಎಂದು ಶಿಕ್ಷಣ ಸಚಿವಾಲಯ ಹೇಳಿದೆ. ಆದರೆ ಇದು ದಾರಿ “ತಪ್ಪಿಸುವ” ಕೆಲಸ. ಬಿಜೆಪಿ-ಆರ್ಎಸ್ಎಸ್ ಇಡೀ ಶಿಕ್ಷಣ ವ್ಯವಸ್ಥೆಯ ಮೇಲೆ ಹಿಡಿತ ಸಾಧಿಸುವ ಮೂಲಕ ಶಿಕ್ಷಣ ಮಾಫಿಯಾವನ್ನು ಉತ್ತೇಜಿಸುತ್ತಿದೆ ಎಂದು ಖರ್ಗೆ ಆರೋಪಿಸಿದ್ದಾರೆ.
ಎನ್ಸಿಇಆರ್ಟಿ ಪುಸ್ತಕ ಅಥವಾ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಒಟ್ಟಾರೆ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ನಾಶಪಡಿಸಲು ಮೋದಿ ಸರ್ಕಾರ ಮುಂದಾಗಿದೆ ಎಂದು ಖರ್ಗೆ ಕಿಡಿ ಕಾರಿದ್ದಾರೆ.
NEET-UG ಅನ್ನು ಮತ್ತೊಮ್ಮೆ ನಡೆಸಬೇಕು ಎಂಬ ನಮ್ಮ ಬೇಡಿಕೆಯನ್ನು ನಾವು ಪುನರುಚ್ಚರಿಸುತ್ತೇವೆ. ಅದನ್ನು ಪಾರದರ್ಶಕ ರೀತಿಯಲ್ಲಿ ಆನ್ಲೈನ್ನಲ್ಲಿ ನಡೆಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷರು ಆಗ್ರಹಿಸಿದ್ದಾರೆ.
