ಬೆಂಗಳೂರು :
‘ಕಾಂಗ್ರೆಸ್ ಪಕ್ಷದ ಸಿದ್ಧಾಂತ, ನಾಯಕತ್ವ ಒಪ್ಪಿ, ಕೆಲಸ ಮಾಡಲು ಇಚ್ಛಿಸುವ ಯಾರೇ ಆದರೂ ಪಕ್ಷ ಸೇರಲು ಅರ್ಜಿ ಹಾಕಬಹುದು. ನಾನು ಕೇವಲ 17 ಜನರನ್ನು ಉದ್ದೇಶಿಸಿ ಈ ಮಾತು ಹೇಳುತ್ತಿಲ್ಲ. ಯಾರೇ ಅರ್ಜಿ ಹಾಕಿದರೂ ಪಕ್ಷ ಅದನ್ನು ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ.
ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಗೆ ದ್ರೋಹ ಮಾಡಿ ಬೇರೆ ಪಕ್ಷಕ್ಕೆ ಸೇರ್ಪಡೆಯಾದವರು ಮರಳಿ ಬಂದರೆ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಪಕ್ಷದ ಸಿದ್ಧಾಂತ ಒಪ್ಪಿ ಬಂದವರಿಗೆ ಮತ್ತೆ ಪಕ್ಷಕ್ಕೆ ಸೇರಲು ಅವಕಾಶವಿದೆ. ಕೇವಲ 17 ಜನರಷ್ಟೇ ಅಲ್ಲ ಯಾರು ಬೇಕಾದರೂ ಬರಲಿ. ನಾಯಕತ್ವದ ಮೇಲೆ ನಂಬಿಕೆಯಿದ್ದರೆ, ಸಿದ್ಧಾಂತ ಒಪ್ಪಿ ಬರಲಿ. ಮೊದಲು ಪಕ್ಷಕ್ಕೆ ಬರುವ ಬಗ್ಗೆ ಅರ್ಜಿ ಹಾಕಲಿ ನಂತರ ಪರಿಶೀಲಿಸಿ ನಿರ್ಧರಿಸುತ್ತೇವೆ ಎಂದು ಹೇಳಿದರು.
ಮುಂದೆ ಯಾವುದೇ ಗೊಂದಲ ಉದ್ಭವಿಸಬಾರದು ಎಂದು ನಾವು ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಸ್ಥಳೀಯ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ, ಆನಂತರ ರಾಜ್ಯಮಟ್ಟದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಯಾರಿಗೆ ಇಚ್ಛೇ ಇದೆಯೋ ಅವರು ಅರ್ಜಿ ಹಾಕಲಿ, ಆಮೇಲೆ ಆ ಬಗ್ಗೆ ತೀರ್ಮಾನ ಮಾಡೋಣ. ನಮ್ಮಲ್ಲಿ ಒಬ್ಬೊಬ್ಬರದ್ದೂ ಒಂದೊಂದು ಅಭಿಪ್ರಾಯ ಇರುತ್ತದೆ. ಇಲ್ಲಿ ವೈಯಕ್ತಿಕ ಅಭಿಪ್ರಾಯ ಮುಖ್ಯ ಅಲ್ಲ. ಪಕ್ಷದ ಒಟ್ಟಾರೆ ಅಭಿಪ್ರಾಯ ಮುಖ್ಯ ಎಂದರು.
ಇನ್ನು ಪಕ್ಷ ತೊರೆದು ಮಂತ್ರಿಯಾಗಿರುವ 17 ಜನರಲ್ಲಿ ಯಾರೂ ಪಕ್ಷ ಸೇರುವ ಬಗ್ಗೆ ಸಂಪರ್ಕ ಮಾಡಿಲ್ಲ. ನಾನು ಕೇವಲ ಈ 17 ಜನರನ್ನು ಉದ್ದೇಶಿಸಿ ಮಾತ್ರ ಈ ಮಾತು ಹೇಳುತ್ತಿಲ್ಲ. ಯಾರು ಬೇಕಾದರೂ ಅರ್ಜಿ ಹಾಕಬಹುದು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
