ಬೆಂಗಳೂರು:
ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಶುಕ್ರವಾರ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದೆ.ಸಮಾವೇಶದ ನಂತರ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಮುಖ್ಯ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ಮತಗಳ್ಳತನದ ಕುರಿತಂತೆ ದಾಖಲೆ ಸಹಿತ ದೂರು ನೀಡಲಿದ್ದಾರೆ.
ಬಿಜೆಪಿಗೆ ಅನುಕೂಲವಾಗುವಂತೆ ಚುನಾವಣಾ ಆಯೋಗ ನಡೆದುಕೊಳ್ಳುತ್ತಿದ್ದು, ಮತಗಳವಿಗೆ ನೆರವು ನೀಡುತ್ತಿದೆ ಎಂದು ರಾಹುಲ್ ಆರೋಪಿಸಿದ್ದರು. ಅದರ ಕುರಿತು ಜನಾಂದೋಲನ ಸೃಷ್ಟಿಯಾಗುವಂತೆ ಮಾಡಲು ಕಾಂಗ್ರೆಸ್ ಇಂದು ಬೃಹತ್ ಪ್ರತಿಭಟನಾ ಸಮಾವೇಶ ನಡೆಸುತ್ತಿದೆ.
ಪ್ರತಿಭಟನಾ ಸಮಾವೇಶಕ್ಕಾಗಿ ಸ್ವಾತಂತ್ರ್ಯ ಉದ್ಯಾನದ ಬಹುಮಹಡಿ ವಾಹನ ನಿಲುಗಡೆ ಕಟ್ಟಡದ ತಳ ಮಹಡಿಯಲ್ಲಿ ಬೃಹತ್ ವೇದಿಕೆಯನ್ನು ನಿರ್ಮಿಸಲಾಗಿದೆ. ಜೊತೆಗೆ ಸಾರ್ವಜನಿಕರಿಗಾಗಿ 8 ಸಾವಿರ ಆಸನಗಳನ್ನು ಅಳವಡಿಸಲಾಗಿದೆ. ಸ್ವಾತಂತ್ರ್ಯ ಉದ್ಯಾನದಲ್ಲಿಯೂ ಆಸನ ವ್ಯವಸ್ಥೆ ಕಲ್ಪಿಸಲಾಗಿದ್ದು, ವೇದಿಕೆ ಕಾರ್ಯ ಕ್ರಮ ವೀಕ್ಷಣೆಗಾಗಿ ಎಲ್ಇಡಿ ವ್ಯವಸ್ಥೆ ಮಾಡಲಾಗಿದೆ.








