ಬೆಂಗಳೂರು
ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮಂಗಳವಾರ ಮಧ್ಯಾಹ್ನ ಮುಷ್ಕರಕ್ಕೆ ಕರೆ ನೀಡಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಜೊತೆ ವಿಧಾನಸೌಧದಲ್ಲಿ ಸಭೆ ನಡೆಸಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಕ್ಷರಿ ನೇತೃತ್ವದಲ್ಲಿ ಹಲವರು ಸಭೆಯಲ್ಲಿ ಪಾಲ್ಗೊಂಡಿದ್ದರು.
7ನೇ ವೇತನ ಆಯೋಗದ ಶಿಫಾರಸು ಜಾರಿ ಕುರಿತು ಸರ್ಕಾರ ಸ್ಪಷ್ಟವಾದ ಲಿಖಿತ ಭರವಸೆ ನೀಡಬೇಕು. 2023-24ನೇ ಸಾಲಿನ ಬಜೆಟ್ನಲ್ಲಿ 7ನೇ ವೇತನ ಆಯೋಗದ ಶಿಫಾರಸು ಜಾರಿ ಬಗ್ಗೆ ಯಾವುದೇ ಭರವಸೆ ಕೊಡದಿರುವ ಕುರಿತು ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
ಸಭೆಯಲ್ಲಿ ವಂದಿತಾ ಶರ್ಮಾ ನೌಕರರ ಮನವೊಲಿಕೆಗೆ ಪ್ರಯತ್ನ ನಡೆಸಿದರು. ಆದರೆ ನೌಕರರು ಸಹ ತಮ್ಮ ಪಟ್ಟನ್ನು ಬಿಡಲಿಲ್ಲ. ಕೊನೆಯಲ್ಲಿ ಸಿಎಸ್ ಅವರು ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಿಗೆ ಮುಷ್ಕರ ವಾಪಸ್ ಪಡೆಯುವ ಕುರಿತು ಸಂಜೆಯೊಳಗೆ ತೀರ್ಮಾನ ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ . ಆದರೆ ಸಭೆಯ ಬಳಿಕ ಮಾತನಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಕ್ಷರಿ, “ಯಾವುದೇ ಕಾರಣಕ್ಕೂ ಮುಷ್ಕರ ವಾಪಸ್ ಪಡೆಯುವುದಿಲ್ಲ” ಎಂದು ಘೋಷಣೆ ಮಾಡಿದ್ದಾರೆ.








