ಶಿಡ್ಲಘಟ್ಟ:
“ಶಾಸಕರ ಖರೀದಿ ಹಾಗೂ ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.ಶಿಡ್ಲಘಟ್ಟದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.
ಕಾಂಗ್ರೆಸ್ ಶಾಸಕರನ್ನು ಕಾಂಗ್ರೆಸ್ ಪಕ್ಷದ ನಾಯಕರೇ ಖರೀದಿ ಮಾಡುವ ಪರಿಸ್ಥಿತಿ ಬಂದಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಈ ಹಿಂದೆ ಬಿಜೆಪಿ ಸರ್ಕಾರ ರಚನೆ ಯಾದಾಗ ಅವರು ಎಷ್ಟು ಸಾವಿರ ಕೋಟಿ ಖರ್ಚು ಮಾಡಿದ್ದರು. ಮುಖ್ಯಮಂತ್ರಿ ಹುದ್ದೆಗೆ ಎಷ್ಟು ಹಣ ನೀಡಬೇಕಾಗಿತ್ತು, ಮಂತ್ರಿ ಹುದ್ದೆಗೆ ಎಷ್ಟು ಹಣ ನೀಡಲಾಗಿದೆ ಎಂದು ಅವರದೇ ಪಕ್ಷದ ನಾಯಕರು ಬಹಿರಂಗ ಹೇಳಿಕೆ ನೀಡಿದ್ದಾರೆ.
ಅವರು ಎಷ್ಟು ಹಣ ಆಮೀಷ ಒಡ್ಡಿದ್ದರು ಎಂದು ವಿಧಾನಸಭೆಯಲ್ಲೂ ಪ್ರಸ್ತಾಪವಾಗಿದ್ದು, ದಾಖಲೆಗಳಲ್ಲಿ ಸೇರಿವೆ. ಈಗ ಬಿಜೆಪಿಯವರು ತಮ್ಮ ಪ್ರವೃತ್ತಿಯನ್ನು ನೆನೆಸಿಕೊಳ್ಳುತ್ತಿದ್ದಾರೆ” ಎಂದು ಹರಿ ಹಾಯ್ದರು.ಹೈಕಮಾಂಡ್ ಹೇಳಿದ್ದನ್ನು ನಾನು, ಶಿವಕುಮಾರ್ ಸೇರಿದಂತೆ ಎಲ್ಲರೂ ಒಪ್ಪಬೇಕು ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಹೇಳಿದ ಮೇಲೆ ಅದೇ ನಮಗೆ ವೇದವಾಕ್ಯ” ಎಂದು ತಿಳಿಸಿದರು.








