ಬೆಂಗಳೂರು:
ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ವರುಣ ದೇವನ ಕೃಪೆಯಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕೋರ್ಟ್ ಆದೇಶ ಪಾಲನೆ ಹಾಗೂ ರಾಜ್ಯದ ರೈತರ ಹಿತ ರಕ್ಷಣೆ ಸಾಧ್ಯವಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣ ಆವರಣದಲ್ಲಿ ಮಾತನಾಡಿದ ಅವರು, ಇನ್ನೆರಡು ಮೂರು ದಿನಗಳಲ್ಲಿ ಕೆಆರ್ ಎಸ್ ಅಣೆಕಟ್ಟು ತುಂಬಲಿದ್ದು, ತಮಿಳುನಾಡಿನ ಪಾಲಿನ ನೀರನ್ನು ಹರಿಸಬಹುದಾದ ಸೂಚನೆ ವ್ಯಕ್ತವಾಗಿವೆ. ಇದರ ಜತೆಗೆ ನಮ್ಮ ರೈತರ ಹಿತಕಾಯಲು ಕೆರೆ ತುಂಬಿಸುವ ಕಾರ್ಯಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ. ಭತ್ತ ನಾಟಿ ಮಾಡುವ ಮುನ್ನ ಸ್ವಲ್ಪ ತಾಳ್ಮೆ ವಹಿಸಬೇಕು.
ನೀರು ಎಷ್ಟು ಪ್ರಮಾಣದಲ್ಲಿ ಬರಲಿದೆ ಎಂಬುದು ಇನ್ನು ತಿಳಿದಿಲ್ಲ. ಹೀಗಾಗಿ ಕೃಷಿ ಇಲಾಖೆಯವರ ಜತೆ ಚರ್ಚೆ ಮಾಡಿ ತೀರ್ಮಾನ ಮಾಡಲಾಗುವುದು ಎಂದರು. ನಾವು ಮುಂಜಾಗೃತವಾಗಿ ರಂಗನತಿಟ್ಟು ಸೇರಿದಂತೆ ಇತರೆಡೆ ದೋಣಿ ವಿಹಾರ ಸ್ಥಗಿತಗೊಳಿಸಿದ್ದು,ಹೊಳೆಗಳ ಅಕ್ಕಪಕ್ಕದ ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ್ದೇವೆ. ಕರಾವಳಿ ಭಾಗದಲ್ಲಿ ಕೇರಳ ಮೂಲದ ಚಾಲಕ ವಾಹನ ಸಮೇತ, ಗುಡ್ಡ ಕುಸಿತಕ್ಕೆ ಸಿಲುಕಿದ್ದಾನೆ. ಮಳೆ ಮುಂದುವರಿದಿರುವ ಕಾರಣ ತೆರವು ಕಾರ್ಯಕ್ಕೆ ಅಡ್ಡಿಯುಂಟಾಗಿದೆ. ನಾವು ನಮ್ಮ ಪ್ರಯತ್ನ ಮಾಡುತ್ತಿದ್ದೇವೆ. ನಮ್ಮ ಸಚಿವರು ಶಾಸಕರು, ನಾಯಕರು ಸ್ಥಳದಲ್ಲಿದ್ದು, ಅವರ ಕರ್ತವ್ಯ ನಿಭಾಯಿಸುತ್ತಿದ್ದಾರೆ” ಎಂದು ಮಾಹಿತಿ ನೀಡಿದರು.
ನಿಗಮ-ಮಂಡಳಿಗಳಲ್ಲಿ ಕಾರ್ಯೋನ್ಮುಖರಾಗದವರ ಬದಲಾವಣೆ ಮಾಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಯಾರು ಕಾರ್ಯೋನ್ಮುಖರಾಗಿಲ್ಲ ಅಂತಹವರನ್ನು ಖಂಡಿತವಾಗಿ ಬದಲಾಯಿಸಲಾಗುವುದು. ಇತ್ತೀಚೆಗೆ ನಡೆದ ಸಿಎಲ್ ಪಿ ಸಭೆಯಲ್ಲೂ ನಾನು ಈ ವಿಚಾರ ಹೇಳಿದ್ದೇನೆ. ಕಾಂಗ್ರೆಸ್ ಕಚೇರಿಯಲ್ಲಿ ಕಡ್ಡಾಯವಾಗಿ ಇರಬೇಕು. ಶಾಸಕರ ಮನೆಯಲ್ಲಿ ಪಕ್ಷದ ಸಭೆ ಮಾಡುವಂತಿಲ್ಲ. ಮನೆಯಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಲಿ. ಆದರೆ ಪಕ್ಷದ ಸಭೆಗಳು ಪಕ್ಷದ ಕಚೇರಿಯಲ್ಲೇ ಆಗಬೇಕು. ಇನ್ನು ಅಧಿವೇಶನದ ಬಳಿಕ ಇಬ್ಬರು ಮಂತ್ರಿಗಳು ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ” ಎಂದರು.