ಬಿಬಿಎಂಪಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಡಿಸಿಎಂ

ಬೆಂಗಳೂರು:

   ಚರಂಡಿಗಳಲ್ಲಿ ಹೂಳು ತೆಗೆಯುವಲ್ಲಿ ನಿರ್ಲಕ್ಷ್ಯ ತೋರಿದ ಬಿಬಿಎಂಪಿ ಅಧಿಕಾರಿಗಳನ್ನು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ತೀವ್ರ ತರಾಟೆಗೆ ತೆಗೆದುಕೊಂಡರು.

   ಭಾನುವಾರ ಮಧ್ಯರಾತ್ರಿ ಸುರಿದ ಭಾರೀ ಮಳೆಗೆ ನಗರದ ಹಲವು ರಸ್ತೆಗಳು ಜಲಾವೃತ್ತಗೊಂಡಿದ್ದವು. ಈ ಪ್ರದೇಶಗಳಿಗೆ ಸೋಮವಾರ ಭೇಟಿ ನೀಡಿದ ಡಿಕೆ.ಶಿವಕುಮಾರ್ ಅವರು, ಪ್ರಮುಖ ರಸ್ತೆಗಳ ಬದಿಯಲ್ಲಿರುವ ಚರಂಡಿಗಳಿ ಸ್ಥಿತಿ ಕಂಡು ಅಧಿಕಾರಿಗಳ ವಿರುದ್ಧ ಗರಂ ಆದರು.

   ಡಿಕೆ.ಶಿವಕುಮಾರ್ ಅವರು ಹೆಬ್ಬಾಳ ಸಮೀಪದ ಯೋಗೇಶ್ವರನಗರ, ನಾಗವಾರ ಜಂಕ್ಷನ್, ಎಚ್‌ಬಿಆರ್ ಲೇಔಟ್ 5ನೇ ಬ್ಲಾಕ್, ಸಿಲ್ಕ್ ಬೋರ್ಡ್, ಜಯದೇವ ಆಸ್ಪತ್ರೆ ಜಂಕ್ಷನ್ ಸೇರಿದಂತೆ ಇತರೆಡೆ ಪರಿಶೀಲನೆ ನಡೆಸಿದರು.

  ಯೋಗೇಶ್ವರನಗರ ಮೇಲ್ಸೇತುವೆ ಮೇಲೆ ಮಳೆನೀರು ನಿಂತಿರುವುದು ಕಂಡು ಬಂದಿತು. ಇದೇ ವೇಳೆ ಸ್ಥಳದಲ್ಲಿದ್ದ ಚರಂಡಿಯನ್ನು ಪರಿಶೀಲನೆ ನಡೆಸಿದ ಅವರು, ನೀರು ಮುಕ್ತವಾಗಿ ಹರಿಯದಿರಲು ಕಾರಣವನ್ನು ಪ್ರಶ್ನಿಸಿದರು. ಕಾಮಗಾರಿ ಮುಗಿದರೂ ಕಟ್ಟಡದ ಅವಶೇಷಗಳನ್ನು ಏಕೆ ತೆರವುಗೊಳಿಸಿಲ್ಲ ಎಂದು ಅಧಿಕಾರಿಗಳನ್ನು ಪ್ರಶ್ನಿಸಿ, ಕೂಡಲೇ ತೆರವುಗೊಳಿಸುವಂತೆ ಸೂಚಿಸಿದರು. ಬಳಿಕ ಸುತ್ತಮುತ್ತಲ ಪ್ರದೇಶದಲ್ಲಿ ಸಂಚರಿಸಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗದಂತೆ ತಡೆಯಲು ರಸ್ತೆಗಳ ಎರಡೂ ಬದಿಯಲ್ಲಿರುವ ಚರಂಡಿ ಹಾಗೂ ಮ್ಯಾನ್‌ಹೋಲ್‌ಗಳನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

   ಸಿಲ್ಕ್ ಬೋರ್ಡ್‌ನಲ್ಲಿ ಎಸ್‌ಡಬ್ಲ್ಯೂಡಿ ಪರಿಶೀಲಿಸಿದ ಉಪಮುಖ್ಯಮಂತ್ರಿಗಳು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು. ಬಳಿಕ ಚರಂಡಿಗಳು ಕಿರಿದಾಗಿರುವ ಕಡೆ ವಿಸ್ತರಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

   ಪರಿಶೀಲನೆ ಮುಗಿಸಿದ ಬಳಿಕ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್, ಪ್ರಮುಖವಾಗಿ ರಸ್ತೆ ಗುಂಡಿಗಳು ಹೆಚ್ಚಾಗಿದ್ದು, ಅವುಗಳನ್ನು ಕೂಡಲೇ ಮುಚ್ಚುವಂತೆ ಸೂಚನೆ ನೀಡಿದ್ದೇನರೆ. ಅದರ ಜೊತೆಗೆ ರಾಜಕಾಲುವೆಗಳಿಗೆ ರಕ್ಷಣಾ ಗೋಡೆಗಳನ್ನು ನಿರ್ಮಾಣ ಮಾಡಬೇಕಿದ್ದು, ತಕ್ಷಣ ಆ ಕಾರ್ಯವನ್ನೂ ಕೈಗೆತ್ತಿಕೊಳ್ಳುವಂತೆ ತಿಳಿಸಿದ್ದೇನೆ. ಜೊತೆಗೆ ಪಾದಚಾರಿ ಮಾರ್ಗದಲ್ಲಿ ಕಟ್ಟಡ ತ್ಯಾಜ್ಯ ವಿಲೇವಾರಿ ಮಾಡುವವರ ವಿರುದ್ಧ ಕ್ರಮಕ್ಕೆ ನಿರ್ದೇಶಿಸಿದ್ದು, ಚರಂಡಿಗಳಲ್ಲಿನ ಹೂಳು ತೆಗೆಯುವಂತೆಯೂ ಹೇಳಿದ್ದೇನೆಂದು ಹೇಳಿದರು.

   ನಗರದಲ್ಲಿ ಒಣಗಿದ ಮರಗಳನ್ನು ತೆರವು ಮಾಡಬೇಕಿದೆ. ಅದಕ್ಕಾಗಿ ಎಲ್ಲೆಲ್ಲಿ ಮರಗಳು ಮತ್ತು ರೆಂಬೆಗಳು ಒಣಗಿವೆ ಎಂಬುದನ್ನು ಪಟ್ಟಿ ಮಾಡಿ, ಅವುಗಳ ತೆರವಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮರಗಳ ತೆರವು ಹಾಗೂ ಪ್ರವಾ ಪರಿಸ್ಥಿತಿ ಉಂಟಾಗದಂತೆ ತಡೆಯಲು ವಿಫಲರಾದ ಅಧಿಕಾರಿಗಳ ಬಗ್ಗೆ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Recent Articles

spot_img

Related Stories

Share via
Copy link
Powered by Social Snap