ಬೆಂಗಳೂರು
ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಊರುಗಳಿಗೆ ತೆರಳುತ್ತಾರೆ. ಮತ್ತು ಹಬ್ಬ ಮುಗಿಸಿಕೊಂಡು ವಾಪಸ್ ಆಗುತ್ತಾರೆ. ಇದರಿಂದ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಳವಾಗಲಿದೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೆಚ್ಚುವರಿ ಬಸ್ಗಳನ್ನು ರಸ್ತೆಗೆ ಇಳಿಸಲಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸುವ ಮೂಲಕ ಎನ್ಡಬ್ಲೂಕೆಆರ್ಟಿಸಿ ಮಾಹಿತಿ ನೀಡಿದೆ.
ದೂರದ ಸ್ಥಳಗಳಿಂದ ತಮ್ಮ ಸ್ವಂತ ಊರುಗಳಿಗೆ ತೆರಳುವ ಹಾಗೂ ಹಬ್ಬ ಮುಗಿಸಿ ಹಿಂದಿರುವಗ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಎನ್ಡಬ್ಲುಕೆಆರ್ಟಿಸಿ ತಿಳಿಸಿದೆ. ಮಂಗಳವಾರ (ಅ.29) ರಿಂದ ಶುಕ್ರವಾರ (ನ.1) ಹಾಗೂ ರವಿವಾರ (ನ.03) ಮತ್ತು ಸೋಮವಾರ (ನ.04) ರಂದು ಈ ನಗರಗಳಿಂದ ಹೆಚ್ಚುವರಿ ಬಸ್ಗಳು ಸಂಚರಿಸಲಿವೆ.
ಬೆಂಗಳೂರು, ಮಂಗಳೂರು, ಪುಣೆ, ಗೋವಾ, ಹೈದರಾಬಾದ್ ನಗರಗಳಿಂದ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ ಮತ್ತು ಬಾಗಲಕೋಟೆ ಸೇರಿದಂತೆ ಇನ್ನೀತರ ಸ್ಥಳಗಳಿಗೆ ಹೆಚ್ಚುವರಿ ಬಸ್ಗಳು ಕಾರ್ಯ ನಿರ್ವಹಿಸಲಿವೆ. ಪ್ರಯಾಣಿಕರು ಇದರ ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಇ-ಟಿಕೇಟ್ ಬುಕಿಂಗ್ನ್ನು www.ksrtc.karnataka.gov.in ವೆಬ್ಸೈಟ್ ಮುಖಾಂತರ ಮಾಡಬಹುದಾಗಿದ್ದು, ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ನಿಗಮ ತಿಳಿಸಿದೆ.
ಎನ್ಡಬ್ಲೂಕೆಆರ್ಟಿಸಿ ಈ ಹಿಂದೆ ದಸರಾ ಹಬ್ಬದ ಸಂದರ್ಭದಲ್ಲಿಯೂ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ಗಳನ್ನು ಓಡಿಸಿತ್ತು. ಇದರಿಂದ ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಿತ್ತು. ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸುವಲ್ಲಿ ಎನ್ಡಬ್ಲೂಕೆಆರ್ಟಿಸಿ ಯಶಸ್ವಿಯಾಗಿತ್ತು.
