15 ದಿನಗಳಲ್ಲಿ 2000ಗಡಿ ದಾಟಿದ ಡೆಂಗಿ ಪ್ರಕರಣ

ಬೆಂಗಳೂರು: 

    ರಾಜ್ಯದಲ್ಲಿ ಈ ತಿಂಗಳು 15 ದಿನಗಳಲ್ಲಿ ಡೆಂಗಿ ಪ್ರಕರಣಗಳ ಒಟ್ಟು ಸಂಖ್ಯೆ ಎರಡು ಸಾವಿರದ ಗಡಿ ದಾಟಿದೆ.ಪ್ರತಿ ವರ್ಷ ಮುಂಗಾರು ಮಳೆ ಪ್ರಾರಂಭವಾದ ಬಳಿಕ ಪ್ರಕರಣಗಳ ಸಂಖ್ಯೆ ಏರುಗತಿ ಪಡೆಯುತ್ತಿದೆ.

    ಈ ವರ್ಷ ಈಗಾಗಲೇ 70 ಸಾವಿರಕ್ಕೂ ಅಧಿಕ ಡೆಂಗಿ ಶಂಕಿತರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಅವರಲ್ಲಿ 23 ಸಾವಿರಕ್ಕೂ ಅಧಿಕ ಮಂದಿಯ ರಕ್ತದ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಡೆಂಗಿ ಪ್ರಕರಣಗಳು ಪತ್ತೆಯಾಗಿವೆ. ಕಳೆದ ವರ್ಷ 9,620 ಮಂದಿ ಡೆಂಗಿ ಜ್ವರದಿಂದ ಬಳಲಿದ್ದರು. ಅವರಲ್ಲಿ ಒಂಬತ್ತು ಮಂದಿ ಜ್ವರದ ತೀವ್ರತೆಗೆ ಮೃತಪಟ್ಟಿರುವುದು ದೃಢಪಟ್ಟಿತ್ತು. ಈ ವರ್ಷ ಯಾವುದೇ ಮರಣ ವರದಿಯಾಗಿಲ್ಲ.

   ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 1,009 ಮಂದಿಯ ರಕ್ತದ ಮಾದರಿಯನ್ನು ಪರೀಕ್ಷೆ ಮಾಡಲಾಗಿದ್ದು, 732 ಮಂದಿಯಲ್ಲಿ ಈ ಜ್ವರ ದೃಢಪಟ್ಟಿದೆ. ಮೈಸೂರಿನಲ್ಲಿ 156, ವಿಜಯಪುರದಲ್ಲಿ 113, ಚಿತ್ರದುರ್ಗದಲ್ಲಿ 91, ಬೆಳಗಾವಿಯಲ್ಲಿ 78, ಧಾರವಾಡದಲ್ಲಿ 71, ಬಳ್ಳಾರಿಯಲ್ಲಿ 69 ಹಾಗೂ ಶಿವಮೊಗ್ಗದಲ್ಲಿ 56 ಪ್ರಕರಣ ವರದಿಯಾಗಿದೆ.

   27 ಜಿಲ್ಲೆಗಳಲ್ಲಿ ಚಿಕೂನ್‌ಗುನ್ಯಾ ಪ್ರಕರಣಗಳು ಪತ್ತೆಯಾಗಿವೆ. 13 ಸಾವಿರಕ್ಕೂ ಅಧಿಕ ಮಂದಿ ಚಿಕೂನ್‌ಗುನ್ಯಾ ಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ. 10 ಸಾವಿರಕ್ಕೂ ಅಧಿಕ ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ. ಅವರಲ್ಲಿ 498 ಮಂದಿ ಈ ಜ್ವರಕ್ಕೆ ಒಳಗಾಗಿರುವುದು ದೃಢಪಟ್ಟಿದೆ. ವಿಜಯಪುರ (78) ಹಾಗೂ ಮೈಸೂರಿನಲ್ಲಿ (56) ಅಧಿಕ ಪ್ರಕರಣಗಳು ವರದಿಯಾಗಿವೆ.

    ‘ಮನೆಯ ಸುತ್ತಮುತ್ತಲಿನ ಘನತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ನೀರು ಶೇಖರಣೆಯಾದಲ್ಲಿ ಈಡೀಸ್ ಸೊಳ್ಳೆಗಳು ಉತ್ಪತ್ತಿಯಾಗಿ, ಡೆಂಗಿ ಜ್ವರಕ್ಕೆ ಕಾರಣವಾಗುತ್ತವೆ. ಈ ಜ್ವರಕ್ಕೆ ಲಸಿಕೆ ಇಲ್ಲದಿರುವುದರಿಂದ ಲಕ್ಷಣದ ಆಧಾರದಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ರೋಗ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ರಕ್ತ ಪರೀಕ್ಷೆ ಹಾಗೂ ಚಿಕಿತ್ಸೆ ನೀಡಲಾಗುತ್ತದೆ’ ಎಂದು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ