ಬೆಂಗಳೂರು
ಆ ಹುಡುಗ ಇನ್ನು ಎಳಸು. ಆತನಿಗೆ ಇನ್ನು ಅನುಭವವಿಲ್ಲ. ಅವನೊಬ್ಬ ವೇಸ್ಟ್ ಮೆಟೀರಿಯಲ್. ಗೌರವ ಕೊಟ್ಟು ಕರೆದು ಮಾತಾಡಿದರೆ ಬಾಯಿಗೆ ಬಂದಂತೆ ವದರುತ್ತಿದ್ದಾನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಟನಲ್ ರಸ್ತೆ ಬೇಡ ಎಂದು ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು? ಈ ದೇಶದಲ್ಲಿ, ಪ್ರಪಂಚದಲ್ಲಿಯೇ ಟನಲ್ ರಸ್ತೆಗಳೇ ಬೇಡ ಎಂದು ಅವನು ಕೇಂದ್ರ ಸಚಿವನಾದ ಮೇಲೆ ಲೋಕಸಭೆಯಲ್ಲಿ ತೀರ್ಮಾನ ಮಾಡಲಿ ಎಂದು ಕಿಡಿಕಾರಿದ್ದಾರೆ. ನಗರದ ಖಾಸಗಿ ಹೋಟೆಲ್ನಲ್ಲಿ ಗುರುವಾರ ಮಾಧ್ಯಮಗಳ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.
ಟನಲ್ ರಸ್ತೆ ಯೋಜನೆಯನ್ನು ತಂತ್ರಜ್ಞರ ಅಭಿಪ್ರಾಯ ಪಡೆದು ಮಾಡಬೇಕಿತ್ತು ಎನ್ನುವ ಹೇಳಿಕೆಯ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ ಅವರು, ʼಏನೋ ಹೋಗಲಿ ಅಂತ ಗೌರವ ಕೊಟ್ಟು ನನ್ನ ಜತೆ ಮಾತನಾಡಲು ಅವಕಾಶ ನೀಡಿದರೆ ಏನೇನೋ ಮಾತನಾಡುತ್ತಿದ್ದಾನೆ. ಆದರೆ ನಾನು ಆತನ ಬಗ್ಗೆ ಮಾತನಾಡಲು ಹೋಗುವುದಿಲ್ಲ. ಸಂಸದ ತೇಜಸ್ವಿ ಸೂರ್ಯನಿಗೆ ಪ್ರಪಂಚ ಹೇಗಿದೆ ಎಂದೇ ಗೊತ್ತಿಲ್ಲʼ ಎಂದು ಟೀಕಿಸಿದರು.
ನಾನು ಹುಡುಗನ ಬಳಿ ಕಾರಿಲ್ಲದಿದ್ದರೆ ಹೆಣ್ಣು ನೀಡುವುದಿಲ್ಲ ಎಂದಿದ್ದೆ. ಅದನ್ನೇ ಹಿಡಿದುಕೊಂಡು ಮಾತಾಡುತ್ತಿದ್ದಾನೆ. ಈತ ಏಕೆ ಕಾರಲ್ಲಿ ಓಡಾಡುತ್ತಿದ್ದಾನೆ? ಆತ, ಆತನ ಕುಟುಂಬ ಸದಸ್ಯರು ಮೆಟ್ರೋ, ಸರ್ಕಾರಿ ಬಸ್ ಬಳಸಲಿ. ಅವರ ಪಕ್ಷದ ಶಾಸಕರು ಮೆಟ್ರೋ, ಆಟೋರಿಕ್ಷಾ, ಸಾರ್ವಜನಿಕ ಸಾರಿಗೆಗಳಲ್ಲಿ ಓಡಾಡಲಿ. ಬೇಡ ಎಂದವರಾರು? ಇವರಿಗೆ ಕಾರುಗಳು ಏಕೆ ಬೇಕು? ಬೆಂಗಳೂರಿನಲ್ಲಿ 1.30 ಕೋಟಿಗೂ ಹೆಚ್ಚು ವಾಹನಗಳಿವೆ ಎಂಬುದನ್ನು ಆತ ಅರ್ಥ ಮಾಡಿಕೊಳ್ಳಬೇಕು, ಅವರಿಗೆಲ್ಲ ವಾಹನ ಬಳಸಬೇಡಿ ಎಂದು ಹೇಳಲು ಆಗುತ್ತದೆಯೇʼ ಎಂದರು.
ಮದುವೆ ಮಾಡಿಸಲು ಈ ಯೋಜನೆ ಕೈಗೆತ್ತಿಕೊಂಡಿದ್ದಾರೆ ಎನ್ನುವ ಟೀಕೆಯ ಬಗ್ಗೆ ಕೇಳಿದಾಗ, ʼಅದಕ್ಕೆ ನಾನು ಆತನನ್ನು ಎಳಸು ಎಂದು ಕರೆದಿದ್ದು. ನೀವೆಲ್ಲರೂ ಕ್ಯಾಮೆರಾ ಹಿಡಿದುಕೊಂಡು (ಮಾಧ್ಯಮದವರು) ಸಾರ್ವಜನಿಕ ಸಾರಿಗೆಯಲ್ಲಿ ಓಡಾಡಿಕೊಂಡು ಕೆಲಸ ಮಾಡಲು ಆಗುತ್ತದೆಯೇ? ಶಾಲಾ ಮಕ್ಕಳನ್ನು ಶಾಲಾ ವಾಹನದಲ್ಲಿ ಕಳುಹಿಸುತ್ತಾರೆ. ಅವರಿಗೆ ಸಾರ್ವಜನಿಕ ಸಾರಿಗೆಯಲ್ಲಿ ಕಳುಹಿಸಿ ಎಂದು ಹೇಳಲು ಆಗುತ್ತದೆಯೇ?ʼ ಎಂದು ಹೇಳಿದರು.
ಈ ರಾಜ್ಯಕ್ಕೆ ಮೆಟ್ರೋ ತಂದವರು ನಾವು. ಅವರಿಗೆ ಅಧಿಕಾರ ಇದ್ದಾಗ ಏನು ಮಾಡಿದ್ದಾರೆ? ಕೇಂದ್ರದಿಂದ ಏನು ತೆಗೆದುಕೊಂಡು ಬಂದಿದ್ದಾರೆ? ಬೆಂಗಳೂರಲ್ಲಿ ಎಷ್ಟು ಪಿಲ್ಲರ್ ಹಾಕಿದ್ದಾರೆ? ಯೋಜನೆಗೆ ಹಣವೆಷ್ಟು ತಂದಿದ್ದಾರೆ? ಕೇಂದ್ರ ಸರ್ಕಾರ ಮೆಟ್ರೋ ಯೋಜನೆಗೆ ಶೇ.11-12 ರಷ್ಟು ಹಣ ನೀಡುತ್ತಿದೆ. ಭೂ ಪರಿಹಾರ ಸೇರಿದಂತೆ ಎಲ್ಲವನ್ನೂ ನಾವೇ ನೀಡುತ್ತಿದ್ದೇವೆʼ ಎಂದು ತಿಳಿಸಿದರು.
ʼ ಅವನ ಬಗ್ಗೆ ನನ್ನ ಬಳಿ ಯಾವ ಪ್ರಶ್ನೆಯನ್ನೂ ಕೇಳಬೇಡಿ. ಹೋಲಿಕೆ ಮಾಡಬೇಡಿ. ಹೀ ಇಸ್ ಎ ವೇಸ್ಟ್ ಮೆಟಿರಿಯಲ್, ಖಾಲಿ ಟ್ರಂಕ್ ಆತ. ಅವರ ಪಕ್ಷದ ಹಿರಿಯ ನಾಯಕರಾದ ಅಶೋಕ್, ಅಶ್ವತ್ಥ ನಾರಾಯಣ್, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅಂತಹವರು ಮಾತನಾಡಿದರೆ ಉತ್ತರ ನೀಡೋಣ. ಏಕೆಂದರೆ ಅವರಿಗೆ ಇದೆಲ್ಲವೂ ಅರ್ಥವಾಗುತ್ತದೆ. ಬೆಂಗಳೂರಿನಲ್ಲಿ ಬಿಆರ್ಟಿಎಸ್ ಮಾಡಲು ಎಲ್ಲಿ ಜಾಗವಿದೆ? ಭೂ ಪರಿಹಾರ ಎಷ್ಟಾಗುತ್ತದೆ ಎನ್ನುವ ಅರಿವು ತೇಜಸ್ವಿ ಸೂರ್ಯನಿಗೆ ತಲೆಯಲ್ಲಿಯೇ ಇಲ್ಲʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.

 


