ನಕಲಿ ಪನೀರ್‌ ಮಾರಾಟ ಹೆಚ್ಚಳ: ಸೂಕ್ತ ಕ್ರಮಕ್ಕೆ ಸಚಿವ ಜೆಪಿ ನಡ್ಡಾಗೆ ಪ್ರಲ್ಹಾದ ಜೋಶಿ ಪತ್ರ

ಬೆಂಗಳೂರು

    ದೇಶಾದ್ಯಂತ ಮಾರುಕಟ್ಟೆಯಲ್ಲಿ ನಕಲಿ ಮತ್ತು ಕಲಬೆರಕೆ ಪನೀರ್‌ ಮಾರಾಟವಾಗುತ್ತಿದೆ. ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟ ಮತ್ತು ಬಳಕೆ ಹೆಚ್ಚುತ್ತಿರುವ ಬಗ್ಗೆ ರಾಷ್ಟ್ರೀಯ ಗ್ರಾಹಕ ಸಹಾಯವಾಣಿಗೆ ವ್ಯಾಪಕ ದೂರುಗಳು ಬರುತ್ತಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ  ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾಗೆ ಪತ್ರ ಬರೆದಿದ್ದು, ಕ್ರಮಕ್ಕೆ ಒತ್ತಾಯಿಸಿದ್ದಾರೆ. 

    ದೇಶದ ಮಾರುಕಟ್ಟೆಗಳಲ್ಲಿ ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟದ ಬಗ್ಗೆ ಕಳೆದ ಕೆಲವು ದಿನಗಳಿಂದ ರಾಷ್ಟ್ರೀಯ ಗ್ರಾಹಕ ಸಹಾಯವಾಣಿಗೆ ಅನೇಕ ದೂರುಗಳು ಬಂದಿವೆ. ಹೀಗಾಗಿ ಇದರ ವಿರುದ್ಧ ತ್ವರಿತ ಕ್ರಮಕೈಗೊಳ್ಳಿ ಎಂದು ಸಚಿವ ಪ್ರಲ್ಹಾದ ಜೋಶಿ ಕೇಂದ್ರ ಆರೋಗ್ಯ ಸಚಿವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

    ಫಾಸ್ಟ್ ಫುಡ್ ಕೇಂದ್ರಗಳು, ರೆಸ್ಟೋರೆಂಟ್‌ಗಳು ಇತರೆಡೆ ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟ ಮಾಡಲಾಗುತ್ತಿದೆ. ವಿಶೇಷವಾಗಿ ಪನೀರ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥವಾಗಿದ್ದರಿಂದ ಇದನ್ನು ಗಮನಿಸಿರುವ ಅನೇಕ ಸಾರ್ವಜನಿಕರು ಗ್ರಾಹಕ ಸಹಾಯವಾಣಿ ಮೂಲಕ ವ್ಯಾಪಕವಾಗಿ ದೂರು ಸಲ್ಲಿಸಿ ಗಮನ ಸೆಳೆದಿದ್ದಾರೆ. ಕಲಬೆರಕೆ ಪನೀರ್‌ ಸೇವನೆಯಿಂದ ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಗ್ರಾಹಕರು ನೀಡಿದ ದೂರಿನಲ್ಲಿ ತೀವ್ರ ಕಳವಳ ಸಹ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಆಹಾರ ಗುಣಮಟ್ಟ ಮತ್ತು ಸುರಕ್ಷತೆಗಾಗಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜನರ ದುಗುಡವನ್ನು ತಮ್ಮ ಗಮನಕ್ಕೆ ತರಬಯಸಿದ್ದೇನೆ ಎಂದು ಸಚಿವ ಜೋಶಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

   ಗ್ರಾಹಕರು ರಾಷ್ಟ್ರೀಯ ಗ್ರಾಹಕ ಸಹಾಯವಾಣಿ ಪೋರ್ಟಲ್‌ನಲ್ಲಿ ಹಲವು ದೂರುಗಳನ್ನು ದಾಖಲಿಸಿದ್ದಾರೆ. ಇದು ದೇಶಾದ್ಯಂತ ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟ ಮತ್ತು ಬಳಕೆ ಹೆಚ್ಚುತ್ತಿರುವ ಪ್ರವೃತ್ತಿಯನ್ನು ಎತ್ತಿ ತೋರಿಸುತ್ತದೆ. ಅಂತಹ ನಕಲಿ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಸೇವನೆಯು ಜನರ ತೀವ್ರ ಮತ್ತು ದೀರ್ಘ ಕಾಲದ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಹಾಗಾಗಿ ಇದರ ವಿರುದ್ಧ ಕ್ರಮಕೈಗೊಳ್ಳಿ ಎಂದು ಒತ್ತಾಯಿಸಿದ್ದಾರೆ. 

   ಪನೀರ್‌ ಉತ್ಪಾದನಾ ಸಂಸ್ಥೆಗಳು ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆ 2006ರ ಪ್ರಕಾರ ಆಹಾರ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವರಿಗೆ ಪ್ರಲ್ಹಾದ ಜೋಶಿ ಮನವಿ ಮಾಡಿದ್ದಾರೆ.

Recent Articles

spot_img

Related Stories

Share via
Copy link