ಯತ್ನಾಳ್ ಹೇಳಿಕೆ ಬಗ್ಗೆ ಐಟಿ, ಇಡಿ ತನಿಖೆಗೆ ಡಿಕೆಶಿ ಆಗ್ರಹ

ಬೆಂಗಳೂರು:

    ಬಿಜೆಪಿಯ ಹಿರಿಯ ಶಾಸಕರೊಬ್ಬರು ಕಾಂಗ್ರೆಸ್ ಸರ್ಕಾರ ಬೀಳಿಸಲು 1200 ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ ಎಂದು ಹೇಳಿದ್ದು, ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯದಿಂದ ತನಿಖೆಯಾಗಬೇಕು ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸೋಮವಾರ ಆಗ್ರಹಿಸಿದ್ದಾರೆ.

   ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವನ್ನು ಬೀಳಿಸಲು ಷಡ್ಯಂತ್ರ ರೂಪಿಸಲಾಗಿದೆ,ಇದಕ್ಕಾಗಿ 1,200 ಕೋಟಿ ರೂ. ಹಣ ಮೀಸಲ ಇಡಲಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

  ಇಂದು ಯತ್ನಾಳ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಈ ಬಗ್ಗೆ ಚರ್ಚಿಸಲು ​ಕಾಂಗ್ರೆಸ್ ಕಾನೂನು ತಂಡದ ಸಭೆ ಕರೆದಿದ್ದೇನೆ. 1,200 ಕೋಟಿ ರೂಪಾಯಿ ರೆಡಿಯಾಗಿದೆ ಎಂದು ಹೇಳಿಕೆ ಕೊಟ್ಟಿದ್ದಾರೆ. ಬಿಜೆಪಿ ಕಡೆಯಿಂದ ಈ ಹಣ ರೆಡಿಯಾಗಿದೆ ಎಂಬ ಮಾಹಿತಿ ಇದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಈ ಮಾಹಿತಿಯನ್ನು ತಿಳಿಸಿದ್ದೇನೆ. ಇದು ತೆರಿಗೆ ಇಲಾಖೆ ಹಾಗೂ ಇಡಿ(ಜಾರಿ ನಿರ್ದೇಶನಾಲಯ) ತನಿಖೆಯ ವ್ಯಾಪ್ತಿಗೆ ಬರುವ ವಿಚಾರ. ದೂರು ನೀಡುವ ಸಂಬಂಧ ಇಂದು ಚರ್ಚೆ ಮಾಡುತ್ತೇವೆ ಎಂದರು.

  ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ(ಕೆಪಿಸಿಸಿ) ಸಭೆಯನ್ನು ಕರೆದಿದ್ದೇನೆ. ಅವರು ನಮ್ಮ ಸರ್ಕಾರವನ್ನು ಉರುಳಿಸಲು 1,200 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದಾರೆ. ನಾವು ನಮ್ಮ ಕಾನೂನು ತಂಡದೊಂದಿಗೆ ಚರ್ಚಿಸುತ್ತೇವೆ. ಈ ವಿಷಯವನ್ನು ಪಕ್ಷದ ಹೈಕಮಾಂಡ್ ಗಮನಕ್ಕೂ ತಂದಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

  ಈ ವಿಷಯವನ್ನು ಆದಾಯ ತೆರಿಗೆ ಇಲಾಖೆಯಿಂದ ತನಿಖೆ ಮಾಡಬೇಕು. ಈ ಬಗ್ಗೆ ಕಾನೂನು ಏನು ಹೇಳುತ್ತದೆ ಎಂಬುದನ್ನು ತಿಳಿಯಲು ನಾನು ಕೆಪಿಸಿಸಿಯಲ್ಲಿ ಸಭೆ ಕರೆದಿದ್ದೇನೆ. ಅಲ್ಲದೆ ಗೃಹ ಸಚಿವ ಜಿ ಪರಮೇಶ್ವರ ಅವರನ್ನು ಭೇಟಿ ಮಾಡಿ, ಈ ಕುರಿತು ಕಾನೂನು ಆಯ್ಕೆಗಳ ಬಗ್ಗೆ ಚರ್ಚಿಸಿದ್ದೇನೆ ಎಂದರು.

  ಸರ್ಕಾರ ಬೀಳಿಸುವ ಷಡ್ಯಂತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳ ನಾಯಕರು ಇದ್ದಾರೆ. ಬಿಜೆಪಿ ಹೈಕಮಾಂಡ್‌ಗೆ ಆಸಕ್ತಿಯಿಲ್ಲದಿದ್ದರೂ ಬಿಜೆಪಿಯೊಳಗಿನ ಕೆಲವು ವಿಭಾಗಗಳು ಆಪರೇಷನ್ ಕಮಲದ ಬಗ್ಗೆ ಯೋಚಿಸುತ್ತಿವೆ , “ಈ ಸಂಚಿನ ಬಗ್ಗೆ ನನಗೆ ಮಾಹಿತಿ ಇದೆ” ಎಂದು ಯತ್ನಾಳ್ ಹೇಳಿದ್ದರು.

Recent Articles

spot_img

Related Stories

Share via
Copy link