ಶ್ರೀನಗರ:
ಏ. 22 ರಂದು ಪಹಲ್ಗಾಮ್ನಲ್ಲಿ ನಡೆದ ದಾಳಿ ಬಳಿಕ ಉಗ್ರರ ವಿರುದ್ಧ ಕಾರ್ಯಾಚರಣೆ ಜೋರಾಗಿದೆ. ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದ ಉಗ್ರರ ತಾಣಗಳನ್ನು ಧ್ವಂಸ ಮಾಡಿದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರಿಗಾಗಿ ಶೋಧ ಮತ್ತಷ್ಟು ಹೆಚ್ಚಾಗಿದೆ. ಮಂಗಳವಾರ ಶೋಪಿಯಾನ್ನ ಜಿನ್ಪಥರ್ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಒಬ್ಬ ಲಷ್ಕರ್-ಎ-ತೈಬಾ ಭಯೋತ್ಪಾದಕ ಹತನಾಗಿದ್ದಾನೆ ಎಂದು ತಿಳಿದು ಬಂದಿದೆ. ಇತರ ಇಬ್ಬರು ಲಷ್ಕರ್ ಭಯೋತ್ಪಾದಕರನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿದೆ.
ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿಂದಿನ ಕೈವಾಡವಿದೆ ಎಂದು ನಂಬಲಾದ ಮೂವರು ಪಾಕಿಸ್ತಾನಿ ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್, ಅಲಿ ಭಾಯ್ ಮತ್ತು ಹಾಶಿಮ್ ಮೂಸಾ ಅವರ ‘ಭಯೋತ್ಪಾದಕ ಮುಕ್ತ ಕಾಶ್ಮೀರ’ ಪೋಸ್ಟರ್ಗಳನ್ನು ಭದ್ರತಾ ಸಂಸ್ಥೆಗಳು ಹಾಕಿದ ಕೆಲವೇ ಕ್ಷಣಗಳ ನಂತರ ಈ ಬೆಳವಣಿಗೆ ನಡೆದಿದೆ .
ಮೇ 6 ರಂದು ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ನಡೆದ ನಾಕಾ-ತಪಾಸಣಾ ಕಾರ್ಯಾಚರಣೆಯ ಸಂದರ್ಭದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕ ಸಂಘಟನೆಗೆ ಸಹಾಯಕಾಗಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿತ್ತು. ಶಂಕಿತರಿಂದ ಒಂದು ಪಿಸ್ತೂಲ್, ಒಂದು ಗ್ರೆನೇಡ್ ಮತ್ತು 15 ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರ ಮೇಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಮೇ 5 ರಂದು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಭಯೋತ್ಪಾದಕ ಅಡಗುತಾಣದಿಂದ ಭದ್ರತಾ ಪಡೆಗಳು ಐದು ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ವಶಪಡಿಸಿಕೊಂಡಿವೆ ಎಂದು ತಿಳಿದು ಬಂದಿದೆ. ಪಹಲ್ಗಾಮ್ನಲ್ಲಿ 26 ಜನರನ್ನು ಗುಂಡಿಕ್ಕಿ ಕೊಂದ ಭಯೋತ್ಪಾದಕರಿಗಾಗಿ ಭಾರಿ ಶೋಧ ನಡೆಯುತ್ತಿದೆ. ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಪೂಂಚ್ನ ಸುರಂಕೋಟೆ ಅರಣ್ಯ ಪ್ರದೇಶದಲ್ಲಿ ಅಡಗುತಾಣವನ್ನು ಪತ್ತೆಹಚ್ಚಿದ್ದಾರೆ.
ಸುರನ್ಕೋಟ್ ಸೆಕ್ಟರ್ನ ಹರಿ ಮರೋಟೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಭಾನುವಾರ ಸಂಜೆ ಉಗ್ರರ ಅಡಗುತಾಣವನ್ನು ಭೇದಿಸಲಾಗಿದೆ ಎಂದು ಪೂಂಚ್ ಪೊಲೀಸರು ತಿಳಿಸಿದ್ದಾರೆ.
