ನವದೆಹಲಿ:
ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂಜೆ ರಾಷ್ಟ್ರ ರಾಜಧಾನಿಯಲ್ಲಿ ಅಮೆರಿಕದ ರಾಷ್ಟ್ರೀಯ ಗುಪ್ತಚರ(ಡಿಎನ್ಐ) ನಿರ್ದೇಶಕಿ ತುಳಸಿ ಗಬ್ಬಾರ್ಡ್ ಅವರನ್ನು ಭೇಟಿಯಾಗಿದ್ದಾರೆ. ಅವರ ಭೇಟಿಯ ಸಮಯದಲ್ಲಿ ಇಬ್ಬರೂ ಉಡುಗೊರೆಗಳನ್ನು ವಿನಿಮಯ ಮಾಡಿಕೊಂಡರು. ತುಳಸಿ ಗಬ್ಬಾರ್ಡ್ ಅವರಿಗೆ ಪ್ರಧಾನಿ ಮೋದಿ ಇತ್ತೀಚೆಗೆ ಪ್ರಯಾಗ್ರಾಜ್ನಲ್ಲಿ ನಡೆದ ಮಹಾಕುಂಭ ಮೇಳದಿಂದ ಸಂಗ್ರಹಿಸಿದ್ದ ಪವಿತ್ರ ಗಂಗಾಜಲವನ್ನು ನೀಡಿದರು. ಗಬ್ಬಾರ್ಡ್ ಅವರು ಮಾರ್ಚ್ 18 ರಂದು ದೆಹಲಿಯಲ್ಲಿ ಭದ್ರತಾ ಅಧಿಕಾರಿಗಳ ಬಹುರಾಷ್ಟ್ರೀಯ ಸಭೆಯಾದ ರೈಸಿನಾ ಸಂವಾದದಲ್ಲಿ ಭಾಗವಹಿಸುವುದರೊಂದಿಗೆ ಅವರ ಎರಡು ದಿನಗಳ ಭಾರತ ಪ್ರವಾಸ ಮುಕ್ತಾಯಗೊಳ್ಳಲಿದೆ.
ಮೋದಿ ಮತ್ತು ಗಬ್ಬಾರ್ಡ್ ಭಯೋತ್ಪಾದನೆ ಮತ್ತು ಸೈಬರ್ ಭದ್ರತೆಯಂತಹ ಬೆದರಿಕೆಗಳನ್ನು ನಿಭಾಯಿಸಲು ಸಹಕಾರವನ್ನು ಹೆಚ್ಚಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದ್ದಾರೆ. ಪ್ರಧಾನ ಮಂತ್ರಿಯವರೊಂದಿಗಿನ ಸಭೆಗೂ ಮುನ್ನ, ಗಬ್ಬಾರ್ಡ್ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಭಾರತ- ಅಮೆರಿಕ ಪಾಲುದಾರಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸಲು ಗುಪ್ತಚರ ಹಂಚಿಕೆ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಿದರು.
ಖಲಿಸ್ತಾನಿ ಪ್ರತ್ಯೇಕವಾದಿ ಸಂಘಟನೆ ಸಿಖ್ಸ್ ಫಾರ್ ಜಸ್ಟೀಸ್ ಅಮೆರಿಕದಲ್ಲಿ ಭಾರತ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವುದರಿಂದ ಬಗ್ಗೆ ರಾಜನಾಥ್ ಸಿಂಗ್ ಅವರು ತುಳಸಿ ಅವರ ಎದುರಿಗೆ ಕಳವಳ ವ್ಯಕ್ತಪಡಸಿದ್ದಾರೆ. ಅದನ್ನು ಘೋಷಿತ ಭಯೋತ್ಪಾದಕ ಸಂಘಟನೆ ಎಂದು ಘೋಷಿಸುವಂತೆ ಒತ್ತಾಯಿಸಿದರು ಎಂದು ಮೂಲಗಳು ತಿಳಿಸಿವೆ.
ರೈಸಿನಾ ಹಿಲ್ಸ್ನಲ್ಲಿರುವ ತಮ್ಮ ಕಚೇರಿಯಲ್ಲಿ 30 ನಿಮಿಷಗಳಿಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ, ಸಿಂಗ್ ಅವರು ಪಾಕಿಸ್ತಾನದ ಗೂಢಚಾರ ಸಂಸ್ಥೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್(ISI) ಜೊತೆಗೆ ನಂಟು ಹೊಂದಿರುವ SFJ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಸೋಮವಾರ ದೆಹಲಿಯಲ್ಲಿ 20ಕ್ಕೂ ಹೆಚ್ಚು ರಾಷ್ಟ್ರಗಳ ಗುಪ್ತಚರ ಮುಖ್ಯಸ್ಥರೊಂದಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುಪ್ತಚರ ಮಾಹಿತಿ ಹಂಚಿಕೆ ಬಲಪಡಿಸುವುದು ಮತ್ತು ಅಂತಾರಾಷ್ಟ್ರೀಯ ಅಪರಾಧಗಳನ್ನು ನಿಗ್ರಹಿಸುವ ಬಗ್ಗೆ ಚರ್ಚೆ ನಡೆಯಿತು. ಅದರಲ್ಲೂ ಜಾಗತಿಕ ಭಯೋತ್ಪಾದನೆ ವಿರುದ್ಧ ಹೋರಾಟಕ್ಕೆ ಹೆಚ್ಚಿನ ಒತ್ತು ನೀಡಲಾಯಿತು.
