ಗ್ಯಾರಂಟಿ ಯೋಜನೆಗೆ : ಪರಿಷ್ಕರಣೆಗೆ ಮುಂದಾಯ್ತ ಸರ್ಕಾರ

ಬೆಂಗಳೂರು:

   ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಮುಂದಾಗಿದೆ. ಈ ಮೂಲಕ ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆ ತಲುಪುವಂತೆ ಮಾಡಿ, ವೆಚ್ಚ ಕಡಿತಕ್ಕೆ ಮುಂದಾಗಿದೆ.

   ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನವನ್ನು ಸರಳೀಕರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌ಕೆ ಅತೀಕ್ ಮತ್ತು ಕಾರ್ಯದರ್ಶಿ (ವೆಚ್ಚ) ಪಿ ಸಿ ಜಾಫರ್ ಸೇರಿದಂತೆ ಹಣಕಾಸು ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

   ಸಭೆಯಲ್ಲಿ ರಾಜ್ಯದ ಹಣಕಾಸು ಪರಿಸ್ಥಿತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪರಾಮರ್ಶೆಗೆ ಸಂಬಂಧಪಟ್ಟಂತೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಕುಟುಂಬಗಳು ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳಾಗಿದ್ದು, ಈ ಹಿನ್ನೆಲೆಯಲ್ಲಿ ನಕಲಿ ಬಿಪಿಎಲ್ ಕಾರ್ಡ್‌ಗಳನ್ನು ತೆಗೆದುಹಾಕುವ ಕಾರ್ಯವನ್ನು ವೇಗಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. 

ಈ ನಿಟ್ಟಿನಲ್ಲಿ ಫಲಾನುಭವಿಗಳ ಸಂಖ್ಯೆಯನ್ನು ಕಡಿತಗೊಳಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

   ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗಿ ಪರಿಣಮಿಸಿದ್ದು, ಪರಿಹಾರ ಕಂಡು ಕೊಳ್ಳುವುದು ಕಷ್ಟಕರವಾಗಿದೆ. ಆದರೆ, ಸರ್ಕಾರ ಗ್ಯಾರಂಟಿ ಯೋಜನೆಗಳ ಮುಂದುವರೆಸಲು ಬದ್ಧವಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

   ಇದೇ ವೇಳೆ ಮುಖ್ಯಮಂತ್ರಿಗಳು ರಾಜ್ಯದ ಹಣಕಾಸು ಪ್ರಗತಿಯನ್ನೂ ಪರಿಶೀಲನೆ ನಡೆಸಿದ್ದು, ಗುರಿಗೆ ಹೋಲಿಸಿದರೆ ಶೇ.3ರಷ್ಟು ಆದಾಯ ಕಡಿಮೆ ಸಂಗ್ರಹವಾಗಿರುವುದು ಕಂಡುಬಂದಿದೆ. ಆದಾಯ ಸಂಗ್ರಹವು 42-43% ರಷ್ಟಿದೆ, ಆದರೆ, ಗುರಿ ಶೇ.46 ಗುರಿ ಹೊಂದಲಾಗಿತ್ತು ಎನ್ನಲಾಗಿದೆ. ಹೀಗಾಗಿ 2024-25ನೇ ಹಣಕಾಸು ವರ್ಷದಲ್ಲಿ ಗುರಿ ತಲುಪಲು ಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.