ಕಾಂಗ್ರೆಸ್ ಸರ್ಕಾರದ ವಿರುದ್ಧ ಕಾರಜೋಳ ಗರಂ

ಬೆಂಗಳೂರು

    ಈಗಿನ ವೇಳಾಪಟ್ಟಿ ಪ್ರಕಾರ ಡಿಸೆಂಬರ್ 8ಕ್ಕೆ ಬೆಳಗಾವಿ ಅಧಿವೇಶನ ಆರಂಭ ಆಗಲಿದೆ. ಅಷ್ಟರೊಳಗೆ ಸುಪ್ರೀಂ ಕೋರ್ಟ್, ಹೈಕೋರ್ಟಿನಲ್ಲಿ ಕೇಸುಗಳು ದಾಖಲಾಗಿ ಒಳಮೀಸಲಾತಿ  ಕುರಿತ ಆದೇಶ ರದ್ದಾಗಬೇಕೆಂಬುದೇ ಸಿದ್ದರಾಮಯ್ಯರ ಸರ್ಕಾರದ ದುರುದ್ದೇಶ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಆರೋಪಿಸಿದ್ದಾರೆ.

   ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಗುರುವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಳೆದ 30 ವರ್ಷಗಳಿಂದ ರಾಜ್ಯದಲ್ಲಿ ಪರಿಶಿಷ್ಟ ಜನಾಂಗ, ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಆಗಬೇಕು. 101 ಜಾತಿಗಳಿಗೆ ಸಾಮಾಜಿಕ ನ್ಯಾಯದಲ್ಲಿ ಎಲ್ಲರಿಗೂ ಮೀಸಲಾತಿ ಸೌಲಭ್ಯ ಸಿಗಬೇಕೆಂದು ನಿರಂತರ ಹೋರಾಟ ಮಾಡಿದ್ದರ ಪ್ರಯುಕ್ತ ನರೇಂದ್ರ ಮೋದಿ ಅವರ ಸರ್ಕಾರವು ಮುತುವರ್ಜಿ ವಹಿಸಿ ನ್ಯಾಯ ದೊರಕಿಸಿ ಕೊಟ್ಟು ಇಂದಿಗೆ ಒಂದು ವರ್ಷ 3 ತಿಂಗಳಾಗಿದೆ. ಆದರೂ ಕರ್ನಾಟಕದ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರ್ಕಾರವು ವಿಳಂಬ ನೀತಿ ಜತೆಗೆ ಗೊಂದಲ ಸೃಷ್ಟಿಸುತ್ತಿದೆ ಎಂದು ದೂರಿದರು.

   ದೋಷಭರಿತ ಆದೇಶಗಳನ್ನು ಮಾಡುತ್ತಿದೆ. ಈ ಮೂಲಕ ಪರಿಶಿಷ್ಟ ಜನಾಂಗದವರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಸಿದ್ದರಾಮಯ್ಯರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಈಚೆಗೆ ಹೈಕೋರ್ಟಿನಲ್ಲಿ ಕೇಸ್ ಬಂದಾಗ ರಾಜ್ಯ ಸರ್ಕಾರದ ಕಡೆಯಿಂದ ಯಾರೂ ಹಾಜರಾಗಿಲ್ಲ, ಹೀಗಾಗಿ ಆದೇಶ ಭಾಗಶಃ ತಡೆಯಾಗಿದೆ ಎಂದು ತಿಳಿಸಿದರು. 

   ಒಂದು ಜಾತಿಯ ಹಿತಕ್ಕಾಗಿ ಸಿದ್ದರಾಮಯ್ಯನವರು ಈ ದೊಂಬರಾಟ ಮಾಡುತ್ತಿದ್ದಾರೆ. 101 ಜಾತಿಯ ಹಿತ ಕಾಯಲು ಅವರು ಬಯಸುತ್ತಿಲ್ಲ. ಆರ್ಥಿಕ ಸಂಕಷ್ಟ ಇರುವುದರಿಂದ ನೇಮಕಾತಿ ಮುಂದೆ ಹೋದಷ್ಟೂ ಅವರಿಗೆ ಒಳ್ಳೆಯದೆಂಬ ಭಾವನೆ ಇದೆ. ಖಜಾನೆ ಖಾಲಿ ಆಗಿದೆ. ನೇಮಕಾತಿ ಮಾಡಲೂ ಅವರು ತಯಾರಿಲ್ಲ ಎಂದು ಗೋವಿಂದ ಕಾರಜೋಳ ಅವರು ದೂರಿದರು. 

   ದಲಿತರು, ಅಸ್ಪೃಶ್ಯರು ಉದ್ಧಾರ ಆಗಬಾರದು ಎಂಬುದೇ ರಾಜ್ಯದ ಕಾಂಗ್ರೆಸ್ ಮನಸ್ಥಿತಿ. 79 ವರ್ಷ ಮತಬ್ಯಾಂಕ್ ಆಗಿದ್ದರು, ಮುಂದೆಯೂ 100 ವರ್ಷ ಮತಬ್ಯಾಂಕ್ ಆಗಿರಬೇಕು ಹಾಗೂ ಅವರು ಉದ್ಧಾರ ಆಗಬಾರದು ಎಂಬುದೇ ಕಾಂಗ್ರೆಸ್ಸಿನ ನೀಚಬುದ್ಧಿ ಎಂದು ಅವರು ಆರೋಪಿಸಿದರು.

   ಸಮಾಜಕಲ್ಯಾಣ ಇಲಾಖೆ ಸಮರ್ಪಕವಾಗಿ ವಾದ ಮಂಡನೆಗೆ ಯಾವುದೇ ತಯಾರಿ ಮಾಡುತ್ತಿಲ್ಲ. ಅವರೇ ನೇಮಿಸಿದ ನ್ಯಾ. ನಾಗಮೋಹನ್‍ದಾಸ್, ನ್ಯಾ.ಸದಾಶಿವ ಅವರ ವರದಿಯನ್ನೂ ಒಪ್ಪಿಲ್ಲ; ನಮ್ಮ ಸರ್ಕಾರದ ಮಾಧುಸ್ವಾಮಿಯವರ ಸಂಪುಟ ಉಪ ಸಮಿತಿ ವರದಿಯನ್ನೂ ಒಪ್ಪಿಲ್ಲ ಎಂದು ಟೀಕಿಸಿದರು.  

   ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ ಮಾತನಾಡಿ, ಒಳ ಮೀಸಲಾತಿ ವಿಚಾರದಲ್ಲಿ ಗೊಂದಲಗಳಿವೆ. ಸಂವಿಧಾನಬದ್ಧವಾಗಿ ಯೋಚಿಸದೇ ಈ ರಾಜ್ಯ ಸರ್ಕಾರವು ರಾಜಕೀಯ ತೀರ್ಮಾನ ತೆಗೆದುಕೊಂಡಿದೆ. ಒಂದು ವಾರದಿಂದ ಅಲೆಮಾರಿಗಳ ಮೀಸಲಾತಿ ಕುರಿತ ಚರ್ಚೆ ಮಾಡಲಾಗುತ್ತಿದೆ. ಅಲೆಮಾರಿ ಸಮುದಾಯವು ಪ್ರತ್ಯೇಕ ಮೀಸಲಾತಿ ಕೇಳುತ್ತಿದ್ದಾರೆ. ಅವರು ಪ್ಯಾಕೇಜ್ ಕೇಳುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಸಿಎಂ, ಈ ಸರ್ಕಾರವು ಮತ್ತೆ ಮತ್ತೆ ಗೊಂದಲ ಸೃಷ್ಟಿಸಲು ಹೊರಟಿದ್ದಾರೆ ಎಂದು ದೂರಿದರು. ಈ ವೇಳೆ ರಾಜ್ಯ ವಕ್ತಾರ ಎಚ್. ವೆಂಕಟೇಶ್ ದೊಡ್ಡೇರಿ, ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ಹೂಡಿ ಮಂಜುನಾಥ, ನಿವೃತ್ತ ಐ.ಎ.ಎಸ್. ಅಧಿಕಾರಿಗಳಾದ ಅನಿಲ್ ಕುಮಾರ್, ಲಕ್ಷ್ಮೀನಾರಾಯಣ್ ಉಪಸ್ಥಿತರಿದ್ದರು.

Recent Articles

spot_img

Related Stories

Share via
Copy link