ಎಂ.ಎನ್.ಕೋಟೆ:
ಸರ್ಕಾರಿ ಸೌಲಭ್ಯಗಳನ್ನು ಬಳಸಿಕೊಂಡು ಸರ್ಕಾರಿ ನಿಯಮಗಳನ್ನು ಪಾಲಿಸಿ ಆರೋಗ್ಯವಂತರಾಗಿ ಇರಿ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.
ಗುಬ್ಬಿ ತಾಲ್ಲೂಕಿನ ಹಾಗಲವಾಡಿ ಹೋಬಳಿಯ ಹೊಸಕೆರೆ ಗ್ರಾಮ ಪಂಚಾಯಿತಿ ಸದಸ್ಯ ಅಜಯ್ ಕುಮಾರ್ ಅವರು ಹೊಸಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬರುವ ರೋಗಿಗಳು ಹಾಗೂ ಕಡು ಬಡವರಿಗೆ ಕೂಲಿ ಕಾರ್ಮಿಕರಿಗೆ ಲಾಕ್ಡೌನ್ ಮುಗಿಯುವರಗೆ ಉಚಿತ ಊಟದ ವ್ಯವಸ್ಥೆಯನ್ನು ಏರ್ಪಡಿಸಿದ್ದು ಈ ಕಾರ್ಯಕ್ರಮಕ್ಕೆ ಎಸ್.ಆರ್.ಶ್ರೀನಿವಾಸ್ ಮಂಗಳವಾರ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಂಡಿದ್ದರೂ ಸಹ ಜನ ಅರ್ಥಮಾಡಿಕೊಳ್ಳದೆ ಇಲ್ಲ ಸಲ್ಲದ ನೆಪಹೇಳಿ ಓಡಾಡುತ್ತಿದ್ದು ಇದರಿಂದ ಕರೋನಾ ನಿಯಂತ್ರಣಕ್ಕೆ ಬರುತ್ತಿಲ್ಲ.
ಅಜಯ್ಕುಮಾರ್ ಅಂತಹ ಸಾಮಾಜಿಕ ಕಳಕಳಿ ಇರುವ ವ್ಯಕ್ತಿಗಳು ಗ್ರಾಮೀಣ ಪ್ರದೇಶದಿಂದ ಆಸ್ಪತ್ರೆಯವರಿಗೆ ಉಚಿತವಾಗಿ ಊಟದ ವ್ಯವಸ್ಥೆ ಮಾಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ಇಂತಹ ವ್ಯವಸ್ಥೆ ಸದುಪಯೊಗಪಡಿಸಿಕೊಂಡು ಆರೋಗ್ಯವಂತರಾಗಿ ಇರಿ ಎಂದರು. ಈಗಾಗಲೇ ತಾಲ್ಲೂಕಿನಲ್ಲಿ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳು, ಕಂದಾಯ ಅಧಿಕಾರಿಗಳು, ಆರೋಗ್ಯ ಇಲಾಖೆ ಮತ್ತು ಆಶಾ ಕಾರ್ಯಕರ್ತರ ಸಹಯೋಗದೊಂದಿಗೆ ಮನೆ ಮನೆ ಭೇಟಿ, ಕೊರೋನಾ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕೊರೋನಾ ನಿಯಂತ್ರಣಕ್ಕೆ ಬರುತ್ತಿದೆ. ಆದ್ದರಿಂದ ಯಾರು ಹೆದರುವ ಅವಶ್ಯಕತೆ ಇಲ್ಲ, ಜಾಗೃತಿಯಿಂದ ಇರಬೇಕಷ್ಟೆ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಸದಸ್ಯ ಅಜಯ್ಕುಮಾರ್ ಮಾತನಾಡಿ ನಗರ ಪ್ರದೇಶಗಳಲ್ಲಿ ಸಾಕಷ್ಟು ಸಂಘ ಸಂಸ್ಥೆಗಳಿಗೆ ಸರ್ಕಾರದ ಸೌಲತ್ತುಗಳು ದೊರೆಯುತ್ತಿದ್ದು ಗ್ರಾಮೀಣ ಪ್ರದೇಶದಲ್ಲಿ ಆಸ್ಪತ್ರೆಗೆ ಬಂದು ಹೋಗುವ ಬಡ ರೈತರಿಗೆ ಊಟದ ವ್ಯವಸ್ಥೆ, ಸಂಚಾರಿ ವ್ಯವಸ್ಥೆ ಇರುವುದಿಲ್ಲ ಇಂತಹ ಪರಿಸ್ಥಿತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಊಟದ ವ್ಯವಸ್ಥೆ ತುಂಬಾ ಅನುಕೂಲವಾಗುತ್ತದೆ ಎಂಬ ದೃಷ್ಠಿಯಿಂದ ಲಾಕ್ಡೌನ್ ಮುಗಿಯುವವರೆಗೆ ಹೊಸಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಊಟದ ವ್ಯವಸ್ಥೆಯನ್ನು ಏರ್ಪಡಿಸಲಾಗಿದೆ ರೈತರು ಹಾಗೂ ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ತೇವಡೆಹಳ್ಳಿ ಮಠದ ಶ್ರೀ ಗೋಸಲ ಚನ್ನಬಸವೇಶ್ವರ ಶಿವಾಚಾರ್ಯ ಸ್ವಾಮಿಜೀಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಗಳಗೌರಮ್ಮ, ಪಿಡಿಓ ಟಿ.ಗಂಗಣ್ಣ, ವೈಧ್ಯಾಧಿಕಾರಿ ಡಾ.ಮಹಾಲತೇಶ್, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಗುರುರೇಣುಕಾರಾಧ್ಯ, ಗ್ರಾಮ ಪಂಚಾಯಿತಿ ಸದಸ್ಯ ಮಹಾರುದ್ರಸ್ವಾಮಿ, ನರಸಿಂಹಮೂರ್ತಿ, ರೇಣುಕಯ್ಯ, ದಯಾನಂದ್, ಆಶಾ ಕಾರ್ಯಕರ್ತರು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ