ಸರ್ಕಾರಿ ಯೋಜನೆಗಳು ಜನರ ಮನೆ ಬಾಗಿಲು ತಲುಪುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಮಹದೇವಪ್ಪ ಖಡಕ್‌ ಸೂಚನೆ

ಮೈಸೂರು:

   ಅಭಿವೃದ್ಧಿಯತ್ತ ಗಮನಹರಿಸುವಂತೆ ಹಾಗೂ ಸರ್ಕಾರದ ಯೋಜನೆಗಳು ಜನರ ಮನೆ ಬಾಗಿಲು ತಲುಪುವಂತೆ ನೋಡಿಕೊಳ್ಳಿ ಎಂದು ಜಿಲ್ಲಾ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಅಧಿಕಾರಿಗಳಿಗೆ ಮಂಗಳವಾರ ಸೂಚನೆ ನೀಡಿದರು.

   ಟಿ. ನರಸೀಪುರದಲ್ಲಿ ಮಂಗಳವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬರುವ ಮುನ್ನ ನೀಡಿದ ಭರವಸೆಯನ್ನು ಈಡೇರಿಸುವುದು ಸರ್ಕಾರದ ಕರ್ತವ್ಯವಾಗಿದೆ‌. ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಿಸಲು ಜವಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ ಎಂದು ಹೇಳಿದರು.

   ಇತ್ತೀಚೆಗೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜನರ ಕಲ್ಯಾಣಕ್ಕೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಧಿಕಾರಿಗಳು ತಾಳ್ಮೆಯಿಂದ ಆಲಿಸುವ ಮತ್ತು ಅವರ ಸಮಸ್ಯೆಗಳನ್ನು ಪರಿಹರಿಸುವ ಮೂಲಕ ಸಾರ್ವಜನಿಕರೊಂದಿಗೆ ವಿಶ್ವಾಸ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

   ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಅಚ್ಚುಕಟ್ಟಾಗಿ ಕೆಲಸ ಮಾಡಬೇಕು. ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಸೌಲಭ್ಯ, ಪಡಿತರ ವಿತರಣೆ ಸೇರಿದಂತೆ ಎಲ್ಲಾ ಬಗೆಯ ಮೂಲಭೂತ ಸೌಕರ್ಯಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸಲು ಶ್ರಮವಹಿಸಬೇಕು. ಸರ್ಕಾರದ ಸೌಲಭ್ಯಗಳಿಂದ ಯಾರೂ ವಂಚಿತರಾಗಬಾರದು. ತಾಲ್ಲೂಕಿನಲ್ಲಿ 44,136 ಹೆಕ್ಟೇರ್ ಸಾಗುವಳಿ ವಿಸ್ತೀರ್ಣವಿದೆ. ಕೃಷಿಗೆ ಉಪಯೋಗವಿರುವ ಜಮೀನಿನಲ್ಲಿ ಮಣ್ಣಿನ ಫಲವತ್ತತೆ ಹೆಚ್ಚಿಸಲು ಹಸಿರೆಲೆ ಬಿತ್ತನೆಗೆ ಕ್ರಮವಹಿಸಿ. ರಸಗೊಬ್ಬರ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ರೈತರಿಗೆ ವ್ಯಾಪಕ ಅರಿವು ಮೂಡಿಸಿ. ಅದಕ್ಕೆ ಪರ್ಯಾಯವಾಗಿ ಸಾವಯವ ಗೊಬ್ಬರ ಬಳಸುವಂತೆ ತಿಳಿಸಿ.

   ಸರ್ಕಾರದಿಂದ ರೈತರಿಗೆ ದೊರಕುವ ಸೌಲಭ್ಯವನ್ನು ಪರಿಣಾಮಕಾರಿಯಾಗಿ ತಲುಪಿಸಿ. ಈ ಸಂಬಂಧ ಮಾಹಿತಿಯನ್ನು ಕಾಲಕಾಲಕ್ಕೆ ನನಗೆ ನೀಡಬೇಕು. ಅಗತ್ಯಕ್ಕೆ ತಕ್ಕಂತೆ ಬಿತ್ತನೆ ಬೀಜ ವಿತರಿಸಬೇಕು. ಬೆಳೆಗಳಿಗೆ ನೀರಿನ ಕೊರೆತೆಯಾಗಬಾರದು. ಜನರ ಸ್ವಾವಲಂಬಿ ಬದುಕಿಗೆ ಹಾಗೂ ಆರ್ಥಿಕವಾಗಿ ಸಬಲತೆಗೆ ಕೃಷಿ ಕ್ಷೇತ್ರ ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಯಾವುದೇ ಸಮಸ್ಯೆ ಉಂಟಾಗದಂತೆ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಿ ಎಂದು ಸೂಚಿಸಿದರು.

Recent Articles

spot_img

Related Stories

Share via
Copy link