ಬೆಂಗಳೂರು:
ಪಹಲ್ಗಾಮ್ ಉಗ್ರ ದಾಳಿಯ ಬಳಿಕ ದೇಶ ತೊರೆಯುವಂತೆ ಕೇಂದ್ರ ಸರಕಾರ ಪಾಕಿಸ್ತಾನ ಪ್ರಜೆಗಳಿಗೆ ಗಡುವು ನೀಡಿತ್ತು. ಈ ವಿಚಾರವಾಗಿ, ನಮ್ಮ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಮೈಸೂರು ಮೂಲದ ತಾಯಿಯೊಬ್ಬರು ತಮ್ಮ ಮೂವರು ಪಾಕಿಸ್ತಾನಿ ಪೌರತ್ವದ ಮಕ್ಕಳ ಪರವಾಗಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಕೇಂದ್ರ ಸರಕಾರ ದೇಶದ ಪ್ರಜೆಗಳ ರಕ್ಷಣೆಗಾಗಿ ಪಾಕಿಸ್ತಾನಿ ನಿವಾಸಿಗಳು ದೇಶ ತೊರೆಯಲು ಸೂಚನೆ ನೀಡಿದೆ. ಈ ಹಂತದಲ್ಲಿ ನಾವು ಮಧ್ಯಪ್ರವೇಶ ಮಾಡಲಾಗುವುದಿಲ್ಲ ಎಂದು ಹೈಕೋರ್ಟ್ ನ್ಯಾಯಪೀಠ ತಿಳಿಸಿದೆ.
ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ಗುಂಡಿನ ದಾಳಿ ಹಿನ್ನೆಲೆಯಲ್ಲಿ ಭಾರತದಲ್ಲಿರುವ ಎಲ್ಲ ಪಾಕಿಸ್ತಾನದ ಪ್ರಜೆಗಳು ದೇಶ ತೊರೆಯಬೇಕೆಂಬ ಕೇಂದ್ರ ಸರಕಾರದ ಆದೇಶದಲ್ಲಿ ಮಧ್ಯ ಪ್ರವೇಶಿಸಲು ಹೈಕೋರ್ಟ್ ನಿರಾಕರಿಸಿದೆ. ಜೊತೆಗೆ ತಮ್ಮ ವಿರುದ್ಧ ಬವಲವಂತದ ಕ್ರಮ ಕೈಗೊಳ್ಳದಂತೆ ಸರಕಾರಕ್ಕೆ ನಿರ್ದೇಶನ ಕೋರಿ ಭಾರತೀಯ ತಾಯಿ ಮತ್ತು ಪಾಕಿಸ್ತಾನದ ತಂದೆಗೆ ಜನಿಸಿದ ಪಾಕಿಸ್ತಾನದ ಮೂವರು ಅಪ್ರಾಪ್ತ ಮಕ್ಕಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಆದೇಶಿಸಿದೆ.
ಪಾಕಿಸ್ತಾನದ ಬಲೂಚಿಸ್ತಾನದ 8 ವರ್ಷದ ಕುಮಾರಿ ಬಿಬಿ ಯಾಮಿನಾ, 4 ವರ್ಷದ ಮಾಸ್ಟರ್ ಮುಹಮ್ಮದ್ ಮುದಾಸ್ಸಿರ್ ಮತ್ತು 3 ವರ್ಷದ ಮಾಸ್ಟರ್ ಮೊಹಮ್ಮದ್ ಯೂಸಫ್ ಎಂಬವರು ತಮ್ಮ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ. ಉಮಾ ಅವರಿದ್ದ ರಜಾ ಕಾಲದ ನ್ಯಾಯಪೀಠ, ಅರ್ಜಿ ವಜಾಗೊಳಿಸಿ ಆದೇಶಿಸಿತು. ಅಲ್ಲದೆ, ಕಾಶ್ಮೀರದ ಪಹಲ್ಗಾಮ್ನಲ್ಲಿ ಮಾರಕ ದಾಳಿಯಾಗಿದೆ. ದೇಶದ ಪ್ರಜೆಗಳ ರಕ್ಷಣೆಯಿಂದಾಗಿ ಪಾಕಿಸ್ತಾನಿ ನಿವಾಸಿಗಳು ದೇಶ ತೊರೆಯಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಈ ಹಂತದಲ್ಲಿ ನಾವು ಮಧ್ಯಪ್ರವೇಶ ಮಾಡಲಾಗುವುದಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.