ಬೆಂಗಳೂರು:
ಲೋಕಸಭೆ ಚುನಾವಣೆ ವೇಳೆ 4.8 ಕೋಟಿ ರೂಪಾಯಿ ಜಪ್ತಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಹಾಗೂ ಮತ್ತೋರ್ವ ಆರೋಪಿ ವಿರುದ್ಧ ಸಲ್ಲಿಸಲಾಗಿರುವ ಚಾರ್ಜ್ಶೀಟ್ ಸೇರಿದಂತೆ ಎಲ್ಲಾ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ.
ಯಲಹಂಕ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಾದಾವರ ಗ್ರಾಮದಲ್ಲಿ ಗೋವಿಂದಪ್ಪನವರ ಮನೆಯಲ್ಲಿ ಪತ್ತೆಯಾದ 4.8 ಕೋಟಿ ರೂ.ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ತಂಡ ಕೆ ಸುಧಾಕರ್ ವಿರುದ್ಧ ಕೇಸ್ ದಾಖಲಿಸಿದೆ.
ಗೋವಿಂದಪ್ಪ ಎಂಬುವವರ ನಿವಾಸದಲ್ಲಿ ನಗದು ವಶಪಡಿಸಿಕೊಂಡ ನಂತರ ಸುಧಾಕರ್ ಅವರು ಎಪ್ರಿಲ್ 25 ರಂದು ಮಾದರಿ ನೀತಿ ಸಂಹಿತೆಯ ನೋಡಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರಿಗೆ ವಾಟ್ಸಾಪ್ ಕರೆ ಮಾಡಿ, ಸಹಾಯಕ್ಕಾಗಿ ಮನವಿ ಮಾಡಿದ್ದಾರೆ ಮತ್ತು ಸಂದೇಶ ಕುಳುಹಿಸಿದ್ದಾರೆ ಎಂದು ಆರೋಪಿಸಲಾಗಿದೆ.
ತಮ್ಮ ವಿರುದ್ಧದ ವಿಚಾರಣೆ ರದ್ದು ಕೋರಿ ಆರೋಪಿ ನಂ.2 ಸುಧಾಕರ್ ಮತ್ತು ಗೋವಿಂದಪ್ಪ ಅವರು ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ, ಆರೋಪಿಗಳ ವಿರುದ್ಧದ ವಿಚಾರಣೆಗೆ ತಡೆ ನೀಡಿ ಮಧ್ಯಂತರ ಆದೇಶ ನೀಡಿದ್ದಾರೆ.
ಮಾದನಾಯಕನಹಳ್ಳಿ ಪೊಲೀಸರು ಕೇವಲ ಅನಾಮಧೇಯ ಕರೆಯನ್ನು ಆಧರಿಸಿ ದೂರು ದಾಖಲಿಸಿದ್ದಾರೆ ಎಂದು ಸುಧಾಕರ್ ಪರ ವಕೀಲರ ಮೂಲಕ ವಾದಿಸಿದರು ಮತ್ತು ನಂತರ ಪೊಲೀಸರು ಏಪ್ರಿಲ್ 30 ರಂದು ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
”ಈ ಪ್ರಕರಣದಲ್ಲಿ ಮ್ಯಾಜಿಸ್ಪ್ರೇಟ್ ನ್ಯಾಯಾಲಯ ವಿಚಾರಣೆಗೆ ಆದೇಶಿಸಿದೆ. ಆದರೆ, ಈ ಪ್ರಕರಣ ಜನಪ್ರತಿನಿಗಳ ವಿಶೇಷ ನ್ಯಾಯಾಲಯದ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ, ಮ್ಯಾಜಿಸ್ಪ್ರೇಟ್ ನ್ಯಾಯಾಲಯ ವಿಚಾರಣೆಗೆ ಆದೇಶಿಸಿರುವುದು ಕಾನೂನು ಬಾಹಿರ. ಈ ಹಿನ್ನೆಲೆಯಲ್ಲಿ ಅರ್ಜಿದಾರರ ವಿರುದ್ಧದ ಪ್ರಕರಣ ರದ್ದುಪಡಿಸಬೇಕು,” ಎಂದು ಸುಧಾಕರ್ ಪರ ವಕೀಲರು ಕೋರಿದರು.
