ಬೆಂಗಳೂರು:
ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಿಗೆ ಉದ್ಯೋಗದ ಸಂದರ್ಭ ಒಳಮೀಸಲಾತಿ ಜಾರಿ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಚಿವರ ಮಹತ್ವದ ಸಭೆ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ವಿಷಯಕ್ಕೆ ಸಂಬಂಧಪಟ್ಟಂತೆ ಮಹತ್ವದ ಸಭೆ ನಡೆಯಲಿದ್ದು, ಸಚಿವ ಸಂಪುಟ ಪ್ರಮುಖರು ಭಾಗಿಯಾಗಲಿದ್ದಾರೆ. ಇತ್ತೀಚೆಗೆ ಈ ಒಳಮೀಸಲಿನ ಕೂಗು ಹೆಚ್ಚಾಗಿದೆ.
ಒಳಮೀಸಲಾತಿಗಾಗಿ ದಶಕಗಳಿಂದ ಹೋರಾಟ ನಡೆಯುತ್ತಿದೆ. ಈಗ ಸುಪ್ರೀಂಕೋರ್ಟ್ ಕೂಡ ತೀರ್ಪು ನೀಡಿದೆ. ನಾವು ಜಾರಿ ಮಾಡಲೇಬೇಕಿದೆ. 101 ಪರಿಶಿಷ್ಟ ಜಾತಿಗಳಿವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಮುಖ್ಯ. ಎಲ್ಲರನ್ನೂ ಸಮಾಧಾನ ಮಾಡುವುದು ಸಾಧ್ಯವಿಲ್ಲದಿದ್ದರೂ, ಶೇ.90ರಷ್ಟು ಸಮುದಾಯಗಳಿಗೆ ಸಮಾಧಾನ ಆಗುವ ತೀರ್ಮಾನ ತೆಗೆದುಕೊಳ್ಳಬೇಕಿದೆ. ಇದನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಈ ಹಿಂದೆ ಹೇಳಿದ್ದರು.
ಒಳಮೀಸಲು ಜಾರಿಗೆ ಅಗತ್ಯ ಕ್ರಮಗಳಿಗೆ ಮುಂದಾಗುವಂತೆ ಸಮುದಾಯದ ಹಲವು ಮುಖಂಡರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದರು. ಸಚಿವ ಸಂಪುಟದ ಕೆಲವು ಸಹೋದ್ಯೋಗಿಗಳೇ ಸಿಎಂಗೆ ಈ ಬಗ್ಗೆ ಮುಂದಿನ ಹೆಜ್ಜೆಯಿಡಲು ಒತ್ತಾಯಿಸಿದ್ದರು. ಇತ್ತೀಚೆಗೆ ಬಜೆಟ್ ಮಂಡನೆಯ ಸಂದರ್ಭದಲ್ಲೂ ಸದನದಲ್ಲಿ ಕೆಲವರು ಒಳಮೀಸಲು ಕುರಿತು ಘೋಷಣೆ ಕೂಗಿದ್ದು, ಅವರನ್ನು ಬಂಧಿಸಲಾಗಿತ್ತು.








