ಪಾಕಿಸ್ತಾನಕ್ಕೆ ಭಾರತದ ಶಾಕ್ : ಏನದು ಭಾರತ ಕೊಟ್ಟ ಷಾಕ್‌ ಅಂತೀರ…?

ನವದೆಹಲಿ

    ಜಮ್ಮು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಿನ್ನೆ (ಏಪ್ರಿಲ್ 22) ಉಗ್ರರ ದಾಳಿಗೆ 26 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅವರಲ್ಲಿ ಬಹುತೇಕರು ಪ್ರವಾಸಿಗರಾಗಿದ್ದರು. ಕಾಶ್ಮೀರವನ್ನು ಬಿಡುವ ಮಾತೇ ಇಲ್ಲ ಎಂದು ಪಾಕಿಸ್ತಾನದ ಸೇನಾ ಮುಖ್ಯಸ್ಥ ಕಳೆದ ವಾರವಷ್ಟೇ ಇಸ್ಲಾಮಾಬಾದ್​ನಲ್ಲಿ ಭಾಷಣ ಮಾಡಿದ್ದರು. ಅದಕ್ಕೆ ಭಾರತ ಕೂಡ ತಕ್ಕ ಉತ್ತರ ನೀಡಿತ್ತು. ಅದಾದ ಒಂದೇ ವಾರದಲ್ಲಿ ಕಾಶ್ಮೀರದಲ್ಲಿ ಉಗ್ರರ ದಾಳಿ ನಡೆದಿದೆ. ಈ ದಾಳಿ ನಡೆಸಿದ ಟಿಆರ್​ಎಫ್​ ಪಾಕಿಸ್ತಾನ ಮೂಲದ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೋಯ್ಬಾ (ಎಲ್‌ಇಟಿ)ದ ಶಾಡೋ ಸಂಘಟನೆಯಾಗಿದೆ. ಹೀಗಾಗಿ, ಭಾರತದ ಮೇಲಿನ ದಾಳಿಗೆ ಪಾಕಿಸ್ತಾನ ತೆರೆಮರೆಯಲ್ಲಿ ಕುಮ್ಮಕ್ಕು ನೀಡಿರುವುದು ಖಚಿತವಾಗಿರುವುದರಿಂದ ಈ ಬಾರಿ ಭಾರತ ರಾಜತಾಂತ್ರಿಕ ಮಾರ್ಗದ ಮೂಲಕ ಪಾಕಿಸ್ತಾನಕ್ಕೆ   ತಿರುಗೇಟು ನೀಡಲು ಮುಂದಾಗಿದೆ.

 
    ಸಿಂಧೂ ನದಿ ಮತ್ತು ಅದರ ಉಪನದಿಗಳಲ್ಲಿ ಲಭ್ಯವಿರುವ ನೀರನ್ನು ಬಳಸಲು ಸಿಂಧೂ ಜಲ ಒಪ್ಪಂದವು (ಐಡಬ್ಲ್ಯೂಟಿ) ಭಾರತ ಮತ್ತು ಪಾಕಿಸ್ತಾನದ ನಡುವಿನ ನೀರಿನ ವಿತರಣಾ ಒಪ್ಪಂದವಾಗಿದೆ. 1960ರಲ್ಲಿ ಕರಾಚಿಯಲ್ಲಿ ವಿಶ್ವಸಂಸ್ಥೆಯ ಮಧ್ಯಸ್ಥಿಕೆಯಲ್ಲಿ ಆಗಿನ ಭಾರತದ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಪಾಕಿಸ್ತಾನಿ ಅಧ್ಯಕ್ಷ ಅಯೂಬ್ ಖಾನ್ ಅವರು ಈ ಒಪ್ಪಂದಕ್ಕೆ ಸಹಿ ಹಾಕಿದ್ದರು. ಸಿಂಧೂ ನದಿ ನೀರು ಒಪ್ಪಂದಕ್ಕೆ ಸೆಪ್ಟೆಂಬರ್ 19, 1960ರಂದು ಸಹಿ ಹಾಕಲಾಯಿತು. ಭಾರತ ಮತ್ತು ಪಾಕಿಸ್ತಾನದ ನಡುವೆ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು.
   ಈ ಒಪ್ಪಂದದಂತೆ ಪೂರ್ವದಿಂದ ಭಾರತದೊಳಕ್ಕೆ ಹರಿಯುವ ಮೂರು ನದಿಗಳಾದ ಬಿಯಾಸ್, ರಾವಿ ಮತ್ತು ಸಟ್ಲೆಜ್, ಪಾಕಿಸ್ತಾನದೊಳಕ್ಕೆ ಹರಿಯುವ 3 ಪಶ್ಚಿಮದ ನದಿಗಳಾದ ಸಿಂಧು, ಚೆನಾಬ್ ಮತ್ತು ಝೀಲಂ ನದಿಗಳ ಮೇಲೆ ನಿಯಂತ್ರಣವನ್ನು ಸಾಧಿಸುವುದಾಗಿದೆ. ಸಿಂಧೂ ಜಲ ಒಪ್ಪಂದವು ಸಿಂಧು ನದಿಯ ನೀರಿನ ಗರಿಷ್ಠ ಬಳಕೆಯಲ್ಲಿ ಎರಡೂ ದೇಶಗಳ ಹಕ್ಕಿದೆ. ಭಾರತವು ಪಶ್ಚಿಮ ನದಿ ನೀರನ್ನು ಸೀಮಿತ ನೀರಾವರಿ ಬಳಕೆಗೆ, ವಿದ್ಯುತ್ ಉತ್ಪಾದನೆ, ನ್ಯಾವಿಗೇಷನ್, ಮೀನುಗಾರಿಕೆಗೆ ಬಳಸಲು ಅನುಮತಿಸುತ್ತದೆ. ಈ ಒಪ್ಪಂದದ ಪ್ರಕಾರ, ಶಾಶ್ವತ ಸಿಂಧು ಆಯೋಗವನ್ನು ಸ್ಥಾಪಿಸಲಾಗಿದೆ. ಪ್ರತಿ ದೇಶದಿಂದ ಆಯುಕ್ತರನ್ನು ಹೊಂದಿರುವ ಈ ಆಯೋಗವು ಪರಸ್ಪರ ಸಹಕಾರ ಕಾರ್ಯವಿಧಾನವನ್ನು ಮೇಲ್ವಿಚಾರಣೆ ಮಾಡುತ್ತದೆ. ಸೃಷ್ಟಿಯಾಗುವ ಸಮಸ್ಯೆಗಳನ್ನು ಚರ್ಚಿಸಲು ಎರಡು ದೇಶಗಳು ವಾರ್ಷಿಕವಾಗಿ ಸಭೆ ನಡೆಸುತ್ತವೆ.
   ಸಿಂಧೂ ಜಲ ಒಪ್ಪಂದವು ಪಶ್ಚಿಮ ನದಿಗಳನ್ನು (ಸಿಂಧೂ, ಝೀಲಂ, ಚೆನಾಬ್) ಪಾಕಿಸ್ತಾನಕ್ಕೆ ಮತ್ತು ಪೂರ್ವ ನದಿಗಳನ್ನು (ರವಿ, ಬಿಯಾಸ್, ಸಟ್ಲೆಜ್) ಭಾರತಕ್ಕೆ ಹಂಚಿಕೆ ಮಾಡುವ ಮೂಲಕ ಭಾರತ ಮತ್ತು ಪಾಕಿಸ್ತಾನದ ನಡುವೆ ಸುಸ್ಥಿರ ನೀರಿನ ವಿಭಜನೆಯನ್ನು ಮಾಡಿತ್ತು.
   6 ದಶಕಗಳಿಗೂ ಹೆಚ್ಚು ಕಾಲ ರಾಜಕೀಯ ಮತ್ತು ಮಿಲಿಟರಿ ಉದ್ವಿಗ್ನತೆ ಹೆಚ್ಚಾದಾಗಲೂ ಭಾರತ ಮತ್ತು ಪಾಕಿಸ್ತಾನದ ನಡುವೆ ಶಾಂತಿಯುತ ನೀರು ಹಂಚಿಕೆಗೆ ಅನುಕೂಲವಾಗುವಂತೆ ಸಿಂಧೂ ಜಲ ಒಪ್ಪಂದ (IWT) ನಿರ್ಣಾಯಕ ಪಾತ್ರ ವಹಿಸಿತ್ತು. ಇದೀಗ ಈ ಒಪ್ಪಂದ ರದ್ದುಗೊಂಡಿದೆ. ಇನ್ನೂ ಮುಖ್ಯವಾದ ವಿಷಯವೆಂದರೆ ಈ ಸಿಂಧೂ ಜಲ ಒಪ್ಪಂದ ಏಷ್ಯಾದ 2 ರಾಷ್ಟ್ರಗಳ ನಡುವಿನ ಏಕೈಕ ಗಡಿಯಾಚೆಗಿನ ನೀರು ಹಂಚಿಕೆ ಒಪ್ಪಂದವಾಗಿದೆ. ಈ ಒಪ್ಪಂದವು ಕೆಳ ಭಾಗದಲ್ಲಿರುವ ದೇಶವಾದ ಪಾಕಿಸ್ತಾನಕ್ಕೆ ಅನುಕೂಲಕರವಾಗಿದೆ. ಇದು ಸಿಂಧೂ ನದಿ ವ್ಯವಸ್ಥೆಯ ಸರಿಸುಮಾರು 80% ನೀರಿನ ಪ್ರವೇಶವನ್ನು ನೀಡುತ್ತದೆ.
   2001ರ ಭಾರತೀಯ ಸಂಸತ್ತಿನ ದಾಳಿ ಮತ್ತು 2019ರ ಪುಲ್ವಾಮಾ ದಾಳಿ ಸೇರಿದಂತೆ ಹಲವಾರು ಭಯೋತ್ಪಾದಕ ದಾಳಿಗಳು ನಡೆದಾಗಲೂ ಭಾರತ ಸಿಂಧೂ ಜಲ ಒಪ್ಪಂದದಿಂದ ಹಿಂದೆ ಸರಿದಿರಲಿಲ್ಲ. ಆದರೆ, ಈ ಬಾರಿ ಮೋದಿ ಸರ್ಕಾರ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಮೂಲಕ ಪಾಕಿಸ್ತಾನಕ್ಕೆ ತಿರುಗೇಟು ನೀಡಿದೆ.