ಶ್ರೀನಗರ ವಿಮಾನ ನಿಲ್ದಾಣವನ್ನು ನಿಯಂತ್ರಣಕ್ಕೆ ಪಡೆದ ಭಾರತೀಯ ವಾಯುಪಡೆ

ಶ್ರೀನಗರ: 

     ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ’ ಎಂಬ ಸೇನಾ ಕಾರ್ಯಾಚರಣೆಯಲ್ಲಿ  ಪಾಕಿಸ್ತಾನದ 9 ಉಗ್ರರ ನೆಲೆಗಳನ್ನು ಧ್ವಂಸ ಮಾಡಲಾಗಿದೆ. ದಾಳಿಯಲ್ಲಿ ಸುಮಾರು 80ಕ್ಕೂ ಹೆಚ್ಚು ಭಯೋತ್ಪಾದಕರು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಭಾರೀ ಬಿಗಿ ಭದ್ರತೆ ಮಾಡಲಾಗಿದ್ದು, ಭಾರತೀಯ ವಾಯುಪಡೆಯು (ಐಎಎಫ್) ಶ್ರೀನಗರ ವಿಮಾನ ನಿಲ್ದಾಣವನ್ನು ನಿಯಂತ್ರಣಕ್ಕೆ ಪಡೆದಿದೆ. ಜತೆಗೆ, ನಾಗರಿಕ ವಿಮಾನಗಳ ಕಾರ್ಯಾಚರಣೆಯನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸದ್ಯ ಶ್ರೀನಗರ ವಿಮಾನ ನಿಲ್ದಾಣವು ಭಾರತೀಯ ವಾಯುಪಡೆಯ ನಿಯಂತ್ರಣದಲ್ಲಿದೆ. ವಿಮಾನಗಳ ಸಂಚಾರ, ಲ್ಯಾಂಡಿಂಗ್ ಅನ್ನು ನಿಯಂತ್ರಿಸುತ್ತದೆ. ವಾಯುಪ್ರದೇಶವನ್ನು ಹೊರತುಪಡಿಸಿ ಅಗ್ನಿಶಾಮಕ, ಎಲ್ಲಾ ವಾಯು ಸುರಕ್ಷತಾ ಕಾರ್ಯವಿಧಾನಗಳನ್ನು ಸಹ ನಿಯಂತ್ರಿಸುತ್ತದೆ ಎಂದು ಮೂಲಗಳು ತಿಳಿಸಿವೆ. 

   ಜಮ್ಮು ಮತ್ತು ಕಾಶ್ಮೀರ, ಅಮೃತಸರ, ಚಂಡಿಗಢ, ಧರ್ಮಶಾಲಾ, ಲೇಹ್‌ನ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ಸ್ಥಗಿತಗೊಂಡಿದ್ದು, ವಿಮಾನಯಾನ ಸಂಸ್ಥೆಗಳು ವಿಮಾನಗಳ ಹಾರಾಟವನ್ನು ರದ್ದುಗೊಳಿಸಿವೆ. ಬೆಂಗಳೂರಿನಿಂದ ಸೇರಿ ಹಲವು ರಾಜ್ಯಗಳಿಂದ ಕಾಶ್ಮೀರ, ಅಯೋಧ್ಯೆ ಸೇರಿ ಉತ್ತರ ಭಾರತಕ್ಕೆ ತೆರಳುವ ವಿಮಾನ ಹಾರವನ್ನು ಕೂಡ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ. 

  ತಕ್ಷಣಕ್ಕೆ ಜಾರಿಗೆ ಬರುವಂತೆ ಜಮ್ಮು, ಸಾಂಬಾ, ಕಥುವಾ, ರಾಜೌರಿ ಮತ್ತು ಪೂಂಚ್‌ನಲ್ಲಿರುವ ಎಲ್ಲಾ ಶಾಲೆಗಳು, ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳು ಇಂದು ಮುಚ್ಚಲ್ಪಡುತ್ತವೆ. ಪಠಾಣ್‌ಕೋಟ್‌ನಲ್ಲಿರುವ ಎಲ್ಲಾ ಶಾಲೆಗಳು 72 ಗಂಟೆಗಳ ಕಾಲ ಮುಚ್ಚಲ್ಪಟ್ಟಿದೆ.

   ಪ್ರಧಾನಿ ಮೋದಿಯವರು ದಾಳಿಯ ಕುರಿತು ಮಂಗಳವಾರ ರಾತ್ರಿ ಪ್ರಾರಂಭವಾಗಿ ಬುಧವಾರದ ಬೆಳಗಿನ ಜಾವದವರೆಗೂ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮುಖ್ಯಸ್ಥರ ನಡುವೆ ಸಂವಹನ ನಡೆಸಿ ಇಂಚಿಂಚೂ ಮಾಹಿತಿಯನ್ನು ಪಡೆದಿದ್ದಾರೆ ಎನ್ನಲಾಗಿದೆ. ರಕ್ಷಣಾ ಪಡೆಗಳ ಮುಖ್ಯಸ್ಥರು, ಹಿರಿಯ ಗುಪ್ತಚರ ಅಧಿಕಾರಿಗಳು ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋಬಾಲ್‌ ಅವರು ಪ್ರಧಾನಿಗೆ ನಿರಂತರವಾಗಿ ಮಾಹಿತಿ ನೀಡಿದ್ದಾರೆ.

Recent Articles

spot_img

Related Stories

Share via
Copy link