ಮಾಸ್ಕೋ:
ರಷ್ಯಾದೊಂದಿಗೆ ಭಾರತದ ವ್ಯಾಪಾರ ವಹಿವಾಟನ್ನು ಸಮತೋಲಿತ ಮತ್ತು ಸುಸ್ಥಿರ ರೀತಿಯಲ್ಲಿ ವಿಸ್ತರಿಸಲು ಕ್ರಮ ಕೈಗೊಳ್ಳುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಭಾರತದ ವಿದೇಶಾಂಗ ಸಚಿವ ಜೈಶಂಕರ್ ಭರವಸೆ ನೀಡಿದ್ದಾರೆ.
ರಷ್ಯಾದಿಂದ ಭಾರತ ತೈಲ ಖರೀದಿ ಮಾಡುತ್ತಿರುವುದಕ್ಕೆ ಅಮೆರಿಕ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದರೂ ಭಾರತ ಇದಕ್ಕೆ ಕ್ಯಾರೇ ಎನ್ನುತ್ತಿಲ್ಲ. ಬದಲಾಗಿ ಅಮೆರಿಕ ವಿಧಿಸಿರುವ ದಂಡನಾತ್ಮಕ ಸುಂಕವನ್ನು ಸ್ವೀಕರಿಸಿ ರಷ್ಯಾದೊಂದಿಗೆ ತನ್ನ ಸಂಬಂಧವನ್ನು ಮತ್ತಷ್ಟು ಬಲ ಪಡಿಸುತ್ತಿದೆ. ಇದಕ್ಕೂ ಮೊದಲು ಜೈಶಂಕರ್ ಅವರು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರನ್ನು ಭೇಟಿ ಮಾಡಿದ್ದರು.
ಮಾಸ್ಕೋದಲ್ಲಿ ಗುರುವಾರ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ವಿದೇಶಾಂಗ ಸಚಿವ ಎಸ್. ಜೈಶಂಕರ್ ಭೇಟಿ ಮಾಡಿದರು. ರಷ್ಯಾದ ತೈಲ ಮಾರಾಟ ಮತ್ತು ಖರೀದಿಯ ಕುರಿತು ಭಾರತವನ್ನು ಪದೇ ಪದೆ ಟೀಕಿಸುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತಕ್ಕೆ ಹೆಚ್ಚುವರಿಯಾಗಿ ಶೇ. 50ರಷ್ಟು ಸುಂಕಗಳನ್ನು ವಿಧಿಸಿರುವುದರಿಂದ ಈ ಸಭೆ ಹೆಚ್ಚು ಮಹತ್ವ ಪಡೆದಿದೆ.
ರಷ್ಯಾ ಅಧ್ಯಕ್ಷ ಪುಟಿನ್ ಅವರ ಭಾರತ ಭೇಟಿಗೆ ಮುಂಚಿತವಾಗಿ ಮಂಗಳವಾರ ವಿದೇಶಾಂಗ ಸಚಿವ ದೋವಲ್ ಮಾಸ್ಕೋದಲ್ಲಿ ಪುಟಿನ್ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಅವರು ಪುಟಿನ್ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಘೋಷಿಸಿದರು. ಜೈಶಂಕರ್ ಅವರು ಗುರುವಾರ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರನ್ನು ಭೇಟಿಯಾಗಿ ಭಾರತ ಮತ್ತು ರಷ್ಯಾ ನಡುವಿನ ವ್ಯಾಪಾರಕ್ಕೆ ಇರುವ ಅಡೆತಡೆಗಳನ್ನು ತ್ವರಿತವಾಗಿ ಪರಿಹರಿಸುವ ಅಗತ್ಯವಿದೆ ಎಂದು ತಿಳಿಸಿದರು.
ಎರಡನೇ ಮಹಾಯುದ್ಧದ ಅನಂತರ ಭಾರತ ಮತ್ತು ರಷ್ಯಾ ನಡುವಿನ ಸಂಬಂಧಗಳು ವಿಶ್ವದ ಪ್ರಮುಖ ಸಂಬಂಧಗಳಲ್ಲಿ ಅತ್ಯಂತ ಸ್ಥಿರವಾದ ಸಂಬಂಧವಾಗಿದೆ ಎಂದು ಲಾವ್ರೊವ್ ಅವರೊಂದಿಗಿನ ಜಂಟಿ ಮಾಧ್ಯಮ ಸಭೆಯಲ್ಲಿ ಜೈಶಂಕರ್ ತಿಳಿಸಿದರು. ರಷ್ಯಾದ ಕಚ್ಚಾ ತೈಲ ಖರೀದಿಗೆ ಶ್ವೇತಭವನದ ವ್ಯಾಪಾರ ಸಲಹೆಗಾರ ಪೀಟರ್ನವರೊ ಅವರು ಟೀಕೆಗೆ ಪ್ರತಿಕ್ರಿಯಿಸಿದ ಜೈಶಂಕರ್, ಭಾರತವು ರಷ್ಯಾ ತೈಲದ ಅತಿದೊಡ್ಡ ಖರೀದಿದಾರನಲ್ಲ. 2022ರ ಅನಂತರ ಮಾಸ್ಕೋದೊಂದಿಗೆ ಅತಿದೊಡ್ಡ ವ್ಯಾಪಾರ ಏರಿಕೆಯನ್ನು ಹೊಂದಿಲ್ಲ ಎಂದು ಸ್ಪಷ್ಟಪಡಿಸಿದರು.








