ಕಲ್ಯಾಣ ಕರ್ನಾಟಕ ವಿರೋಧಿ ಕಾಂಗ್ರೆಸ್ ಸರ್ಕಾರ :ಆರ್‌ ಅಶೋಕ್

ಬೆಂಗಳೂರು:

   2024-25ನೇ ಸಾಲಿನ ಆಯವ್ಯಯದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ (ಕೆಕೆಆರ್ ಡಿಬಿ) 5 ಸಾವಿರ ಕೋಟಿ ರೂಪಾಯಿ ಮೊತ್ತದ ಕ್ರಿಯಾ ಯೋಜನೆ ರೂಪಿಸಲು ಅನುಮೋದನೆ ನೀಡಿದ್ದ ಕರ್ನಾಟಕ ಕಾಂಗ್ರೆಸ್‌ ಸರ್ಕಾರ, ಆರ್ಥಿಕ ವರ್ಷ ಅಂತ್ಯವಾಗುತ್ತಿದ್ದರೂ ಈ ಸಾಲಿನ ಅನುದಾನದಲ್ಲಿ ಮಂಡಳಿಗೆ ನಯಾ ಪೈಸೆ ಹಣ ಬಿಡುಗಡೆ ಮಾಡಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

   ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರೇ, ಸಂಬಂಧಪಡದ ವಿಷಯಗಳಿಗೆಲ್ಲಾ ಅನವಶ್ಯಕವಾಗಿ ಮೂಗು ತೂರಿಸುವ ತಾವು, ಕಲ್ಯಾಣ ಕರ್ನಾಟಕಕ್ಕೆ ಬರಬೇಕಾದ ಅನುದಾನದ ವಿಷಯದಲ್ಲಿ ಮೌನವಾಗಿರುವುದೇಕೆ?

   ಖರ್ಗೆ ಕುಟುಂಬದವರು ಮನಸ್ಸು ಮಾಡಿದರೆ ಬಿಜೆಪಿ ಕಾರ್ಯಕರ್ತರು ಕಲಬುರ್ಗಿ ಜಿಲ್ಲೆಗೆ ಕಾಲು ಇಡುವುದಕ್ಕೂ ಬಿಡುವುದಿಲ್ಲ ಎಂದು ವಿರೋಧ ಪಕ್ಷದವರಿಗೆ ಸವಾಲು ಹಾಕುತ್ತೀರಲ್ಲ, ಅದರ ಬದಲು ತಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸವಾಲು ಹಾಕಿ ಸರ್ಕಾರದ ಅನುದಾನ ಕಲ್ಯಾಣ ಕರ್ನಾಟಕಕ್ಕೆ ತಲುಪುವಂತೆ ಮಾಡಿ. ತಮ್ಮ ತಂದೆ, ಎಐಸಿಸಿ ಅಧ್ಯಕ್ಷರಾದ ಸನ್ಮಾನ್ಯ ಮಲ್ಲಿಕಾರ್ಜುನ ಖರ್ಗೆ ಅವರ ಕೈಯಿಂದ ಮುಖ್ಯಮಂತ್ರಿಗಳಿಗೆ ಸೂಚನೆ ಕೊಡಿಸಿ ಪುಣ್ಯ ಕಟ್ಟಿಕೊಳ್ಳಿ.

   ಅಂದಹಾಗೆ ಕಳೆದ ಸೆಪ್ಟೆಂಬರ್‌ನಲ್ಲಿ ಕಲಬುರ್ಗಿಯಲ್ಲಿ ಸಂಪುಟ ಸಭೆ ಮಾಡಿ ಪುಂಖಾನುಪುಂಖವಾಗಿ ಘೋಷಣೆಗಳನ್ನು ಮಾಡಿದರಲ್ಲ, ಅದು ಕೇವಲ ಒಂದು ದಿನದ ಜಾಹಿರಾತಿಗೆ ಸೀಮಿತವಾಯ್ತಾ ಅಥವಾ ಅದನ್ನೇನಾದರೂ ಕಾರ್ಯರೂಪಕ್ಕೆ ತರುವ ದೊಡ್ಡ ಮನಸ್ಸು ಮಾಡುತ್ತೀರೋ? ಎಂದು ಪ್ರಶ್ನಿಸಿದ್ದಾರೆ.

Recent Articles

spot_img

Related Stories

Share via
Copy link