ಬೆಂಗಳೂರು:
ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂದು ಹೇಳಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿರುವ ನಟ ಕಮಲ್ ಹಾಸನ್ ಅವರ ‘ಥಗ್ ಲೈಫ್’ ಚಿತ್ರಕ್ಕೆ ರಾಜ್ಯದಲ್ಲಿ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಅಲ್ಲದೆ ಕಮಲ್ ಹಾಸನ್ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸದಿದ್ದರೆ ರಾಜ್ಯದಲ್ಲಿ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ(ಕೆಎಫ್ಸಿಸಿ) ಇತ್ತೀಚೆಗೆ ಘೋಷಿಸಿದೆ.
ಇದರ ಬೆನ್ನಲ್ಲೇ, ಚಿತ್ರದ ಸಹ-ನಿರ್ಮಾಪಕರಾದ ರಾಜ್ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್, ರಾಜ್ಯದಲ್ಲಿ ಯಾವುದೇ ಅಡೆತಡೆಯಿಲ್ಲದೆ ಚಿತ್ರವನ್ನು ಪ್ರದರ್ಶಿಸಲು ಅವಕಾಶ ನೀಡುವಂತೆ ನಿರ್ದೇಶನ ಕೋರಿ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ರಾಜ್ಕಮಲ್ ಫಿಲ್ಮ್ ಇಂಟರ್ನ್ಯಾಷನಲ್ ಸಂಸ್ಥೆಯ ಮುಖ್ಯ ಕಾರ್ಯನಿವರ್ಹಣಾಧಿಕಾರಿ(ಸಿಇಒ) ವಿ.ನಾರಾಯಣನ್ ಅವರ ಮೂಲಕ ಕಮಲ್ ಹಾಸನ್ ಈ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯು ಇನ್ನಷ್ಟೇ ವಿಚಾರಣೆಗೆ ನ್ಯಾಯಪೀಠದ ಮುಂದೆ ನಿಗದಿಯಾಗಬೇಕಾಗಿದೆ. ತಮ್ಮ ನಿರ್ಮಾಣದ ಸಿನಿಮಾ ಥಗ್ ಲೈಫ್ ಇದೇ ಜೂನ್ 5ಕ್ಕೆ ರಾಜ್ಯದಲ್ಲಿ ಬಿಡುಗಡೆ ಆಗಲಿದೆ. ಕರ್ನಾಟಕ ರಾಜ್ಯದ ಎಲ್ಲ ಭಾಷೆಗಳಲ್ಲಿ ಪ್ರದಶನವಾಗಲಿದ್ದು, ಅದಕ್ಕೆ ಯಾವುದೇ ರೀತಿಯಲ್ಲಿಯೂ ತಡೆಯುವ ಮತ್ತು ನಿರ್ಬಂಧಿಸುವಂತಹ ಕ್ರಮಗಳನ್ನು ನೇರವಾಗಿ ಇಲ್ಲವೇ ಪರೋಕ್ಷವಾಗಿ ತೆಗೆದುಕೊಳ್ಳದಂತೆ ಆದೇಶ ಹೊರಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಸಿನಿಮಾ ಪ್ರದರ್ಶನವನ್ನು ತಡೆಯದಂತೆ ಸರ್ಕಾರ, ಪೊಲೀಸ್ ಇಲಾಖೆ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಿರ್ದೇಶನ ನೀಡಬೇಕು. ಸಿನಿಮಾ ಪ್ರದರ್ಶನಕ್ಕೆ ಸೂಕ್ತ ಭದ್ರತೆ ಒದಗಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಬೇಕು. ಚಿತ್ರ ನಿರ್ಮಾಪಕರು, ನಿರ್ದೇಶಕರು ಮತ್ತು ಚಿತ್ರ ತಂಡಕ್ಕೆ ತೊಂದರೆಯಾಗದಂತೆ ಅಗತ್ಯ ಭದ್ರತೆ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
ಕಮಲ್ ಹಾನಸ್ ಅವರ ವಿವಾದಾತ್ಮಕ ಹೇಳಿಕೆಯು ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಆರೋಪಿಸಿ ಕನ್ನಡ ಪರ ಸಂಘಟನೆಗಳು ಭಾರಿ ಪ್ರತಿಭಟನೆ ನಡೆಸಿದ್ದು, ಕಮಲ್ ಹಾಸನ್ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿವೆ.
