ಬೆಂಗಳೂರು :
ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಸ್ನಾತಕ ಪದವಿಯಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಎಂಬ ನಿಯಮವನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಹೈಕೋರ್ಟ್ ನ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.
ಸ್ನಾನಕ ಪದವಿಯಲ್ಲಿ ವಿದ್ಯಾರ್ಥಿಗಳು ಕನ್ನಡವನ್ನು ಒಂದು ಭಾಷೆಯಾಗಿ ಕಲಿಯಲು ಇಚ್ಚಿಸದಿದ್ದರೆ ನ್ಯಾಯಾಲಯದ ಅಂತಿಮ ಆದೇಶವಾಗುವವರೆಗೂ ಅದನ್ನು ಕಡ್ಡಾಯಗೊಳಿಸದಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಆಗಸ್ಟ್ 7, 2021ರ ತನ್ನ ಆದೇಶದಲ್ಲಿ ರಾಜ್ಯದಲ್ಲಿ ಪದವಿ ಮಾಡುವ ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಕಾ ಭಾಷೆಯಾಗಿ ಆಯ್ಕೆ ಮಾಡುವಂತೆ ಹೇಳಿತ್ತು. ಎನ್ ಇಪಿ ಪ್ರಕಾರ, ಈ ಆದೇಶ ಹೊರಡಿಸಲಾಗಿತ್ತು. ಸಂಸ್ಕೃತ ಭಾರತಿ ಟ್ರಸ್ಟ್ ಮತ್ತು ಇತರ ಸಂಘಟನೆಗಳು ಹಾಗೂ ಕೆಲ ವಿದ್ಯಾರ್ಥಿಗಳು ಸರ್ಕಾರದ ಈ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.
2021-22 ನೇ ಸಾಲಿನಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಉನ್ನತ ಶಿಕ್ಷಣದಲ್ಲಿ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿದೆ. ಎನ್ ಇಪಿ ಆಶಯದಂತೆ ಸ್ಥಳೀಯ ಭಾಷೆಗಳಿಗೆ ಉತ್ತೇಜನ ನೀಡುವ ಸಲುವಾಗಿ ಎಲ್ಲಾ ವಿವಿ ಮತ್ತು ಪದವಿ ಕಾಲೇಜುಗಳಲ್ಲಿ ಸ್ನಾತಕ ಪದವಿ ವಿದ್ಯಾರ್ಥಿಗಳಿಗೆ ಎರಡು ವರ್ಷ ಒಂದು ಭಾಷೆಯಾಗಿ ಕನ್ನಡ ಕಲಿಕೆಯನ್ನು ಕಡ್ಡಾಯಗೊಳಿಸಲಾಗಿತ್ತು.
ಸರ್ಕಾರದ ಈ ಕ್ರಮಕ್ಕೆ ಕೆಲವು ಖಾಸಗಿ ಪದವಿ ಕಾಲೇಜುಗಳು, ವಿವಿಗಳಿಂದ ವಿರೋಧ ಕೇಳಿಬಂದಿತ್ತು. ಹೀಗಾಗಿ ರಾಜ್ಯ ಸರ್ಕಾರ ಪಿಯುಸಿ ಹಂತದಲ್ಲಿ ಕನ್ನಡ ಅಭ್ಯಾಸ ಮಾಡದ ವಿದ್ಯಾರ್ಥಿಗಳು ಹಾಗೂ ಹೊರ ರಾಜ್ಯ, ಹೊರ ದೇಶದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕಡ್ಡಾಯ ಕಡ್ಡಾಯ ಕಲಿಕೆಯನ್ನು ಕೈಬಿಟ್ಟಿದೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
