ಚಿತ್ರದುರ್ಗ:
ಈಗಾಗಲೇ ನಿವೃತ್ತಿಯಾಗಿರುವ, ಮುಂದೆ ನಿವೃತ್ತಿಯಾಗಲಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಮಾಸಿಕ ಮೂರು ಸಾವಿರ ರೂ.ಪಿಂಚಣಿ ನೀಡುವಂತೆ ಒತ್ತಾಯಿಸಿ ಎ.ಐ.ಟಿ.ಯು.ಸಿ.ಯಿಂದ ಜಿಲ್ಲಾಧಿಕಾರಿ ಮುಖಾಂತರ ರಾಜ್ಯದ ಮುಖ್ಯಮಂತ್ರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.
ಸಮಗ್ರ ಶಿಶು ಅಭಿವೃದ್ದಿ ಯೋಜನೆ ದೇಶದಲ್ಲಿ ಜಾರಿಗೆ ಬಂದು 43 ವರ್ಷ ಕಳೆದಿದೆ. ಈ ಯೋಜನೆ ಕರ್ನಾಟಕ ರಾಜ್ಯದಲ್ಲಿ ಯಶಸ್ವಿಯಾಗಿದೆ ಎನ್ನುವುದಾದರೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರುಗಳು ಕಾರಣ ಎನ್ನುವುದನ್ನು ಆಳುವ ಸರ್ಕಾರಗಳು ಮರೆತಿವೆ.
ಯಾವುದೆ ಸೇವಾಭದ್ರತೆ ಹಾಗೂ ಜೀವನ ಭದ್ರತೆಯಿಲ್ಲದೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಗರ್ಭಿಣಿ, ಬಾಣಂತಿಯರು ಮತ್ತು ಮಕ್ಕಳ ಆರೈಕೆಯಲ್ಲಿ ತೊಡಗಿರುವುದರಿಂದ ಕನಿಷ್ಟ ಮಾಸಿಕ ಮೂರು ಸಾವಿರ ರೂ. ಪಿಂಚಣಿ ನೀಡಬೇಕು ಎಂದು ಎ.ಐ.ಟಿ.ಯು.ಸಿ.ಸಂಘಟನಾ ಕಾರ್ಯದರ್ಶಿ ಸತ್ಯಕೀರ್ತಿ ಜಿಲ್ಲಾಧಿಕಾರಿಯವರಲ್ಲಿ ವಿನಂತಿಸಿದರು.
ಕನಿಷ್ಟ ಕೂಲಿ, ಪಿಂಚಣಿ, ಕೆಲಸದ ಭದ್ರತೆ, ಇ.ಎಸ್.ಐ. ಹಾಗೂ ಭವಿಷ್ಯ ನಿಧಿ ಇವುಗಳಿಂದ ವಂಚನೆಯಾಗಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಿವೃತ್ತಿಯ ನಂತರ ಬರಿಗೈಯಲ್ಲಿ ಮನೆಗೆ ಹೋಗಬೇಕಾದಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಕನಿಷ್ಟ ವೇತನ ಹಾಗೂ ಪಿಂಚಣಿ ನೀಡುವುದಾಗಿ ಚುನಾವಣಾ ಪೂರ್ವದಲ್ಲಿಯೇ ಭರವಸೆ ನೀಡಿದ್ದ ಹೆಚ್.ಡಿ.ಕುಮಾರಸ್ವಾಮಿ ಈಗ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಇನ್ನು ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಬೇಡಿಕೆಗಳು ಈಡೇರಿಲ್ಲ. ಕೂಡಲೆ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದೆಂದು ಎಚ್ಚರಿಸಿದರು.
ಎ.ಐ.ಟಿ.ಯು.ಸಿ. ಪ್ರಧಾನ ಕಾರ್ಯದರ್ಶಿ ಜಮುನಾಬಾಯಿ, ಕಾರ್ಯದರ್ಶಿ ಭಾಗ್ಯಮ್ಮ, ಖಜಾಂಚಿ ವಿನೋದಮ್ಮ, ಕಾಂ.ಸಾವಿತ್ರಮ್ಮ, ಕಾಂ.ರತ್ನಮ್ಮ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ