ಮುರಿದುಬಿತ್ತು ಎಸ್ಪಿ-ಬಿಎಸ್ಪಿ ಮೈತ್ರಿ!!!

ಲಕ್ನೋ:

      ಪ್ರಧಾನಿ ನರೇಂದ್ರ ಮೋದಿಯನ್ನು ಸೋಲಿಸಲು ಲೋಕಸಭಾ ಚುನಾವಣೆಯಲ್ಲಿ ಒಂದಾಗಿದ್ದ ಬಿಎಸ್‍ಪಿ, ಎಸ್‍ಪಿ ಮೈತ್ರಿಕೂಟ ಫಲಿತಾಂಶ ಬಂದ ಬಳಿಕ ಮುರಿದು ಬಿದ್ದಿದೆ.

      ಸಂಘಟಿತ ಹೋರಾಟ ನಿರೀಕ್ಷಿತ ಫಲ ನೀಡದ ಹಿನ್ನೆಲೆಯಲ್ಲಿ ವಿಧಾನಸಭೆ ಉಪಚುನಾವಣೆಯಲ್ಲಿ ಒಂಟಿಯಾಗಿಯೇ ಮಾಯಾವತಿ ಉಪಚುನಾವಣೆಯನ್ನು ಎದುರಿಸಲು ನಿರ್ಧರಿಸಿದ್ದಾರೆ.

     ಉತ್ತರ ಪ್ರದೇಶ ವಿಧಾನಸಭೆಯ 11 ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯ ಕುರಿತು ಮಾತನಾಡಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಯಾದವ ಸಮುದಾಯದವರು ಸಮಾಜವಾದಿ ಪಕ್ಷಕ್ಕೆ ಬೆಂಬಲ ನೀಡಲಿಲ್ಲ. ಎಸ್​ಪಿಯ ಅತ್ಯಂತ ಪ್ರಬಲ ಅಭ್ಯರ್ಥಿಗಳೂ ಸೋಲನುಭವಿಸಿದ್ದಾರೆ. ನಾವು ಶಾಶ್ವತವಾಗಿ ಬೇರೆಯಾಗುತ್ತಿಲ್ಲ. ಭವಿಷ್ಯದಲ್ಲಿ ನಾವು ಮತ್ತೆ ಒಟ್ಟಾಗಿ ಕೆಲಸ ಮಾಡಬಹುದು. ಅದು ಫಲನೀಡದಿದ್ದರೆ ನಾವು ಪ್ರತ್ಯೇಕವಾಗಿ ಕಾರ್ಯನಿರ್ವಹಿಸಬೇಕು. ಹಾಗಾಗಿ ಈ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದೇವೆ ಎಂದು ಮಾಯಾವತಿ ತಿಳಿಸಿದ್ದಾರೆ.

      ಲೋಕಸಭೆ ಚುನಾವಣೆಯಲ್ಲಿ ಎಸ್​ಪಿ ಮತ್ತು ಬಿಎಸ್​ಪಿ ಮೈತ್ರಿಕೂಟ ಉತ್ತರ ಪ್ರದೇಶದ 80 ಸ್ಥಾನಗಳ ಪೈಕಿ 14 ಸ್ಥಾನ ಗೆದ್ದಿತ್ತು. ಇದರಲ್ಲಿ ಬಿಎಸ್​ಪಿ 10 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ಎಸ್​ಪಿ ಕೇವಲ 4 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.  

      ಮೂಲಗಳ ಪ್ರಕಾರ ಮಾಯಾವತಿ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಬಯಕೆ ಹೊಂದಿದ್ದರು. ಚುನಾವಣಾ ಫಲಿತಾಂಶದಿಂದ ಮಾಯವತಿ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

       ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ