ತಿರುವನಂತಪುರಂ:
ಮೂವತ್ತು ಲಕ್ಷಕ್ಕೂ ಹೆಚ್ಚು ಮಹಿಳೆಯರು ಮಂಗಳವಾರ ಆರುನೂರಾ ಇಪ್ಪತ್ತು ಕಿ.ಮೀ. ಉದ್ದದ ಗೋಡೆ (ವನಿತಾ ಮದಿಲ್) ನಿರ್ಮಿಸಿದರು. ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಪ್ರವೇಶ ದೊರೆಯಬೇಕು ಎಂಬ ನಿರ್ಣಯ ಬೆಂಬಲಿಸುವ ಸಲುವಾಗಿ ಹೀಗೆ ಮಾಡಲಾಗಿದೆ. ಕಾಸರಗೋಡುವಿನಿಂದ ತಿರುವನಂತಪುರಂ ತನಕ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಈ ಗೋಡೆ ನಿರ್ಮಿಸಲಾಗಿತ್ತು.
ಕಾಸರಗೋಡು ಜಿಲ್ಲೆಯ ಬೇಕಲ್ ನಲ್ಲಿ ಮಹಿಳೆಯರ ಮೇಲೆ ಕಲ್ಲು ತೂರಾಟ ನಡೆದ ಬಗ್ಗೆ ವರದಿ ಆಗಿದೆ. ಎಲ್ಲ ವಯೋಮಾನದ ಮಹಿಳೆಯರಿಗೂ ಶಬರಿ ಮಲೆ ದೇಗುಲಕ್ಕೆ ಪ್ರವೇಶ ನೀಡಬೇಕು ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಅನುಷ್ಠಾನಕ್ಕೆ ತರಬೇಕು ಎನ್ನುವ ಕೇರಳ ಸರಕಾರದ ತೀರ್ಮಾನ ಬೆಂಬಲಿಸಿ ಹೀಗೊಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ವನಿತಾ ಮದಿಲ್ ಕಾರ್ಯಕ್ರಮವನ್ನು ರಾಜ್ಯ ಸರಕಾರ ಆಯೋಜಿಸಿದ್ದರೆ, ವಿವಿಧ ಸಾಮಾಜಿಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದವು. ಶಬರಿಮಲೆ ವಿಚಾರವಾಗಿ ಸುಪ್ರೀಂ ಕೋರ್ಟ್ ತೀರ್ಪು ವಿಚಾರವಾಗಿ ಹಿಂದೂ ಮೂಲಭೂತವಾದಿ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಗೆ ಉತ್ತರ ಎಂಬಂತೆ ಎಲ್ ಡಿಎಫ್ ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ಮಾನಸಿಕ ಗುಲಾಮವಾಗದಂತೆ ಕೇರಳವನ್ನು ತಡೆಯುವ ನಿಟ್ಟಿನಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮನವಿ ಮಾಡಿದ್ದರು. ಈ ಬಗ್ಗೆ ಡಿಸೆಂಬರ್ ಒಂದನೇ ತಾರೀಕು ಮನವಿ ಮಾಡಿದ್ದರು. ಇದೇ ರೀತಿ ರಾಷ್ಟ್ರೀಯ ಹೆದ್ದಾರಿಯ ಮತ್ತೊಂದು ಬದಿಯಲ್ಲಿ ಪುರುಷರ ಗೋಡೆ ನಿರ್ಮಾಣ ಕೂಡ ಇದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ