ಕಾರವಾರದಲ್ಲಿ ದುರಂತ, ಕಾಂಡೆ ಮೀನು ಚುಚ್ಚಿ ಯುವಕ ಸಾವು

ಕಾರವಾರ:

    ಉತ್ತರ ಕನ್ನಡ ಜಿಲ್ಲೆಯ ಕಾರವಾರ  ತಾಲೂಕಿನ ಮಾಜಾಳಿ ದಂಡೇಭಾಗದಲ್ಲಿ ಮೀನುಗಾರಿಕೆಗೆ ತೆರಳಿದ್ದ ಯುವಕನೊಬ್ಬ  ಕಾಂಡೆ ಮೀನು  ಮೂತಿ ಚುಚ್ಚಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತನನ್ನು ಮಾಜಾಳಿ ದಂಡೇಭಾಗದ ನಿವಾಸಿ, ಅಕ್ಷಯ್ ಅನಿಲ್ ಮಜಾಳಿಕರ್ (24) ಎಂದು ಗುರುತಿಸಲಾಗಿದೆ. ಅಕ್ಷಯ್ ಸ್ಥಳೀಯ ಮಟ್ಟದಲ್ಲಿ ಉತ್ತಮ ಕ್ರಿಕೆಟ್ ಕ್ರೀಡಾಪಟುವಾಗಿದ್ದರು. ಮೃತನ ಕುಟುಂಬಸ್ಥರು ಆಸ್ಪತ್ರೆಯ ಎದುರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

   ಅಕ್ಟೋಬರ್ 14 ರಂದು ಅಕ್ಷಯ್ ಅವರು ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ನೀರಿನಿಂದ ನೆಗೆದ ಸುಮಾರು 8 ರಿಂದ 10 ಇಂಚು ಉದ್ದದ ‘ಕಾಂಡೆ’ ಎಂಬ ಚೂಪು ಮೂಗಿನ ಮೀನು ನೇರವಾಗಿ ಅವರ ಹೊಟ್ಟೆಗೆ ಚುಚ್ಚಿದೆ. ಈ ಅನಿರೀಕ್ಷಿತ ಘಟನೆಯಿಂದಾಗಿ ಅಕ್ಷಯ್ ಗಂಭೀರವಾಗಿ ಗಾಯಗೊಂಡಿದ್ದರು. ಮೀನಿನ ಮೂತಿಯಿಂದಾದ ತೀವ್ರ ಗಾಯವು ಕರುಳಿನ ಭಾಗದವರೆಗೂ ತಲುಪಿತ್ತು ಎಂದು ತಿಳಿದುಬಂದಿದೆ. 

   ತಕ್ಷಣವೇ ಅಕ್ಷಯ್ ಅವರನ್ನು ಕಾರವಾರದ ಕ್ರಿಮ್ಸ್  ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ವೈದ್ಯರು ಗಾಯಕ್ಕೆ ಹೊಲಿಗೆ ಹಾಕಿ ಚಿಕಿತ್ಸೆ ನೀಡಿದ್ದರು. ನೋವು ಮುಂದುವರಿದ ಕಾರಣ ಅಕ್ಷಯ್ ಆಸ್ಪತ್ರೆಯಲ್ಲೇ ವೈದ್ಯಕೀಯ ನಿಗಾದಲ್ಲಿ ಉಳಿದುಕೊಂಡಿದ್ದರು. ಚಿಕಿತ್ಸೆ ನಡೆಯುತ್ತಿದ್ದಾಗಲೇ ನಿನ್ನೆ  ಮುಂಜಾನೆ ಸುಮಾರು 5 ಗಂಟೆಗೆ ಅಕ್ಷಯ್ ಅವರು ಕೊನೆಯುಸಿರೆಳೆದಿದ್ದಾರೆ.

   ಉತ್ತಮ ಕ್ರಿಕೆಟ್ ಕ್ರೀಡಾಪಟುವಾಗಿದ್ದ ಅಕ್ಷಯ್ ಅವರ ಅಕಾಲಿಕ ಸಾವಿನಿಂದ ಆಘಾತಗೊಂಡ ಕುಟುಂಬಸ್ಥರು ಮತ್ತು ಸಂಬಂಧಿಕರು ಆಸ್ಪತ್ರೆ ಆವರಣದಲ್ಲಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ಚಿಕಿತ್ಸೆಯ ಕುರಿತು ಕೆಲವು ಸಂದೇಹಗಳನ್ನು ಎತ್ತಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮತ್ತು ವೈದ್ಯಾಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಯುವಕನ ಸಾವಿನಿಂದ ಮೀನುಗಾರ ಸಮುದಾಯದಲ್ಲಿ ತೀವ್ರ ಶೋಕದ ವಾತಾವರಣ ನಿರ್ಮಾಣವಾಗಿದೆ.

Recent Articles

spot_img

Related Stories

Share via
Copy link