ಕೇತಗಾನಹಳ್ಳಿ ಬಳಿ ಭೂ ಕಬಳಿಕೆ ಪ್ರಕರಣ:10 ದಿನದಲ್ಲಿ ವರದಿ ಸಲ್ಲಿಸಲು ಸರ್ಕಾರಕ್ಕೆ ‘ಹೈ’ ಸೂಚನೆ

ಬೆಂಗಳೂರು:

   ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಮತ್ತಿತರರಿಂದ ರಾಮನಗರದ ಬಿಡದಿಯ ಕೇತಗಾನಹಳ್ಳಿಯಲ್ಲಿನ ಸರ್ಕಾರಿ ಜಮೀನಿನ ಒತ್ತುವರಿ ತೆರವು ಕುರಿತು 10 ದಿನಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೊರ್ಟ್ ಬುಧವಾರ ಸೂಚನೆ ನೀಡಿದೆ.

   ಭೂ ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಸ್ತೃತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತರು ಮಾಡಿರುವ ಆದೇಶ ಜಾರಿ ಮಾಡುವಂತೆ ಹೈಕೋರ್ಟ್‌ ಹೊರಡಿಸಿರುವ ಆದೇಶ ಪಾಲಿಸದ ರಾಜ್ಯ ಸರ್ಕಾರದ ನಡೆ ವಿರುದ್ಧ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ ಮತ್ತು ಟಿ ವೆಂಕಟೇಶ್‌ ನಾಯ್ಕ್‌ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿ, ಈ ಆದೇಶವನ್ನು ನೀಡಿದೆ.

   ಆದೇಶ ಹೊರಡಿಸುವ ಮೊದಲು, ಹೆಚ್ಚುವರಿ ಅಡ್ವೊಕೇಟ್ ಜನರಲ್ (ಎಎಜಿ) ಮತ್ತು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರು ವರದಿಯನ್ನು ಸಲ್ಲಿಸಿದರು, ವರದಿಯಲ್ಲಿ ನೋಟಿಸ್ ನೀಡಿದ ನಂತರ ಸಮೀಕ್ಷೆ ನಡೆಸಲಾಗಿದೆ ಎಂದು ತಿಳಿಸಲಾಗಿದೆ.

   ಕೇತಗಾನಹಳ್ಳಿ ಸುತ್ತಮುತ್ತ ಸ್ಥಳೀಯರಿಗೆ ಮಂಜೂರಾಗಿರುವ ಜಮೀನು ಪರಿಶೀಲಿಸಲು ಸಮಿತಿ ರಚನೆಯಾಗಿದೆ. 14 ಎಕರೆ ಜಮೀನು ಒತ್ತುವರಿ ತೆರವುಗೊಳಿಸಲಾಗಿದೆ. 18 ಎಕರೆ ಒತ್ತುವರಿ ಕುರಿತು ಸಂಬಂಧಪಟ್ಟವರಿಗೆ ನೋಟಿಸ್‌ ನೀಡ ಲಾಗುತ್ತಿದೆ ಎಂದರು.

   ಇದಕ್ಕೆ ಆಕ್ಷೇಪಿಸಿದ ಅರ್ಜಿದಾರರ ಪರ ವಕೀಲರು, 110 ಎಕರೆ ಗೋಮಾಳ ಜಮೀನು ಒತ್ತುವರಿ ಯಾಗಿದೆ. ನಕಲಿ ಮಂಜೂರಾತಿ ಪತ್ರ ಆಧರಿಸಿ ರಾಜಕಾರ ಣಿಗಳು, ಪ್ರಭಾವಿಗಳು ಖರೀದಿಸಿದ್ದಾರೆ. ಆ ಜಮೀನನ್ನು ಸರ್ಕಾರ ವಶಪಡಿಸಿಕೊಂಡಿಲ್ಲ. ಒತ್ತುವರಿ ತೆರವುಗೊಳಿಸಿ, ಜಮೀನನ್ನು ವಶಪಡಿಸಿಕೊಳ್ಳಬೇಕು ಎಂದರು.

   ಎಷ್ಟು ಜಮೀನು ಸ್ಥಳೀಯರಿಗೆ ಮಂಜೂರಾಗಿದೆ ಎಂಬ ನ್ಯಾಯಪೀಠದ ಪ್ರಶ್ನೆಗೆ ಉತ್ತರಿಸಿದ ರಾಜೇಂದ್ರ ಕಟಾರಿಯಾ ಜಮೀನು ಮಂಜೂರಾತಿ ದಾಖಲೆಗಳು ಇಲ್ಲವಾಗಿದೆ. ಆ ಕುರಿತು ಪರಿಶೀಲನೆ ನಡೆಸಲು ಸಮಿತಿ ರಚಿಸಲಾಗಿದೆ. ಸಮಿತಿಯು ಭೂ ಮಂಜೂರಾತಿ ಅಸಲಿಯೇ ಅಥವಾ ನಕಲಿಯೇ ಎಂಬದನ್ನು ಪರಿಶೀಲಿಸಲಿದೆ. ವಿಧಿ ವಿಜ್ಞಾನ ಪ್ರಯೋಗಾಲಯದಿಂದ ವರದಿ ಪಡೆ ಯ ಲಿದ್ದು, ಕಾಲಾವಕಾಶ ನೀಡಬೇಕು ಎಂದು ಕೋರಿದರು.

   ಇದಕ್ಕೆ ಪೀಠವು ಈಗ ದಾಖಲೆ ನಾಪತ್ತೆಯಾಗಿವೆ. ಮುಂದೆ ಜಮೀನು ನಾಪತ್ತೆಯಾಗಬಹುದು. ಪ್ರಭಾವಿಗಳು ಒತ್ತುವರಿ ಮಾಡಿರುವುದರಿಂದ ಕೈ ಕಟ್ಟಿ ಕುಳಿತ್ತಿದ್ದೀರಿ. ಅದೇ ಭಿಕ್ಷುಕರು, ಬಡವರು ಐದಾರಡಿ ಒತ್ತುವರಿ ಮಾಡಿದರೆ ಬುಲ್ಡೋಜರ್ ತೆಗೆದುಕೊಂಡು ಹೋಗಿ ತೆರವು ಮಾಡುತ್ತಿದ್ದಿರಿ. ಸರ್ಕಾರಕ್ಕೆ ಧೈರ್ಯವಿದ್ದರೆ ಒತ್ತುವರಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಜಮೀನು ಪಡೆಯಬೇಕು. ಇಲ್ಲವಾದರೆ ನ್ಯಾಯಾಲಯವೇ ಆ ಬಗ್ಗೆ ಸೂಕ್ತ ಆದೇಶ ಹೊರಡಿಸುತ್ತದೆ. ಜಮೀನು ಒತ್ತುವರಿಯಿಂದ ಪಡೆದಿರುವ ಲಾಭವನ್ನೂ ವಸೂಲಿಗೆ ಆದೇಶಿಸಬೇಕಾಗಬಹುದು ಎಂದು ಎಚ್ಚರಿಸಿತು.

   ನಂತರ ಕೇತಗಾನಹಳ್ಳಿಯ ಸರ್ವೇ ನಂ 7, 8, 9, 16 ಮತ್ತು 79ರ ಒತ್ತುವರಿ ತೆರವಿನ ಬಗ್ಗೆ 10 ದಿನಗಳಲ್ಲಿ ವರದಿ ಕೊಡಬೇಕು ಎಂದು ನಿರ್ದೇಶಿಸಿದ ಪೀಠವು, ವಿಚಾರಣೆಯನ್ನು ಏಪ್ರಿಲ್‌ 3ಕ್ಕೆ ವಿಚಾರಣೆ ಮುಂದೂಡಿತು.

Recent Articles

spot_img

Related Stories

Share via
Copy link