ಮಧುಗಿರಿ:
ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೊಡಿಗೇನಹಳ್ಳಿ ಹೋಬಳಿ ಮೈದನ ಹೊಸಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರ ಬಹುದಿನದ ಬೇಡಿಕೆಯಾಗಿದ್ದ ಪಡಿತರ ವಿತರಣಾ ಉಪಕೇಂದ್ರವನ್ನು ಉದ್ಘಾಟಿಸಿ, ಆಯೋಜಿಸಿದ್ದ ಸಭೆಯನ್ನು ಉದ್ದೇಶಿಸಿ ಮಾಜಿ ಸಚಿವ ಕೆ ಎನ್ ರಾಜಣ್ಣ ಮಾತನಾಡಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಪಡಿತರ ವಿತರಣಾ ಉಪಕೇಂದ್ರ ಆರಂಭದಿಂದಾಗಿ ಸ್ಥಳೀಯರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ದೂರದೂರಿಗೆ ತೆರಳಿ ಪಡಿತರ ಪಡೆಯುವ ತೊಂದರೆ ತಪ್ಪಲಿದೆ ಎಂದು ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ಆಹಾರ ಶಿರಸ್ತೇದಾರ ಸುಜಾತಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗೋಪಾಲಯ್ಯ ಹಾಗೂ ಆದಿನಾರಾಯಣ ರೆಡ್ಡಿ, ಕೆಎಂಎಫ್ ಮಾಜಿ ನಿರ್ದೇಶಕ ಕಾಂತರಾಜು, ಮುಖಂಡ ಎಂ.ಜಿ. ಶ್ರೀನಿವಾಸಮೂರ್ತಿ ಸೇರಿದಂತೆ ಹಲವು ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಗ್ರಾಮದ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಜನಪರ ಯೋಜನೆಗಳನ್ನು ಗ್ರಾಮ ಮಟ್ಟಕ್ಕೆ ತಲುಪಿಸಲಾಗುವುದು ಎಂದು ಈ ವೇಳೆ ಭರವಸೆ ನೀಡಿದರು.








