ದಾವಣಗೆರೆ:
ಕಟ್ಟಡ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ಕಾರ್ಮಿಕ ಇಲಾಖೆ ಅಧಿಕಾರಿಗಳ ಕ್ರಮ ಖಂಡಿಸಿ ಜಿಲ್ಲಾ ಆಸರೆ ಕಟ್ಟಡ ಅಸಂಘಟಿತ ಕಾರ್ಮಿಕರ ಸಂಘದ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ನಗರದ ಜಯದೇವ ವೃತ್ತದಲ್ಲಿ ಜಮಾಯಿಸಿದ ಪ್ರತಿಬಟನಾಕಾರರು, ಕಾರ್ಮಿಕ ಇಲಾಕೆಯ ನಿರ್ಲಕ್ಷ್ಯದ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ವ್ಯಕ್ತ ಪಡಿಸಿ, ಬಳಿಕ ಜಿಲ್ಲಾಡಳಿತ ಭವನಕ್ಕೆ ಬೈಕ್ ರ್ಯಾಲಿಯ ಮೂಲಕ ತೆರಳಿ, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಕಟ್ಟಡ ಕಾರ್ಮಿಕರು ತಮ್ಮ ಶ್ರಮದ ಫಲವಾಗಿ ಕಲ್ಯಾಣ ಮಂಡಳಿಯಲ್ಲಿ ಸೆಸ್ ರೂಪದಲ್ಲಿ ಸಂಗ್ರಹವಾಗಿರುವ ಹಣದಲ್ಲಿ ತಮ್ಮ ಮಕ್ಕಳ ಶಿಕ್ಷಣಕ್ಕೆ, ಮದುವೆಗೆ ಸಹಾಯ ಧನ ನೀಡುವಂತೆ ಅರ್ಜಿ ಸಲ್ಲಿಸಿ, ವರ್ಷಗಳೇ ಕಳೆದಿವೆ. ಆದರೂ ಸಹ ಕಾರ್ಮಿಕ ಇಲಾಖೆ ಅಧಿಕಾರಿಗಳು ಆ ಅರ್ಜಿಗಳನ್ನು ವಿಲೇವಾರಿ ಮಾಡದೇ, ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆಂದು ಆರೋಪಿಸಿದರು.
ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಧನ ಕೋರಿ ಸಲ್ಲಿಸಿರುವ ಹಣ ಬಿಡುಗಡೆಯಾಗಿಲ್ಲ ಮತ್ತು ವೈದಕೀಯ ನೆರವು ದೊರೆತಿಲ್ಲ. ಮದುವೆ ಧನಸಹಾಯ, ಶೈಕ್ಷಣಿಕ, ಅಪಘಾತ, ವೈದ್ಯಕೀಯ ಧನಸಹಾಯ ನೀಡಿಲ್ಲ. ಹೊಸ ನೊಂದಾಯಿತ ಕಾರ್ಡುಗಳು ಕಳೆದ ಒಂದು ವರ್ಷದಿಂದ ಇಲ್ಲಿಯವರೆಗೂ ವಿತರಿಸಿಲ್ಲ. ಈ ಬಗ್ಗೆ ವಿಚಾರಿಸಿದರೆ ಆನ್ಲೈನ್ಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಸಬೂಬು ಹೇಳುತ್ತಾರೆಂದು ಅಸಮಾಧಾನ ವ್ಯಕ್ತಪಡಿಸಿದರು.
ಸೌಲಭ್ಯ ವಿಳಂಬ ಆಗುವ ಬಗ್ಗೆ ಪ್ರಶ್ನಿಸಿದರೆ, ಸರ್ಕಾರ ಇಂಟರ್ನೆಟ್ ಬಿಲ್ ಪಾವತಿಸಿಲ್ಲ. ಹೀಗಾಗಿ ನೆಟ್ ಸೌಲಭ್ಯವಿಲ್ಲ. ಸಿಬ್ಬಂದಿ ಕೊರತೆ ಇದೆ ಎಂಬುದಾಗಿ ಉಡಾಫೆಯ ಮಾತನಾಡುತ್ತಾರೆ. ಕಾರ್ಮಿಕರಿಗೆ ಸೌಲಭ್ಯ ಕೊಡಿಸಲು ಕಾರ್ಮಿಕ ಸಂಘಟನೆಗಳ ಮುಖಂಡರು ಕಛೇರಿಗಳಿಗೆ ಅಲೆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.
ಕಾರ್ಮಿಕ ಇಲಾಖೆಯ ಸೆಸ್ ರೂಪದಲ್ಲಿರುವಂತಹ ಹಣ ಸಾಕಷ್ಟಿದೆ. ಆದರೂ ಸಹ ರಾಜ್ಯ ಕಾರ್ಮಿಕ ಆಯುಕ್ತರು ಆಯಾ ಜಿಲ್ಲೆಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಕಾರ್ಮಿಕರಿಗೆ ಇಲಾಖೆಯಿಂದ ಮನೆ ಕಟ್ಟಿಕೊಳ್ಳಲು 5 ಲಕ್ಷ ರೂ ಸಬ್ಸಿಡಿ ರಹಿತ ಸಹಾಯಧನ ನೀಡುತ್ತೇವೆ ಎಂದು ಜಾಹಿರಾತು ನೀಡುತ್ತಿದ್ದಾರೆ ಆದರೆ ಇಲ್ಲಿಯವರೆಗೂ ಒಬ್ಬ ಕಾರ್ಮಿಕರಿಗೂ ನೆರವು ನೀಡಿಲ್ಲ. ಆದ್ದರಿಂದ ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿಸಿ ಕಾರ್ಮಿಕರಿಗೆ ಸೌಲಭ್ಯ ಕೊಡಿಸುವ ಮೂಲಕ ನ್ಯಾಯ ಕೊಡಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಘದ ಶಿವಕುಮಾರ್ ಪಿ, ಸುಂಕಾಪುರ, ಹೆಚ್.ಗಂಗಾಧರ್, ಎನ್.ಕೆ.ಚಂದ್ರಶೇಖರ್, ಆರ್ ನಾಗಾರಾಜ್, ಮಂಜುನಾಥ, ಹನುಮಂತಪ್ಪ, ಜಯಣ್ಣ ಮತ್ತಿತರರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
