ಬೆಂಗಳೂರು
ಮುಂದಿನ ಮೂರೂವರೇ ವರ್ಷಗಳವರೆಗೆ ನಾನೇ ರಾಜ್ಯದ ಮುಖ್ಯಮಂತ್ರಿಯಾಗಿ ಸುಭದ್ರ ಆಡಳಿತ ನಡೆಸಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಿದ್ದು ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.
ದೇವರ, ಜನರ ಆಶೀರ್ವಾದದಿಂದ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ. ಮೂರೂವರೇ ವರ್ಷಗಳ ಕಾಲ ಯಾರ ಮಾತಿಗೂ ತಲೆಕೆಡಿಸಿಕೊಳ್ಳದೇ ರಾಜ್ಯದ ಅಭಿವೃದ್ಧಿ ಕಾರ್ಯಗಳತ್ತ ಗಮನಹರಿಸುತ್ತೇನೆ ಎಂದು ಹೇಳಿದರು.ನಗರದ ಕೆಜಿ ರಸ್ತೆಯ ಎಫ್ಕೆಸಿಸಿಐ ಸಭಾಂಗಣದಲ್ಲಿ ಮಂಗಳವಾರ ನಡೆದ ಮಹಿಳಾ ಉದ್ದಿಮಿಗಳ ದಿನಾಚರಣೆ ಸಮಾರಂಭದ ನಂತರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು ಉಪ ಚುನಾವಣೆಯ ನಂತರ ಬಿಎಸ್ವೈ ನೇತೃತ್ವದ ಸರ್ಕಾರ ಪತನವಾಗಲಿದೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಖಾರವಾಗಿಯೇ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಈ ಮಾತಿಗೆಲ್ಲ ತಲೆಕೆಡಿಸಿಕೊಳ್ಳಲಾರೆ ಎಂದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಹಾಸನ ಬೆಂಗಳೂರು ಗ್ರಾಮಾಂತರ ಹೊರತುಪಡಿಸಿ ಎಲ್ಲಾ ಸ್ಥಾನಗಳನ್ನು ಗೆದ್ದು ಕೊಂಡೆವು. ಜೆಡಿಎಸ್, ಕಾಂಗ್ರೆಸ್, ತಲಾ ಒಂದೊಂದು ಸ್ಥಾನಗಳನ್ನು ಗೆಲ್ಲಲು ಮಾತ್ರ ಸಾಧ್ಯವಾಯಿತು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಂತೂ ಹೀನಾಯ ಸೋಲು ಅನುಭವಿಸುವಂತಾಯಿತು ಇನ್ನಾದರೂ ಪ್ರತಿಪಕ್ಷಗಳ ನಾಯಕರು ಬುದ್ಧಿ ಕಲಿತುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಭೀಕರ ಪ್ರವಾಹ ತಲೆ ದೋರಿತ್ತು. ತಕ್ಷಣವೇ ಮನೆ ಮಠ ಬಿಟ್ಟು ಏಕಾಂಗಿಯಾಗಿ ನೆರೆಪೀಡಿತ ಪ್ರದೇಶಗಳಲ್ಲಿ ಅಡ್ಡಾಡ್ಡಿ ಅಭಿವೃದ್ಧಿ ಕಾರ್ಯಗಳತ್ತ ಗಮನ ಕೊಟ್ಟಿದ್ದೇನೆ ಮುಂದಿನ 2 ದಿನಗಳ ನಂತರ ಪಕ್ಷದ ಅಭ್ಯರ್ಥಿಗಳ ಪರವಾಗಿ 15 ದಿನಗಳ ಕಾಲ ಪ್ರವಾಸ ಮಾಡುತ್ತೇನೆ ಎಂದು ಅವರು ತಿಳಿಸಿದರು.
ಮಾಜಿ ಸಚಿವ ತನ್ವೀರ್ ಸೇಠ್ ಹಲ್ಲೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪಿಎಫ್ಐ ಸಂಸ್ಥೆಯನ್ನು ಸಿದ್ದರಾಮಯ್ಯ ಅವರೇ ಬೆಳೆಸಿದ್ದು ಆ ಸಂಸ್ಥೆಯ ವಿರುದ್ಧ ಕ್ರಮಕೈಗೊಂಡು ತನಿಖೆ ನಡೆಸಬೇಕಿತ್ತು. ಆದರೆ ಅವರು ಆ ಕೆಲಸ ಮಾಡದೇ ಸ್ವಾರ್ಥಕ್ಕಾಗಿ ಬಳಸಿಕೊಂಡರು. ಅದರ ಪರಿಣಾಮವೇ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/11/BS_YEddyurappa.gif)