ಬೆಂಗಳೂರು
ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮವು ಕಳೆದ ಮೂರು ತಿಂಗಳಿನಿಂದ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡದಿರುವುದರಿಂದ ಬಸವ ವಸತಿ ಯೋಜನೆ, ದೇವರಾಜ ಅರಸು ವಸತಿ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆಗಳ ಸುಮಾರು 53 ಸಾವಿರ ಫಲಾನುಭವಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ ವಸತಿ ಯೋಜನೆಗಳಿಗೆ ಹಂತ ಹಂತವಾಗಿ ಬಿಡುಗಡೆಯಾಗಬೇಕಿದ್ದ ಅನುದಾನವು ಏಕಾಏಕಿ ಸ್ಥಗಿತಗೊಡಿರುವುದರಿಂದ ಗೃಹ ನಿರ್ಮಾಣ ಆರಂಭಿಸಿದ್ದ ಸಾವಿರಾರು ಫಲಾನುಭವಿಗಳು ಆತಂಕಕ್ಕೆ ಸಿಲುಕಿದ್ದಾರೆ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮವನ್ನು ನಿತ್ಯ ಸಂಪರ್ಕಿಸುತ್ತಿದ್ದಾರೆ. ನಿಗಮದಿಂದ ಪ್ರಾರಂಭಿಸಿರುವ ಕಾಲ್ಸೆಂಟರ್ಗೆ ಪದೇ ಪದೇ ಕರೆ ಮಾಡಿ ಪ್ರಶ್ನಿಸುತ್ತಿದ್ದಾರೆ.
ಫಲಾನುಭವಿಗಳಿಗೆ ವಿವಿಧ ಹಂತಗಳಲ್ಲಿ (ಅಡಿಪಾಯ, ಕಿಟಕಿ ನಿಲ್ಲಿಸುವುದು, ಛಾವಣಿ ಹಾಗೂ ಮನೆ ನಿರ್ಮಾಣ ಪೂರ್ಣಗೊಂಡಾಗ) ಅನುದಾನ ಬಿಡುಗಡೆಯಾಗುತ್ತದೆ. ಜಿಪಿಎಸ್ ತಂತ್ರಜ್ಞಾನದ ಮೂಲಕ ಈ ಹಂತಗಳನ್ನು ಪರಿಶೀಲಿಸುವ ಅಧಿಕಾರಿಗಳು ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡುತ್ತಾರೆ. ಆದರೆ, ಇದೀಗ ಮನೆ ನಿರ್ಮಾಣ ಹಂತದಲ್ಲಿದ್ದರೂ, ಹಣ ಬಿಡುಗಡೆಯಾಗದ ಪರಿಣಾಮ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗದೆ ಫಲಾನುಭವಿಗಳು ಆತಂಕಗೊಂಡಿದ್ದಾರೆ.
ಯಾದಗಿರಿ, ಚಿತ್ರದುರ್ಗ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಹಣಕಾಸಿನ ಅವ್ಯವಹಾರಗಳು ನಡೆದಿರುವ ಸಂಬಂಧ ದೂರುಗಳು ದಾಖಲಾಗಿವೆ. ಈ ಸಂಬಂಧ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಧಿಕಾರಿಗಳು ಹಾಗೂ ಸ್ಥಳೀಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ತನಿಖೆ ನಡೆಸಲಾಗುತ್ತಿದೆ.
ತನಿಖೆ ಪೂರ್ಣಗೊಂಡ ಬಳಿಕ ಅನುದಾನ ಬಿಡುಗಡೆಯಾಗಲಿದೆ ಎಂದು ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ಹಿರಿಯ ಅಧಿಕಾರಿಗಳು ಮಾಹಿತಿ ನೀಡುತ್ತಾರೆ. ಆದರೆ, ಕೆಲ ಜಿಲ್ಲೆಗಳಲ್ಲಿ ಅವ್ಯವಹಾರ ನಡೆದ ಪರಿಣಾಮ ಇಡೀ ರಾಜ್ಯದಲ್ಲಿ ಅನುದಾನ ಸ್ಥಗಿತ ಮಾಡಲು ಕಾರಣವೇನು ಎಂದು ಪ್ರಶ್ನಿಸಿದರೆ, ಅಧಿಕಾರಿಗಳು ಮೌನವಾಗುತ್ತಾರೆ.
ಯೋಜನೆಯಲ್ಲಿ ಮನೆ ಮಂಜೂರಾಗುತ್ತಿದ್ದಂತೆ ಹಳೆಯ ಮನೆಯನ್ನು ಕೆಡವಿದ್ದೇವೆ. ಈಗಾಗಲೇ ಒಂದು ಕಂತು ಹಣ ಬಿಡುಗಡೆಯಾಗಿದ್ದು, ಅಡಿಪಾಯ ಹಾಕಿ, ತಾತ್ಕಾಲಿಕ ನಿರ್ಮಿಸಿಕೊಂಡಿರುವ ಜೋಪಡಿಯಲ್ಲಿ ವಾಸ ಮಾಡುತ್ತಿದ್ದೇವೆ. ಆದರೆ, ಅನುದಾನ ಬಿಡುಗಡೆಯಾಗುವ ಸಂಬಂಧ ಅಧಿಕಾರಿಗಳು ಯಾವುದೇ ಮಾಹಿತಿ ನೀಡುತ್ತಿಲ್ಲ ಎಂದು ಯಾದಗಿರಿ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮಕ್ಕೆ ಬಂದಿದ್ದ ಲಿಂಗಮ್ಮಾ ತಮ್ಮ ಅಸಮಾಧಾ ವ್ಯಕ್ತಪಡಿಸಿದರು . ಫಲಾನುಭವಿಗಳಿಗೆ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮವು .1.5 ಲಕ್ಷದಿಂದ .1.65 ಲಕ್ಷದವರೆಗೆ ಅನುದಾನ ನೀಡುತ್ತಿದೆ. 20/30 ಹಾಗೂ 15/20 ನಿವೇಶನದಲ್ಲಿ ಮನೆ ನಿರ್ಮಿಸಿಕೊಳ್ಳಲು ಅವಕಾಶವಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
