ಬಳ್ಳಾರಿ
ಕಾರ್ಮಿಕರನ್ನು ಸರಕು ಸಾಗಣೆ ವಾಹನಗಳಲ್ಲಿ ಸಾಗಿಸುವುದು ಅಪರಾಧ. ಇಂತಹ ವಾಹನಗಳಲ್ಲಿ ಪ್ರಯಾಣಿಸುವುದರಿಂದ ತಮ್ಮ ಜೀವಕ್ಕೆ ತಾವೇ ಕುತ್ತು ತಂದುಕೊಳ್ಳಲಿದ್ದೀರಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರ್ಜುನ್ ಎಸ್.ಮಲ್ಲೂರ್ ಅವರು ಹೇಳಿದರು.
ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆ ಮತ್ತು ಕೆ.ಎಂ.ವಿ. ಪ್ರಾಜೆಕ್ಟ್ಸ್ ಲಿಮಿಟೆಡ್ ಸಹಯೋಗದಲ್ಲಿ ನಗರದ ಪಾರ್ವತಿ ನಗರದಲ್ಲಿರುವ ಹೊಸ ಜಿಲ್ಲಾ ನ್ಯಾಯಾಲಯದ ಸಂಕೀರ್ಣ ನಿರ್ಮಾಣದ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸರಕು ಸಾಗಣೆ ಮತ್ತು ಕನ್ಸ್ಟ್ರಕ್ಷನ್ ವಾಹನಗಳಲ್ಲಿ ಕಾರ್ಮಿಕರನ್ನು ಕರೆದೊಯ್ಯೋವುದನ್ನು ತಡೆಗಟ್ಟುವ ಬಗ್ಗೆ, ನಿರ್ಮಾಣದ ಸುರಕ್ಷತಾ ಕ್ರಮಗಳು ಹಾಗೂ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ಬಗ್ಗೆ ಕಾನೂನು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವಾಹನಗಳು ಅಪಘಾತಕ್ಕೀಡಾದಾಗ ವಿಮೆ ಪಡೆದುಕೊಳ್ಳಲು ಆ ವಾಹನಗಳು ವಿಮಾ ಪ್ಯಾಪ್ತಿಗೆ ಒಳಪಟ್ಟರೆ ಸಾಧ್ಯವಾಗುತ್ತದೆ. ಪ್ರಸ್ತುತ ದಿನಗಳಲ್ಲಿ ಕಟ್ಟಡ ಕಾಮಗಾರಿಗಳು ವೇಗವಾಗಿ ನಡೆಯುತ್ತಿದ್ದು, ಮರಳು, ಉಪಕರಣಗಳನ್ನು ಸಾಗಿಸುತ್ತಿದ್ದ ಲಾರಿಗಳಲ್ಲಿ ಕಾರ್ಮಿಕರನ್ನು ಸಾಗಿಸಲಾಗುತ್ತಿದೆ. ಇಂತಹ ಸಂದರ್ಭಗಳಲ್ಲಿ ಅವಘಡಳಾದರೆ ಪರಿಹಾರ ಪಡೆಯಲು ಸಾಧ್ಯವಿಲ್ಲ. ಕಾರ್ಮಿಕರನ್ನು ಕರೆತರಲು ಪ್ರತ್ಯೇಕ ವಾಹನಗಳ ವ್ಯವಸ್ಥೆ ಮಾಡಿದರೆ, ಕಾರ್ಮಿಕರ ಸಾವು ನೋವುಗಳನ್ನು ತಡೆಗಟ್ಟಬಹುದು ಎಂದು ಅವರು ಹೇಳಿದರು.
ಕೆಲಸದ ಸ್ಥಳಗಳಲ್ಲಿ ಕಾರ್ಮಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಜೊತೆಗೆ ಬಾಲ ಕಾರ್ಮಿಕ ಪದ್ದತಿಯನ್ನು ತಡೆಯಬೇಕು. ಮಕ್ಕಳು ಆಡುವ ವಯಸ್ಸಿನಲ್ಲಿ ಅವರಿಂದ ಆದಾಯ ಬಯಸಬಾರದು. ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಂಡು ಕೆಲಸದ ಬದಲು ಶಿಕ್ಷಣ ಕೊಡಿಸಬೇಕು; ಅಂದಾಗ ಮಾತ್ರ ಸಶಕ್ತ ಭಾರತ ನಿರ್ಮಾಣವಾಗಲು ಸಾಧ್ಯ ಎಂದು ಅವರು ಹೇಳಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಚಂದಶೇಖರ್ ಎನ್. ಐಲಿ ಮಾತನಾಡಿ, ಕಾರ್ಮಿಕರು ಕೆಲಸದ ಸ್ಥಳಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು. ಮಕ್ಕಳಿಗೆ ಕೆಲಸದ ಬದಲಿಗೆ ಗುಣಮಟ್ಟದ ಶಿಕ್ಷಣ ಒದಗಿಸಿ ಉನ್ನತ ಹುದ್ದೆಗೇರಿಸಿ ಎಂದರು.ಕಟ್ಟಡ ಕಾರ್ಮಿಕರು ಕಡ್ಡಾಯವಾಗಿ ನಮ್ಮ ಇಲಾಖೆಯಲ್ಲಿ ಹೆಸರನ್ನು ನೋಂದಾಯಿಸಿ ಸೌಲಭ್ಯಗಳನ್ನು ಪಡೆದುಕೊಳ್ಳಿ ಎಂದು ಹೇಳಿದ ಅವರು ತಮಗೆ ನಮ್ಮ ಇಲಾಖೆಯಿಂದ ನೀಡಲಾಗುತ್ತಿರುವ ಸೌಲಭ್ಯಗಳ ವಿವರವನ್ನು ಈ ಸಂದರ್ಭದಲ್ಲಿ ನೀಡಿದರು.
ಕೆ.ಎಂ.ವಿ. ಪ್ರಾಜೆಕ್ಟ್ ಲಿಂ., ನ ಡೆಪ್ಯೂಟಿ ಪ್ರಾಜೆಕ್ಟ್ ಮ್ಯಾನೇಜರ್ ರುದ್ರಪ್ರಸಾದ್ ಅವರು ಅಧ್ಯಕ್ಷತೆ ವಹಿಸಿದ್ದರು.
ಕಾರ್ಮಿಕ ನಿರೀಕ್ಷಕ ಎಂ.ರವಿದಾಸ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ರಾಮಲಿಂಗಪ್ಪ.ಬಿಕೆ, ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ, ಯೋಜನೆಯ ಕ್ಷೇತ್ರಾಧಿಕಾರಿ ಪಿ.ಎಂ.ಈಶ್ವರಯ್ಯ, ಕೆ.ಎಂ.ವಿ. ಪ್ರಾಜೆಕ್ಟ್ ಲಿಂ., ನ ವ್ಯವಸ್ಥಾಪಕ ಸತ್ಯನಾರಾಯಣ ಮತ್ತಿತರರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
