ಜಲಧಾರೆ ಯೋಜನೆ ಜಾರಿಗೆ ಸರ್ಕಾರ ಪಣ : ಕೃಷ್ಣಭೈರೇಗೌಡ

ಬೆಳಗಾವಿ

        ಗ್ರಾಮೀಣ ಪ್ರದೇಶಗಳಿಗೆ ನಿರಂತರವಾಗಿ, ವರ್ಷಪೂರ್ತಿ ಶುದ್ಧ ಕುಡಿಯುವ ನೀರು ಪೂರೈಸುವ ಜಲಧಾರೆ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ಪಣ ತೊಟ್ಟಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

          ಮೇಲ್ಮನೆ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ತೇಜಸ್ವಿನಿಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸುಮಾರು 60-70 ಸಾವಿರ ಕೋಟಿ.ರೂಪಾಯಿ ವೆಚ್ಚದ ಜಲಧಾರೆ ಯೋಜನೆಯನ್ನು 5-6 ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು. ಗ್ರಾಮೀಣ ಪ್ರದೇಶದ ಜನರಿಗೆ ನದಿ ಅಥವಾ ಜಲಾಶಯಗಳಿಂದ ನೀರನ್ನು ಶುದ್ಧೀಕರಿಸಿ ಪೂರೈಸಲಾಗುವುದು ಎಂದರು.

         ರಾಜ್ಯದ ಎಲ್ಲಾ ಗ್ರಾಮಗಳಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಕುಡಿಯುವ ನೀರನ್ನು ಪೂರೈಕೆ ಮಾಡಲಾಗುತ್ತಿದೆ. 400- 500 ಗ್ರಾಮಗಳಿಗೆ ಸದ್ಯ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

          ರಾಜ್ಯದಲ್ಲಿ 266.22 ಲಕ್ಷ ಜಾನುವಾರುಗಳಿದ್ದು, ಗ್ರಾಮವಾರು ಜನರಿಗೆ ಕುಡಿಯುವ ನೀರಿನ ಪ್ರಮಾಣ ಲೆಕ್ಕ ಹಾಕುವಾಗ ಆ ಗ್ರಾಮದಲ್ಲಿರುವ ಜಾನುವಾರುಗಳ ಸಂಖ್ಯೆಯನ್ನು ಸಹ ಪರಿಗಣಿಸಲಾಗುತ್ತದೆ. ಪ್ರತಿ ಗ್ರಾಮದಲ್ಲಿ ಜಾನುವಾರುಗಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ಕುಡಿಯುವ ನೀರಿನ ತೊಟ್ಟಿಗಳನ್ನು ನಿರ್ಮಾಣ ಮಾಡಲಾಗುವುದು ಎಂದೂ ಸಚಿವರು ತಿಳಿಸಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link