ಬೆಂಗಳೂರು
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್ ಅವರ ಪತ್ನಿ ತೇಜಶ್ವಿನಿ ಅನಂತ ಕುಮಾರ್ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಬೇಕೆಂದು ಬಿಬಿಎಂಪಿ ಪಾಲಿಕೆ ಸದಸ್ಯರು ಒತ್ತಾಯಿಸಿದ್ದಾರೆ.
ರಾಜ್ಯ ಬಿಜೆಪಿ ಕಚೇರಿಯಲ್ಲಿಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಬಿಬಿಎಂಪಿ ಸದಸ್ಯರು ಭಾಗವಹಿಸಿದ್ದರು.
ಈ ಸಭೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ತೇಜಶ್ವಿನಿ ಅನಂತ್ ಕುಮಾರ್ ಅಭ್ಯರ್ಥಿಯಾದರೆ ಅನುಕಂಪದ ಅಲೆ ಹಾಗು ವೈಯಕ್ತಿಕ ವರ್ಚಸ್ಸಿನಿಂದ ಬಿಜೆಪಿ ಗೆಲವು ಸಾಧಿಸಬಹುದೆಂಬ ಅಭಿಪ್ರಾಯವನ್ನು ಬಿಬಿಎಂಪಿ ಸದಸ್ಯರು ವ್ಯೆಕ್ತಪಡಿಸಿದ್ದಾರೆ.
ಬಿಜೆಪಿ ಮೂಲಗಳು ಈ ವಿಷಯ ತಿಳಿಸಿದ್ದು, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯದ ಮತಗಳ ಹೆಚ್ಚಿನ ಸಂಖ್ಯೆಯಲ್ಲಿವೆ. ಹಾಗಾಗಿ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅಥವಾ ಆರ್.ಅಶೋಕ್ ಅವರನ್ನು ಕಣಕ್ಕಿಳಿಸುವಂತೆ ಇನ್ನೂ ಕೆಲ ಮುಖಂಡರು ಸಲಹೆ ಮಾಡಿದ್ದಾರೆ ಎನ್ನಲಾಗಿದೆ.
ಇಂದಿನ ಸಭೆಯಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಸಂಸದ ಪಿ.ಸಿ.ಮೋಹನ್ ಪಾಲ್ಗೊಂಡಿದ್ದರು. ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ವಿ.ಸೋಮಣ್ಣ ಗೈರು ಹಾಜರಾಗಿದ್ದರು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಸಂಸದೆ ಶೋಭಾಕರಂದ್ಲಾಜೆ ‘ಈಗ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಗ್ಗೆ ಸಭೆ ನಡೆಲಸಲಾಗಿದೆ. ಮಧ್ಯಾಹ್ನ ಬೆಂಗಳೂರು ಕೇಂದ್ರ ಮತ್ತು ಉತ್ತರ ಲೋಕಸಭಾ ಕ್ಷೇತ್ರದ ಬಗ್ಗೆ ಚರ್ಚೆ ನಡೆಯಲಿದೆ.
ಪ್ರಮುಖರು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ತೇಜಸ್ವಿನಿ ಅನಂತಕುಮಾರ್ ಸೇರಿದಂತೆ ಹಲವು ಹೆಸರುಗಳು ಕೇಳಿ ಬಂದಿವೆ. ಆದರೆ ಇದು ಅಭ್ಯರ್ಥಿಗಳ ಆಯ್ಕೆಗೆ ವೇದಿಕೆಯಲ್ಲ. ಅದಕ್ಕಾಗಿ ಸಂಸದೀಯ ಮಂಡಳಿ, ಕೋರ್ ಕಮಿಟಿ ಇದೆ. ಯಡಿಯೂರಪ್ಪ ಅವರು ಈಗ ಕೇವಲ ಅಭಿಪ್ರಾಯ ಸಂಗ್ರಹಿಸಿ ಕೇಂದ್ರದ ವರಿಷ್ಟರಿಗೆ ವರದಿ ಸಲ್ಲಿಸಲಿದ್ದಾರೆ. ನಂತರ ಪಕ್ಷ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
