ಬೆಂಗಳೂರು:
ಟ್ರ್ಯಾಕ್ಟರ್, ವಾಹನ ಇರುವ ರೈತರು ಬಿಪಿಎಲ್ ಕಾರ್ಡ್ಗಳನ್ನು ಹಿಂದಿರುಗಿಸಬೇಕು, ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎನ್ನುವ ಸಿಎಂ ಯಡಿಯೂರಪ್ಪ ಅವರ ಸೂಚನೆ ಮೂರ್ಖತನದಿಂದ ಕೂಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ರೈತರ ಪರವಾಗಿ ಸರ್ಕಾರ ನಡೆಸುವೆನೆಂದ ಯಡಿಯೂರಪ್ಪ ಅವರ ನಿಲುವಿನ ವಿರುದ್ಧ ಕಿಡಿ ಕಾರಿರುವ ಕುಮಾರಸ್ವಾಮಿ ಈ ಸಂಬಂಧ ಸರಣಿ ಟ್ವೀಟ್ ಮಾಡಿದ್ದಾರೆ.
“ರೈತರಿಗೆ ಬಿಪಿಎಲ್ ಕಾರ್ಡ್ ಹಿಂದಿರುಗಿಸಲು ಹೇಳಿರುವ ಸರ್ಕಾರ ಅದಕ್ಕೆ ಟ್ರ್ಯಾಕ್ಟರ್, ವಾಹನಗಳನ್ನು ಮಾನದಂಡ ಮಾಡಿದೆ. ವೈಜ್ಞಾನಿಕ ಕೃಷಿ, ಟ್ರಾಕ್ಟರ್ ಖರೀದಿಗೆ ಪ್ರೋತ್ಸಾಹ ನೀಡುತ್ತಿರುವುದು ಸರ್ಕಾರಗಳೇ ಅಲ್ಲವೇ? ಟ್ರ್ಯಾಕ್ಟರ್ ಖರೀದಿಸಲು ಹೇಳಿ, ಅದನ್ನೇ ಮುಂದಿಟ್ಟು ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವುದು ಮೂರ್ಖತನವಲ್ಲವೇ?
“ಇಂದಿನ ಪೈಪೋಟಿ ಯುಗದಲ್ಲಿ ಕೃಷಿಕ ಯಂತ್ರ, ವಾಹನಗಳನ್ನು ಹೊಂದುವುದು ಅಗತ್ಯ. ಸರ್ಕಾರ ಅದಕ್ಕೆ ಪ್ರೋತ್ಸಾಹ ನೀಡಬೇಕು. ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವ ಬೆದರಿಕೆಯೊಡ್ಡಬಾರದು. ಬಿಪಿಎಲ್ ಕಾರ್ಡ್ ಈಗ ಕೇವಲ ಪಡಿತರಕ್ಕೆ ಮಾತ್ರ ಸೀಮಿತವಲ್ಲ. ಹಲವು ಸವಲತ್ತು, ಸೌಲಭ್ಯಗಳಿಗೆ ಬಿಪಿಎಲ್ ಕಾರ್ಡೇ ಆಧಾರ ಎಂಬುದು ಸರ್ಕಾರದ ಗಮನದಲ್ಲಿರಲಿ.
“ಅರ್ಹ ಫಲಾನುಭವಿಗಳಿಗೆ ಸವಲತ್ತು ಸಿಗಬೇಕು. ಅದಕ್ಕಾಗಿ ರೈತರ ಅನ್ನದ ತಟ್ಟೆಗೆ ಕೈ ಹಾಕಬಾರದು. ಸಾರ್ವಜನಿಕ ಪಡಿತರ ವಿತರಣೆ ವ್ಯವಸ್ಥೆಯಲ್ಲಿ ದೋಷಗಳಿವೆ. ಪಟ್ಟಭದ್ರ ಹಿತಾಸಕ್ತಿಗಳಿವೆ. ಅದನ್ನು ಮೊದಲು ಹೋಗಲಾಡಿಸಬೇಕು. ಸರ್ಕಾರ ಅದರತ್ತ ಗಮನ ಹರಿಸಲಿ. ಮಾತಿಗೆ ಮೊದಲು ರೈತರ ಕೊರಳು ಹಿಂಡುವ ತನ್ನ ಎಂದಿನ ಅಭ್ಯಾಸವನ್ನು ಸರ್ಕಾರ ತೊರೆಯಲಿ.” ಕುಮಾರಸ್ವಾಮಿ ಟ್ವೀಟ್ ಮಾಡಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಇತ್ತೀಚೆಗೆ ನಡೆದಿದ್ದ ಆಹಾರ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ್ದ ಸಿಎಂ ಯಡಿಯೂರಪ್ಪ “ಸರ್ಕಾರಿ ನೌಕರರು, ಟ್ರಾಕ್ಟರ್ ಹಾಗೂ ಇತರೆ ವಾಹನ ಮಾಲೀಕರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಅದನ್ನು ತಕ್ಷಣ ಹಿಂತಿರುಗಿಸಬೇಕು. ಇಲ್ಲವೇ ಕಾನೂನು ಕ್ರಮ ಜರುಗಿಸಲಾಗುತ್ತದೆ” ಎಂದಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
