ಬೆಂಗಳೂರು
ಬೆಂಗಳೂರು ದಕ್ಷಿಣ ವಲಯದಲ್ಲಿ ಕೋವಿಡ್ ರೋಗಿಗಳ ಅನುಕೂಲಕ್ಕಾಗಿ ಆ್ಯಪ್ ಅಭಿವೃದ್ಧಿಪಡಿಸಲಾಗುತ್ತಿದ್ದು, ಈ ಆ್ಯಪ್ ಮೂಲಕ ರೋಗಿಗಳು ವೈದ್ಯರನ್ನು ಸಂಪರ್ಕ ಮಾಡಬಹುದು. ಹೀಗೆ ಮಾಡಿದಲ್ಲಿ ವೈದ್ಯರಿಂದ ಅಗತ್ಯ ಚಿಕಿತ್ಸೆ ನೀಡುವ ಸೌಲಭ್ಯವನ್ನು ಒದಗಿಸಲಾಗುವುದು ಎಂದು ಬೆಂಗಳೂರು ದಕ್ಷಿಣ ವಲಯ ಕೋವಿಡ್ ಉಸ್ತುವಾರಿ ಹೊಂದಿರುವ ಸಚಿವ ಆರ್.ಅಶೋಕ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳು ಕೊರೊನಾ ಚಿಕಿತ್ಸೆಗೆ ನಿರಾಕರಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ 8 ಆಸ್ಪತ್ರೆಗಳಿಗೆ ನೋಟಿಸ್ ನೀಡಿ ಓಪಿಡಿ ಮುಚ್ಚಲು ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಆಸ್ಪತ್ರೆಗಳನ್ನು ಸಂಪೂರ್ಣ ಸರ್ಕಾರದ ವಶಕ್ಕೆ ಪಡೆದುಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದರು.
ವೈದ್ಯರು ಕೊರೊನಾ ವಾರಿಯರ್ಸ್ ಎಂದು ಕರೆಯಿಸಿಕೊಂಡವರು. ಹೀಗೆ ಕರೆಯಿಸಿಕೊಂಡ ಮೇಲೆ ನೆಪ ಹೇಳಿ ಕರ್ತವ್ಯದಿಂದ ತಪ್ಪಿಸಿಕೊಳ್ಳುವ ಕೆಲಸ ಮಾಡಬಾರದು. ವೈದ್ಯರು ಮತ್ತು ನರ್ಸ್ ಕಡ್ಡಾಯವಾಗಿ ತಮ್ಮ ಜವಾಬ್ದಾರಿ ನಿಭಾಯಿಸಬೇಕು. ಜವಾಬ್ದಾರಿಯಿಂದ ನುಣುಚಿಕೊಳ್ಳುವವರ ವಿರುದ್ಧವೂ ಕ್ರಮ ಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ನಮ್ಮ ನಾಯಕರು. ಸಾಮಾನ್ಯವಾಗಿ ಸರ್ಕಾರ ಒಂದು ವರ್ಷ ಪೂರೈಸಿದಾಗ ಮುಖ್ಯಮಂತ್ರಿ ದೆಹಲಿಗೆ ಹೋಗಿ ಶುಭಾಶಯ ಕೋರುವುದು ಸಂಪ್ರದಾಯ. ಆದರೆ ಕೊರೊನಾ ಇರುವುದರಿಂದ ಯಡಿಯೂರಪ್ಪ ಈಗ ದೆಹಲಿಗೆ ಹೋಗಲು ಸಾಧ್ಯವಾಗಿಲ್ಲ. ನಮ್ಮಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆ ಇಲ್ಲ. ನಾವು ಯಡಿಯೂರಪ್ಪ ಪರ, ಅವರೇ ನಮ್ಮ ನಾಯಕರು ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/05/14BGASHOK.gif)