ಬೆಂಗಳೂರು
ವಿಧಾನಸಭೆ ಕಾರ್ಯದರ್ಶಿ ಎಸ್. ಮೂರ್ತಿ ಅವರನ್ನು ಮೂರು ವಾರದೊಳಗೆ ಮರು ನೇಮಕ ಮಾಡಬೇಕು ಎಂದು ಹೈಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದೆ. ಎಸ್. ಮೂರ್ತಿ ಅವರನ್ನು ಅಮಾನತುಗೊಳಿಸಲಾಗಿತ್ತು.ಅಮಾನತು ಆದೇಶವನ್ನು ಪ್ರಶ್ನಿಸಿ ಎಸ್. ಮೂರ್ತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಗುರುವಾರ ತೀರ್ಪು ನೀಡಿದೆ. ನ್ಯಾಯಮೂರ್ತಿ ಪಿ. ಬಿ. ಭಜಂತ್ರಿ ಅವರಿದ್ದ ಏಕಸದಸ್ಯ ಪೀಠ ಮರು ನೇಮಕ ಮಾಡುವಂತೆ ಸೂಚಿಸಿದೆ.
ಎಸ್. ಮೂರ್ತಿ ಅವರನ್ನು ಅಮಾನತುಗೊಳಿಸಿ ವಿಧಾನಸಭೆ ವಿಶೇಷ ಮಂಡಳಿ ಹೊರಡಿಸಿರುವ ಆದೇಶ ನಿಯಮಕ್ಕೆ ಅನುಗುಣವಾಗಿಲ್ಲ. ಆದ್ದರಿಂದ, ಶಿಸ್ತುಕ್ರಮ ವಿಚಾರಣಾ ಸಮಿತಿಯ ಅಂತಿಮ ಫಲಿತಾಂಶಕ್ಕೆ ಒಳಪಟ್ಟು ಮೂರು ವಾರದಲ್ಲಿ ಮರು ನೇಮಕ ಮಾಡಿ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 2016-17ನೇ ಸಾಲಿನಲ್ಲಿ ನಡೆದ ವಿಧಾನಮಂಡಲ ಚಳಿಗಾಲದ ಅಧಿವೇಶನದ ವೇಳೆ ದುಂದು ವೆಚ್ಚ ಮಾಡಲಾಗಿದೆ ಎಂಬ ಆರೋಪದ ಮೇಲೆ ಎಸ್. ಮೂರ್ತಿ ಅವರನ್ನು ಅಮಾನತು ಮಾಡಲಾಗಿತ್ತು.
ಕರ್ನಾಟಕ ಹೈಕೋರ್ಟ್ ಆದೇಶದ ಬಳಿಕ ಗುರುವಾರ ಕರ್ನಾಟಕ ಸರ್ಕಾರ ವಿಧಾನಸಭೆ ಕಾರ್ಯದರ್ಶಿಯಾಗಿ ಎಸ್. ಮೂರ್ತಿ ಅವರನ್ನು ಪುನಃ ನೇಮಕ ಮಾಡಿದೆ. ವಿಶಾಲಾಕ್ಷಿ ಅವರು ಇಷ್ಟು ದಿನ ಉಸ್ತುವಾರಿ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.
![](https://prajapragathi.com/wp-content/uploads/2020/07/murthy.gif)