ತುಮಕೂರು
ಹಿಂದುಳಿದ ವರ್ಗಗಳ ಅಭಿವೃದ್ಧಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಹೊರ ಗುತ್ತಿಗೆ ಸಿಬ್ಬಂದಿ ಮತ್ತು ಅಡುಗೆ/ಸಹಾಯಕರಿಗೆ ಕೂಡಲೇ 6 ತಿಂಗಳ ವೇತನವನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಡಾ. ಬಿ.ಆರ್. ಅಂಬೇಡ್ಕರ್ ದಲಿತ ಸಮಿತಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಇಲ್ಲಿನ ಬಿಸಿಎಂ ಇಲಾಖೆ ಕಚೇರಿ ಮುಂದೆ ಜಮಾಯಿಸಿದ ಸಮಿತಿಯ ಕಾರ್ಯಕರ್ತರು ಕೂಡಲೇ ಬಾಕಿ ಇರುವ 6 ತಿಂಗಳ ವೇತನವನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಇಲಾಖೆಯ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ಬಿಸಿಎಂ ಇಲಾಖೆ ವ್ಯಾಪ್ತಿಯ ಸುಮಾರು 95 ವಸತಿ ನಿಲಯಗಳಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಅಡುಗೆ ಸಿಬ್ಬಂದಿ, ಅಡುಗೆ ಸಹಾಯಕರು ಮತ್ತು ಕಾವಲುಗಾರರು 300ಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ಕಳೆದ 6 ತಿಂಗಳಿನಿಂದ ವೇತನ ನೀಡದೆ ಇರುವುದರಿಂದ ಅವರ ಬದುಕು ದುಸ್ತರವಾಗಿದೆ. ಕೂಡಲೇ ವೇತನ ಬಿಡುಗಡೆ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಜಿಲ್ಲೆಯ 10 ತಾಲ್ಲೂಕುಗಳಲ್ಲೂ ಬಿಸಿಎಂ ಇಲಾಖೆಯ ವಸತಿನಿಲಯಗಳಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಇಎಸ್ಐ, ಪಿಎಫ್ ಸೌಲಭ್ಯ ಸಹ ನೀಡುತ್ತಿಲ್ಲ. ಕೂಡಲೇ ಬಾಕಿ ಇರುವ ವೇತನ ಬಿಡುಗಡೆಯೊಂದಿಗೆ ಈ ಎಲ್ಲ ಸೌಲಭ್ಯಗಳನ್ನು ನೌಕರರಿಗೆ ಒದಗಿಸಬೇಕು ಎಂದು ಒತ್ತಾಯಿಸಿದರು.ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಇಲಾಖೆಯ ಕಚೇರಿ ಮುಂದೆ ಉಗ್ರ ಹೋರಾಟ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/09/BCM-office.gif)