ಮಧುಗಿರಿ
ವಿದ್ಯಾರ್ಥಿಗಳು ಚೆಸ್ ಆಟದಲ್ಲಿ ಭಾಗವಹಿಸುವುದರಿಂದ ಬೌದ್ಧಿಕ ಶಕ್ತಿ ವೃದ್ಧಿಯಾಗುವುದರ ಜೊತೆಗೆ ಜ್ಞಾನದ ವಿಕಾಸಕ್ಕೂ ಅನುಕೂಲವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಚೌಡಪ್ಪ ತಿಳಿಸಿದರು.
ಪಟ್ಟಣದ ಎಪಿಎಂಸಿ ಆವರಣದಲ್ಲಿ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಗುರುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಫ್ರೌಢಶಾಲಾ ಬಾಲಕ, ಬಾಲಕಿಯರ ಚೆಸ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು. ಉತ್ತಮ ಕ್ರೀಡಾಪಟುಗಳನ್ನು ನಿರ್ಮಾಣ ಮಾಡಬೇಕಾದುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಸರ್ಕಾರ ಶಿಕ್ಷಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿ ಗೊಳಿಸಿದೆ. ಕ್ರೀಡಾಪಟುಗಳು ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಉಪನಿರ್ದೇಶಕ ರವಿಶಂಕರ ರೆಡ್ಡಿ ಮಾತನಾಡಿ, ಚೆಸ್ ಸ್ಪರ್ಧೆಯಿಂದ ಮಕ್ಕಳಿಗೆ ಜ್ಞಾನ ವೃದ್ಧಿಯಾಗುತ್ತದೆ. ತೀರ್ಪುಗಾರರು ಪ್ರಾಮಾಣಿಕರಾಗಿ ತೀರ್ಪು ನೀಡಬೇಕು. ಪೋಷಕರು ತಮ್ಮ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ರೂಪಿಸಬೇಕು. ವಿದ್ಯಾರ್ಥಿಗಳು ಭವಿಷ್ಯದ ನಾಯಕರಾಗಿ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ತಿಳಿಸಿದರು.
ಮೂರು ದಿನಗಳ ಕಾಲ ನಡೆಯುವ ರಾಜ್ಯಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ 750 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮೊದಲ ದಿನದಂದು 14 ಮತ್ತು 17 ವರ್ಷ ಒಳಗಿನ ಬಾಲಕ ಮತ್ತು ಬಾಲಕಿಯರ ಮೂರು ಸುತ್ತಿನ ಚೆಸ್ ಪಂದ್ಯಾವಳಿಗಳು ಸಂಜೆ 4 ಘಂಟೆವರೆಗೆ ನಡೆದವು.
ಡಿ.ವೈ.ಪಿ.ಸಿ ರಾಜಕುಮಾರ್, ಎ.ಪಿ.ಎಂ.ಸಿ ಅಧ್ಯಕ್ಷ ಎಂ.ಬಿ.ಮರಿಯಣ್ಣ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಲಕ್ಷ್ಮೀನರಸಪ್ಪ, ಬಿಇಒ ನರಸಿಂಹಯ್ಯ, ಬಿಆರ್ಸಿ ಆನಂದ್ಕುಮಾರ್, ಎಪಿಎಂಸಿ ಕಾರ್ಯದರ್ಶಿ ರಾಜಣ್ಣ, ಬಸವರಾಜು, ಚಂದ್ರಕುಮಾರ, ಡಿ.ವೈ.ಪಿ.ಸಿ ಬಿ.ಪಿ.ನಾಗರಾಜು, ಪ್ರಭಾರ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಬಿ.ಎಸ್.ಹನುಮಂತರಾಯಪ್ಪ, ತಾಲ್ಲೂಕು ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟದ ಅಧ್ಯಕ್ಷ ಭಾಸ್ಕರ್ ರೆಡ್ಡಿ, ಪರಿವೀಕ್ಷಕರಾದ ಮೋಹನ್ ಕುಮಾರ್, ಚಿತ್ತಯ್ಯ, ಅಂತಾರಾಷ್ಟ್ರೀಯ ಕ್ರೀಡಾಪಟು ಆಂಜನೇಯಲು, ಟಿ.ಪಿ.ಓ. ಬಸವರಾಜು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
